Congress vs Congress: ಪಕ್ಷದಲ್ಲಿದ್ದುಕೊಂಡು ದ್ರೋಹ ಎಸಗಿದವರ ಬಗ್ಗೆ ಮಾತನಾಡಿದ ಕಾಂಗ್ರೆಸ್ ಶಾಸಕ
ಹುಬ್ಬಳ್ಳಿ, ನವೆಂಬರ್, 01: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕೆಲವರು ವಿರೋಧಿಗಳ ಜೊತೆ ಕೈಜೋಡಿಸಿ ನನ್ನ ವಿರುದ್ಧ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿದ್ದುಕೊಂಡು ದ್ರೋಹ ಎಸಗಿದವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹುಬ್ಬಳ್ಳಿಯಲ್ಲಿ ಹೇಳಿದರು.
ಕಾಂಗ್ರೆಸ್ ಸೋಲಿಸಲು ಬೇರೆ ಪಕ್ಷದವರಿಗೆ ಸಾಧ್ಯವಿಲ್ಲ. ಆದರೆ, ಪಕ್ಷದವರಿಂದಲೇ ಸೋಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಹವರಿಗೆ ಪಕ್ಷದಲ್ಲಿ ಭವಿಷ್ಯ ಇಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯ ಸರ್ಕಾರ ಕೆಡವಲು ಭಾರತೀಯ ಜನತಾ ಪಕ್ಷ 50 ಕೋಟಿ ಕೊಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಜನರ ಮನ್ನಣೆ ಗಳಿಸಿ ಎಂದೂ ಅಧಿಕಾರಕ್ಕೆ ಬಂದಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಕಳೆದ 9 ವರ್ಷಗಳಲ್ಲಿ 11 ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಕರ್ನಾಟಕದಲ್ಲಿ ಅದು ನಡೆಯುವುದಿಲ್ಲ ಎಂದರು.
ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದರು. ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಮಾತ್ರ ಅನುದಾನ ನೀಡಲಾಗಿತ್ತು. ಹೀಗಾಗಿ ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿತ್ತು ಎಂದು ಹೇಳಿದರು. ಇನ್ನು ಕ್ಷೇತ್ರದಲ್ಲಿ 2 ಸಾವಿರ ಮನೆಗಳ ನಿರ್ಮಾಣ, ₹20 ಕೋಟಿ ವೆಚ್ಚದಲ್ಲಿ ಆಸ್ಪತ್ರೆ, ₹80 ಕೋಟಿ ವೆಚ್ಚದ ಒಳಚರಂಡಿ ಕಾಮಗಾರಿಗಳು ಅನುದಾನ ಕೊರತೆಯಿಂದ ನನೆಗುದಿಗೆ ಬಿದ್ದಿವೆ. ಈಗ ನಮ್ಮ ಸರ್ಕಾರ ಬಂದಿದ್ದು, ಡಿಸೆಂಬರ್ ನಂತರ ಅನುದಾನ ಕೊಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಅವುಗಳನ್ನು ಪೂರ್ಣಗೊಳಿಸಲಾಗುವುದು ಎಂದರು.
ದುರ್ಗದಬೈಲು, ಹಳೆ ಹುಬ್ಬಳ್ಳಿ ಮತ್ತು ಗಣೇಶಪೇಟೆ ಮಾರುಕಟ್ಟೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಮ್ಯಾದಾರ ಓಣಿಯಲ್ಲಿ ಡಯಾಲಿಸಿಸ್ ಸೆಂಟರ್ಗೆ ಕಟ್ಟಡ ನಿರ್ಮಿಸಲಾಗಿದೆ. ಅದನ್ನು ಶೀಘ್ರ ಆರಂಭಿಸಲಾಗವುದು ಎಂದು ತಿಳಿಸಿದರು. ಇನ್ನು ದಲಿತ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಕೈಗೊಳ್ಳುತ್ತಾರೆ. ಜನರ ಪರವಾಗಿ ಕೆಲಸ ಮಾಡಲು ಅವಕಾಶ ಇರುವ ನಿಗಮ ಮಂಡಳಿ ನೀಡುವಂತೆ ಕೇಳಿಕೊಂಡಿದ್ದೇನೆ ಎಂದರು.
ಕ್ಷೇತ್ರದಲ್ಲಿ ಸರಿಯಾದ ಯೋಜನೆ ಇಲ್ಲದೆ ನಾಲೆಗಳನ್ನು ನಿರ್ಮಿಸಲಾಗಿದೆ. ಕೆಲವೆಡೆ ರಾಜಕಾಲುವೆಗಳ ಮೇಲೆ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ನನ್ನ ಅವದಿಯಲ್ಲಿ ಅನುದಾನ ತಂದು ನಾಲೆಗೆ ತಡೆಗೋಡೆ ನಿರ್ಮಿಸಿದ್ದರಿಂದ ಮನೆಗಳಿಗೆ ನೀರು ನುಗ್ಗುವ ಸಮಸ್ಯೆ ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ರಾಜಕಾಲುವೆಗಳ ಜೊತೆಗೆ ಉಪ ಕಾಲುವೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.












Click it and Unblock the Notifications