ಕೋವಿಡ್ ಆತಂಕ: ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಚಿಂತನೆ ಇಲ್ಲ: ಹುಬ್ಬಳ್ಳಿಯಲ್ಲಿ ಸುಧಾಕರ್ ಸ್ಪಷ್ಟನೆ
ಹುಬ್ಬಳ್ಳಿ, ಡಿಸೆಂಬರ್, 28: ವಿದೇಶದಗಳಲ್ಲಿ ಮಹಾಮಾರಿ ಕೊರೊನಾ ಮತ್ತೆ ರಣಕೇಕೆ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೈಗೊಂಡ "ಮಾಕ್ ಡ್ರಿಲ್" ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪರಿಶೀಲನೆ ನಡೆಸಿದರು. ಜನರು ಸರ್ಕಾರದ ಕ್ರಮಗಳೊಂದಿಗೆ ಕೈ ಜೋಡಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್ ಲಸಿಕೆ ಲಭ್ಯವಿದ್ದು, ಎಲ್ಲರೂ 3ನೇ ಡೋಸ್ ಪಡೆಯಬೇಕು ಎಂದು ಸಚಿವರು ಹುಬ್ಬಳ್ಳಿಯಲ್ಲಿ ಮನವಿ ಮಾಡಿದರು. ಹಾಗೆಯೇ ರಾಜ್ಯದಲ್ಲಿ ಯಾವುದೇ ಆರ್ಥಿಕ ಚಟುವಟಿಕೆಗಳಿಗೂ ನಿರ್ಬಂಧ ಹೇರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಹುಬ್ಬಳ್ಳಿ ಮೆಡಿಕಲ್ ಕಾಲೇಜಿನಲ್ಲಿ ಮಾತನಾಡಿದ ಸಚಿವರು, ಕೋವಿಡ್ನ ಬಿಎಫ್ 7 ವೈರಸ್ ಕೂಡ ಓಮೈಕ್ರಾನ್ನ ಮತ್ತೊಂದು ರೂಪವಾಗಿದೆ. ಹೊಸ ವೈರಾಣು ವೇಗವಾಗಿ ಹರಡಿದರೂ ರೋಗದ ತೀವ್ರತೆ ಇಲ್ಲ. ವಿವಿಧ ಅನಾರೋಗ್ಯಗಳಿಗೆ ಒಳಗಾದವರಲ್ಲಿ ಮಾತ್ರ ರೋಗದ ತೀವ್ರತೆ ಕಂಡುಬಂದಿದೆ ಎಂದು ಹೊರ ದೇಶಗಳಲ್ಲಿ ವರದಿಯಾಗಿದೆ. ಇದಕ್ಕಾಗಿಯೇ ಮಾರ್ಗಸೂಚಿಯಲ್ಲಿ ಅಂತಹ ವರ್ಗದವರಿಗೆ ಎಚ್ಚರ ನೀಡಲಾಗಿದೆ ಎಂದರು. ಜನಸಂದಣಿ ಹೆಚ್ಚಿರುವ ಪ್ರದೇಶಕ್ಕೆ ಹೋಗಬಾರದು ಎಂದು ಸೂಚನೆ ನೀಡಲಾಗಿದೆ. ಹಾಗೆಯೇ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಎಚ್ಚರ ವಹಿಸಲಾಗಿದೆ ಎಂದರು.

ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು
ಪ್ರತಿ ಆಸ್ಪತ್ರೆಗಳಲ್ಲಿ 50-60 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಹುಬ್ಬಳ್ಳಿಯ ಕಿಮ್ಸ್ನಲ್ಲಿ 200 ವೆಂಟಿಲೇಟರ್ಗಳು, ಪರಿಣಿತ ವೈದ್ಯರ ತಂಡ, ಸಿಬ್ಬಂದಿ ಇದ್ದಾರೆ. ಔಷಧಿಯ ದಾಸ್ತಾನು ಕೂಡ ಇದೆ. 40 ಕೆಎಲ್ನ ಎರಡು ಟ್ಯಾಂಕ್ಗಳಿವೆ. ಒಂದನೇ ಮತ್ತು ಎರಡನೇ ಕೋವಿಡ್ ಅಲೆಯ ವೇಳೆ ಕಿಮ್ಸ್ ಆಸ್ಪತ್ರೆ ಬಹಳ ಯಶಸ್ವಿಯಾಗಿ ಕೆಲಸ ಮಾಡಿದೆ. ಇನ್ನು ಮುಂದೆಯೂ ಜನರಿಗೆ ಉತ್ತಮ ಸೇವೆ ನೀಡಲಿದೆ ಎಂದರು. ಸರ್ಕಾರ ಟಫ್ ರೂಲ್ಸ್ಗಳನ್ನು ಮಾಡುವ ಬದಲು ಜನರು ಟಫ್ ಮೈಂಡೆಡ್ ಆಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಜನರನ್ನು ರಕ್ಷಣೆ ಮಾಡಲು ಈಗಾಗಲೇ ಸರ್ಕಾರ ದೃಢಸಂಕಲ್ಪ ಮಾಡಿದೆ. ಅದೇ ರೀತಿ, ಜನರು ಕೂಡ ರೋಗವನ್ನು ಎದುರಿಸುವ ದೃಢ ಸಂಕಲ್ಪ ಮಾಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಸಚಿವರು ಕಿವಿಮಾತು ಹೇಳಿದರು.

ಜಿಲ್ಲೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ವ್ಯವಸ್ಥೆ
ವಿದೇಶದಿಂದ ಬರುವವರನ್ನು ವಿಮಾನ ನಿಲ್ದಾಣದಲ್ಲಿ ರ್ಯಾಂಡಮ್ ಪರೀಕ್ಷೆ ಮಾಡಲಾಗುತ್ತಿದೆ. ಎರಡು-ಮೂರು ದಿನಗಳಲ್ಲಿ ಹೆಚ್ಚು ಪ್ರಕರಣ ಕಂಡುಬಂದರೆ ನಿರ್ದಿಷ್ಟ ದೇಶಗಳ ಪ್ರಯಾಣಿಕರಿಗೆ ಪರೀಕ್ಷೆ ಮಾಡಲಾಗುವುದು ಎಂದರು. ಹಾಗೆಯೇ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಮಾತನಾಡಿದ ಸಚಿವರು, ಇಲ್ಲಿ ಆರೋಗ್ಯ ಸಿಬ್ಬಂದಿ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಿದ್ದರೂ, ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ನಮ್ಮ ಸಿಬ್ಬಂದಿ ಮಾಡಲಿದ್ದಾರೆ. ಕೋವಿಡ್ ಚಿಕಿತ್ಸೆಗೆ ಪೂರಕವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಯಾವೆಲ್ಲ ರೀತಿಯ ಕ್ರಮ ವಹಿಸಬೇಕೆಂದು ಪರಿಶೀಲಿಸಿ ಸೂಚಿಸಲಾಗುವುದು ಎಂದರು.

ಯಾರನ್ನೂ ಕೆಲಸದಿಂದ ತೆಗೆದುಹಾಕಿಲ್ಲ
ಕಳೆದ ಎರಡು ವರ್ಷಗಳಲ್ಲಿ 10 ಸಾವಿರಕ್ಕೂ ಅಧಿಕ ಸಿಬ್ಬಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಈಗ ಅಂತಹ ಅಗತ್ಯ ಇಲ್ಲ. ಆದರೆ ಸೋಂಕಿತರ ಸಂಖ್ಯೆ ಹೆಚ್ಚಾದರೆ ತಾತ್ಕಾಲಿಕವಾಗಿ ಸಿಬ್ಬಂದಿಯನ್ನು ನೇಮಿಸಲಾಗುವುದು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಅನೇಕ ಸಿಬ್ಬಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದೆ. ಆದರೆ ಅವರನ್ನು ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲ. ಆದರೆ ಯಾರನ್ನೂ ಕೆಲಸದಿಂದ ತೆಗೆದುಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

ಮೂರನೇ ಡೋಸ್ ಪಡೆಯುವಂತೆ ಸೂಚನೆ
ರಾಜ್ಯದಲ್ಲಿ ಯಾವುದೇ ಚಟುವಟಿಕೆಗೆ ನಿರ್ಬಂಧ ವಿಧಿಸಿಲ್ಲ. ಆದರೆ ಮಾಸ್ಕ್ ಧರಿಸುವುದು, ಮೂರನೇ ಡೋಸ್ ಪಡೆಯುವುದು, ಒಳಾಂಗಣ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳುವುದು ಮೊದಲಾದ ಕ್ರಮಗಳಿಗೆ ಸೂಚನೆ ನೀಡಲಾಗಿದೆ. ಈಗ ದೇಶದಲ್ಲಿ ಆರ್ಥಿಕ ಪುನಶ್ಚೇತನ ಆಗುತ್ತಿದೆ. ಆದ್ದರಿಂದ ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಯಾವುದೇ ಚಿಂತನೆ ಇಲ್ಲ. ಜೀವವೂ ಮುಖ್ಯ ಹಾಗೂ ಜೀವನವೂ ಮುಖ್ಯವಾಗುವಂತೆ ಕ್ರಮ ವಹಿಸಲಾಗುತ್ತಿದೆ ಎಂದರು. ಹಾಗೆಯೇ ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್ ಕೋವಿಡ್ ಲಸಿಕೆ ಲಭ್ಯವಿದೆ. ಇನ್ನೂ 20-25 ಲಕ್ಷ ಡೋಸ್ ತರಿಸಲಾಗುವುದು. ಕೇಂದ್ರ ಸರ್ಕಾರ ಲಸಿಕೆ ನೀಡಲು ತಯಾರಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಲಸಿಕಾಕರಣದ ಪ್ರಮಾಣ ಹೆಚ್ಚಿಸಲಾಗುವುದು.

ಒಂದಿಂಚು ಭೂಮಿಯನ್ನೂ ನೀಡುವುದಿಲ್ಲ
ಮಹಾರಾಷ್ಟ್ರದ ಜನರು ನಮ್ಮ ಸಹೋದರ, ಸಹೋದರಿಯರಾಗಿದ್ದಾರೆ. ಮಹಾಜನ್ ವರದಿ ಕೂಡ ಎಲ್ಲವನ್ನೂ ಸ್ಪಷ್ಪಡಿಸಿದೆ. ನಾವೆಲ್ಲರೂ ಮೊದಲು ಭಾರತೀಯರು, ನಂತರ ವಿವಿಧ ರಾಜ್ಯದವರು. ನೆರೆಯ ರಾಜ್ಯಗಳ ಜನರು ಈಗ ಪ್ರೀತಿ, ವಿಶ್ವಾಸದಿಂದ ಇರುವಾಗ ರಾಜಕೀಯ ಹೇಳಿಕೆಯಿಂದ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಮಹಾರಾಷ್ಟ್ರದ ಕೆಲವು ರಾಜಕೀಯ ಮುಖಂಡರ ಹೇಳಿಕೆಯಿಂದ ಜನರ ನಡುವೆ ಬಾಂಧವ್ಯ ಹಾಳಾಗುವ ಅಪಾಯವಿದೆ. ಇಂತಹ ಹೇಳಿಕೆಗೆ ಕಾನೂನಿನ ಮಾನ್ಯತೆ ಇಲ್ಲ. ಕರ್ನಾಟಕವು ಯಾವುದೇ ರಾಜ್ಯಕ್ಕೆ ಒಂದಿಂಚು ಭೂಮಿಯನ್ನೂ ನೀಡುವುದಿಲ್ಲ ಎಂದು ಸಚಿವರು ಹೇಳಿದರು.
ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಅವರು ಬಹಳ ಜ್ಯೋತಿಷ್ಯ ಶಾಸ್ತ್ರ ಕೇಳುತ್ತಾರೆ. ಆದರೆ ಈಗ ಅವರೇ ಭವಿಷ್ಯ ನುಡಿಯುತ್ತಿದ್ದಾರೆ. ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ಹಾಗೆಯೇ, ವಿರೋಧ ಪಕ್ಷದ ನಾಯಕರೂ ಪಾದಯಾತ್ರೆ ಮಾಡಲಿ, ನಮಗೇನೂ ಅಭ್ಯಂತರವಿಲ್ಲ. 5 ವರ್ಷ ಆಡಳಿತ ಮಾಡಿದವರು ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಇದ್ದವರು ಮಹಾದಾಯಿ ಯೋಜನೆಗಾಗಿ ಏನು ಮಾಡಿದ್ದಾರೆಂದು ಸ್ಪಷ್ಟನೆ ನೀಡಲಿ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications