ಬಿಜೆಪಿಯವರು ಜಾತಿ-ಧರ್ಮದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ-ಮಧು ಬಂಗಾರಪ್ಪ
ಹುಬ್ಬಳ್ಳಿ, ಡಿಸೆಂಬರ್ 13: 2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಜಟಾಪಟಿ ಜೋರಾಗಿದೆ. ಈಗಾಗಲೇ ಎರಡೂ ಪಕ್ಷಗಳು ಜನರನ್ನು ತಲುಪುವ ಸಲುವಾಗಿ ಸಮಾವೇಶ ಕಾರ್ಯಕ್ರಮಗಳನ್ನು ನಡೆಸುತ್ತಿದೆ.
ರಾಜ್ಯದ ಅನೇಕ ಕಡೆಗಳಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ನಡೆಸುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಲೇವಡಿ ಮಾಡಿದ್ದಾರೆ.
ಬಿಜೆಪಿಯವರು ಭ್ರಷ್ಟಾಚಾರದ ಹಣದಿಂದ ಸಮಾವೇಶ ಮಾಡಿ ಜನರಿಗೆ ಬಿರಿಯಾನಿ ಊಟ ಹಾಕಿಸುತ್ತಿದ್ದಾರೆ. ಆದರೆ ಜನರು ಬಿರಿಯಾನಿ ತಿಂದು ಎದ್ದು ಹೋಗುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಸಮಾವೇಶದಲ್ಲಿ ಜನರು ಬಿರಿಯಾನಿ ತಿಂದು ಎದ್ದು ಹೋಗುತ್ತಿದ್ದಾರೆ. ಆಮೇಲೆ ಬಿಜೆಪಿಯವರು ಖಾಲಿ ಕುರ್ಚಿಗೆ ಭಾಷಣ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು, ಮಹಿಳೆಯರ ಕಣ್ಣೀರು ಒರೆಸುತ್ತೇವೆ ಎಂದು ಉಚಿತವಾಗಿ ಗ್ಯಾಸ್ ಸಿಲಿಂಡರ್ ಕೊಟ್ಟರು, ತದನಂತರ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಿಸಿದ್ದಾರೆ. ಕಿಸಾನ್ ಸಮ್ಮಾನ ಹೆಸರಿನಲ್ಲಿ ರೈತರಿಗೆ ಎಕರೆಗೆ 6,000 ರೂಪಾಯಿ ಹಣ ಕೊಟ್ಟು ಬೇರೆಡೆಯಿಂದ 60,000 ರೂಪಾಯಿ ಹಣ ಪಡೆದಿದ್ದಾರೆ. ಇದೀಗ ವಿದ್ಯುತ್ ಖಾಸಗೀಕರಣಗೊಳಿಸಿ ರೈತರಿಗೆ ಕೊಡುವ ಉಚಿತ ವಿದ್ಯುತ್ ಅನ್ನು ಹೊಡೆಯುವ ಹುನ್ನಾರ ನಡೆಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ಇನ್ನು ಕಾಂಗ್ರೆಸ್ ಪಕ್ಷ ವಿಶೇಷವಾಗಿ ಹಿಂದೂಳಿದ ಜನರ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ರೂಪಿಸುತ್ತದೆ. ಅದೇ ಬಿಜೆಪಿ ಜಾತಿ ಧರ್ಮದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಜನರು ಬೇಸತ್ತು ಹೋಗಿದ್ದು, ಬದಲಾವಣೆ ಬಯಸಿದ್ದಾರೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ ಎಂದು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಭರವಸೆ ವ್ಯಕ್ತಪಡಿಸಿದರು.












Click it and Unblock the Notifications