ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆ
ಹುಬ್ಬಳ್ಳಿ, ಅಕ್ಟೋಬರ್, 17 : ಕರ್ನಾಟಕ ಏಕೀಕರಣವಾಗಿ ಈಗ 60 ವರ್ಷಗಳು ಸಂದಿವೆ. ಇದರಿಂದ ವಿಶೇಷ ಅಧಿವೇಶನ ನಡೆಸಿ ಹಿಂದುಳಿದ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚಿಸಬೇಕು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
ಅವರು ಭಾನುವಾರ ನಗರದಲ್ಲಿ ನಾಡೋಜ ಡಾ.ಪಾಟೀಲ ಪುಟ್ಟಪ್ಪನವರ ಆರೋಗ್ಯ ವಿಚಾರಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕಾದರೆ ನಂಜುಂಡಪ್ಪ ವರದಿ ಅನುಷ್ಠಾನಗೊಳಿಸಬೇಕು. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಪ್ರಾದೇಶಿಕ ಅಸಮಾನತೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿ ಅಧಿವೇಶನ ನಡೆಸಬೇಕು ಹೊರತು ಕಾಟಾಚಾರಕ್ಕಲ್ಲ ಎಂದರು. ಮಹದಾಯಿ ಯೋಜನೆ ಮತ್ತು ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಪಕ್ಷಾತೀತವಾಗಿ ಹೋರಾಟ ಮಾಡಿದರೆ ಮಾತ್ರ ನಮಗೆ ಜಯ ಸಿಗುವುದು ಎಂದು ವಾಟಾಳ್ ಹೇಳಿದರು.
ನೀರಿನ ವಿಷಯದಲ್ಲಿ ಎಲ್ಲ ಪಕ್ಷಗಳ ರಾಜಕಾರಣಿಗಳು ಪಕ್ಷಭೇದ ಮರೆತು ಹೋರಾಟ ಮಾಡಬೇಕು ಹಾಗೂ ರಾಜ್ಯದ ಸಂಸದರು ಸಂಸತ್ ನಲ್ಲಿ ಕರ್ನಾಟಕದ ಪರ ಹೋರಾಟ ಮಾಡಬೇಕು.

ಇನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಲ್ಲು ಕಿತ್ತ ಹಾವಿನಂತಾಗಿದ್ದು ಅದು ಇದ್ದೂ ಇಲ್ಲದಂತಾಗಿದೆ. ರಾಜ್ಯ ಸರಕಾರ ಕಸಾಪ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು. ರಾಜ್ಯದ ಹೊರಗಿರುವ ಕನ್ನಡಿಗರ ಅಭಿವೃದ್ಧಿಗೆ ಮುಂದಾಗಬೇಕು ಎಂದರು.












Click it and Unblock the Notifications