2018ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಎಸ್ ಆರ್ ಪಾಟೀಲ್
ಹುಬ್ಬಳ್ಳಿ, ಜುಲೈ 10 : ಮುಂಬರುವ 2018ರ ವಿಧಾನಸಭಾ ಚುನಾವಣೆಯನ್ನು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಎದುರಿಸುತ್ತೇವೆ. ಅಲ್ಲದೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್. ಆರ್. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿಯಿದೆ. ಹೀಗಾಗಿ ಈ ಭಾಗದಲ್ಲಿ ಕಾಂಗ್ರೆಸ್ ಗೆ ಮುಂಬರುವ ವಿಧಾನಸಭೆ ಚುನಾವಣೆಗೆ ಉತ್ತಮ ಬೆಂಬಲ ವ್ಯಕ್ತವಾಗಲಿದೆ" ಎಂದು ಹೇಳಿದರು.

ಅವಧಿ ಪೂರ್ವ ಚುನಾವಣೆ ನಡೆಯಲಿದೆ ಎಂಬ ಮಾಜಿ ಪ್ರಧಾನಿ ದೇವೆಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯರೂ ಆಗಿರುವ ಎಸ್.ಆರ್.ಪಾಟೀಲ್, ಅವಧಿ ಪೂರ್ವ ಚುನಾವಣೆ ಕೇವಲ ಗಾಳಿ ಸುದ್ದಿಯಾಗಿದ್ದು, ಯಾವುದೇ ಕಾರಣಕ್ಕೂ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ. ದೇವೆಗೌಡರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಳಕಳಿ ಇದ್ದರೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಬೇಕು. ಒಂದು ವೇಳೆ ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡದಿದ್ದರೆ ರಾಜ್ಯದ ಬಿಜೆಪಿ ಸಂಸದರು ಲೋಕಸಭೆಗೆ ಮುತ್ತಿಗೆ ಹಾಕುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬಂದಿದೆ. ಸಾಮರಸ್ಯವನ್ನು ಕದಡುವ ಯಾರೇ ಆಗಲಿ ರಾಜ್ಯ ಸರ್ಕಾರ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.












Click it and Unblock the Notifications