ಗೋವಾದಲ್ಲಿ ಗೋಹತ್ಯೆ ಜಾರಿ ಮಾಡಿದರೆ ಅಲ್ಲಿರುವ ಕ್ರೈಸ್ತರು ಹೊಡೆಯುತ್ತಾರೆ-ಸಿ.ಎಂ.ಇಬ್ರಾಹಿಂ
ಹುಬ್ಬಳ್ಳಿ, ಡಿಸೆಂಬರ್4: ಗೋವನ್ನು ಅವ್ವ, ಮಾತೆ ಎನ್ನುವ ಬಿಜೆಪಿ ಗೋವಾದಲ್ಲಿ ಯಾಕೆ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿಲ್ಲ. ಗೋವಾದ ಗೋವು ಬಿಜೆಪಿಯವರಿಗೆ ಅವ್ವ ಅಲ್ಲವೇ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗೋವಾದಲ್ಲಿ ಗೋಹತ್ಯೆ ಜಾರಿ ಮಾಡಿದರೆ ಅಲ್ಲಿರುವ ಕ್ರೈಸ್ತರು ಹೊಡೆಯುತ್ತಾರೆ. ಗೋವಾದಿಂದ ದನದ ಮಾಂಸ ರಾಜ್ಯಕ್ಕೆ ಬರುತ್ತಿದೆ. ಅದನ್ನು ಯಾಕೆ ತಡೆಯುತ್ತಿಲ್ಲ ಎಂದು ಕಿಡಿಕಾರಿದರು.
ಚುನಾವಣೆ ಹತ್ತಿರ ಇರುವುದರಿಂದ ಸೋಲುವ ಭೀತಿಯಲ್ಲಿರುವ ಬಿಜೆಪಿ, ಗೋವು ಹಾಗೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧದ ಹೆಸರಿನಲ್ಲಿ ಮತ ಧೃವೀಕರಣ ಮಾಡಲು ಹೊರಟಿದೆ ಎಂದು ಸಿ.ಎಂ ಇಬ್ರಾಹಿಂ ಆರೋಪ ಮಾಡಿದರು.

ಜೆಡಿಎಸ್ಗೆ ಸಂಪೂರ್ಣ ಬಹುಮತ ಬಂದರೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಪಂಚರತ್ನ ಯಾತ್ರೆ ಮೂಲಕ ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಸ್ಪಷ್ಟಪಡಿಸಿದರು.
ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ಹುದ್ದೆಗೇರಿದರೆ ಮಾತ್ರ ಇಲ್ಲಿ ಯಾರು ಮುಖ್ಯಮಂತ್ರಿ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯೇತರ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ಮಾತು ಮುಂದುವರಿಸಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮತದಾರರಿಗೆ ಹಣ, ವಸ್ತುಗಳನ್ನು ಹಂಚುವ ವಿಷಯವನ್ನು ಜೆಡಿಎಸ್ ಗಂಭೀರವಾಗಿ ಪರಿಗಣಿಸಿದೆ. ಈ ವಿಷಯವನ್ನು ಪಕ್ಷ ನ್ಯಾಯಾಲಯಕ್ಕೆ ಕೊಂಡೊಯ್ಯಲಿದೆ. ಇಂತಹ ಆಮಿಷ ಪ್ರಕರಣಗಳನ್ನು ಪತ್ತೆ ಹಚ್ಚುವ ಸಲುವಾಗಿಯೇ ಬೆಂಗಳೂರಿನಲ್ಲಿ ವಾರ್ ರೂಂ ಆರಂಭಿಸಲಾಗಿದ್ದು, 400 ಯುವಕರು ಇದಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಿ.ಎಂ ಇಬ್ರಾಹಿಂ ತಿಳಿಸಿದರು.
ಇನ್ನು ಕೆಲವು ಕ್ಷೇತ್ರಗಳಲ್ಲಿ ಮುಖಂಡರು ತಾವೇ ಜೆಡಿಎಸ್ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಈವರೆಗೆ ಜೆಡಿಎಸ್ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿಲ್ಲ ಎಂದರು.
ಮಹಾರಾಷ್ಟ್ರದ ಗಡಿ ಖ್ಯಾತೆಯ ಬಗ್ಗೆ ಮಾತನಾಡಿದ ಅವರು, ಇದು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಬಿಜೆಪಿ ನಡುವೆ ನಡೆಯುತ್ತಿರುವ ಕುಸ್ತಿ. ಜನರಿಗೆ ಈ ಬಗ್ಗೆ ಚಿಂತೆ ಇಲ್ಲದಿದ್ದರೂ ರಾಜಕೀಯ ಕಾರಣಕ್ಕೆ ವಿವಾದ ಮಾಡಲಾಗುತ್ತಿದೆ. ಈ ವಿಷಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಹಾಯಕರಾಗಿದ್ದಾರೆ ಎಂದರು.












Click it and Unblock the Notifications