ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿಗಾಗಿ ಹಾಹಾಕಾರ: ಧಾರವಾಡದಲ್ಲಿ ತಡರಾತ್ರಿ ಬೀದಿಗಿಳಿದು ಆಕ್ರೋಶ
ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಧಾರವಾಡದ ಕೇಲಗೇರಿ ಸ್ಥಳೀಯರು ತಡರಾತ್ರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ, ಮಾರ್ಚ್ 21: ನಗರದ ಕೇಲಗೇರಿ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ತಡರಾತ್ರಿ ರಸ್ತೆ ಸಂಚಾರ ಸ್ಥಗಿತಗೊಳಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಬೇಸಿಗೆ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ ಆರಂಭವಾಗಿದ್ದು, ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಮೊದಲು ವಾರಕ್ಕೊಮ್ಮೆ ಬರುತ್ತಿದ್ದ ನೀರು ಈಗ 16 ದಿನಗಳಿಗೊಮ್ಮೆ, ಒಂದೊಂದು ಕಡೆ ತಿಂಗಳಿಗೊಮ್ಮೆ ಬರುವಂತಾಗಿದೆ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಪ್ರತಿಭಟನಕಾರರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕುಡಿಯಲು ನೀರು ಸರಬರಾಜು ಮಾಡುವವರೆಗೂ ರಸ್ತೆ ತಡೆ ನಡೆಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು.
ಸಾರ್ವಜನಿಕರು ಪಿಬಿ ರಸ್ತೆಯ ಮೇಲೆ ಕುಳಿತು ರಸ್ತೆ ತಡೆ ಮಾಡಿದ್ದರಿಂದ ರಸ್ತೆ ಸಂಚಾರಕ್ಕೆ ತಡೆ ಉಂಟಾಯಿತು. ಅದರಿಂದಾಗಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ನೂರಾರು ವಾಹನಗಳು ರಸ್ತೆಯ ಮೇಲೆ ಕಾದು ನಿಂತಿದ್ದು, ವಾಹನ ದಟ್ಟಣ ಹೆಚ್ಚಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು.
ಪೊಲೀಸರ ಮನವಿಗೆ ಸ್ಪಂದಿಸದ ಪ್ರತಿಭಟನಾಕಾರರು, ನೀರು ಬಿಡುವವರೆಗೂ ರಸ್ತೆತಡೆ ನಡೆಸುವುದಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದರು. ಈಗ ತಾನೆ ಬೇಸಿಗೆ ಆರಂಭವಾಗಿದ್ದು ಜನರು ಕುಡಿಯುವ ನೀರಿಗೆ ಪರದಾಡು ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಕಾರಣ ಖಾಸಗಿ ಕಂಪನಿ.

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ಜಲಮಂಡಳಿಯಿಂದ ಖಾಸಗಿ ಎಲ್ ಆ್ಯಂಡ್ ಟಿ ಕಂಪನಿಗೆ ನೀಡಿ ಪಾಲಿಕೆ ಕೈತೊಳೆದುಕೊಂಡಿತ್ತು. ಈ ಪ್ರಕ್ರಿಯೆ ನಡೆದು ಆರೇಳು ತಿಂಗಳುಗಳೇ ಕಳೆದಿದೆ. ಆದರೆ ನೀರು ಪೂರೈಸುವ ಜವಾಬ್ದಾರಿ ಹೊತ್ತ ಎಲ್ಆಂಡ್ ಟಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ.
ಒಡೆದ ಪೈಪ್ ಲೈನ್ಗಳ ದುರಸ್ತಿ ಮಾಡುತ್ತಿಲ್ಲ. ಈಗಾಗಲೇ ಜಲಮಂಡಳಿ ಮೂಲಕ ನೀರು ಪೂರೈಸುತ್ತಿದ್ದ ಸಿಬ್ಬಂದಿ ಕೆಲಸದಿಂದ ಕೈಬಿಟ್ಟಿದೆ. ಆದರೆ ಆ ಜಾಗಕ್ಕೆ ಸಮರ್ಪಕವಾದ ಸಿಬ್ಬಂದಿ ನೇಮಕಗೊಂಡಿಲ್ಲ. ಇದರಿಂದ ನೀರು ಪೂರೈಕೆ ನೂರೆಂಟು ವಿಘ್ನ ಎದುರಾಗುತ್ತಲೇ ಇದೆ. ಅಧಿಕಾರಿಗಳು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಆದರೆ ಜನರ ಮನೆಗಳ ನಲ್ಲಿಯಲ್ಲಿ ನೀರು ಮಾತ್ರ ಬರುತ್ತಿಲ್ಲ. ಇದರಿಂದಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಪರಿಸ್ಥಿತಿಯನ್ನು ವಿವರಿಸಿದರು.
ಧಾರವಾಡ ನಗರದ ಕೇಲಗೇರಿ ಭಾಗದ ಆಂಜನೇಯ ನಗರ ಸೇರಿದಂತೆ ಬಹುತೇಕ ಕಡೆಯಲ್ಲಿ ಸುಮಾರು ಹದಿನೈದು ದಿನ ಕಳೆದರೂ ಕುಡಿಯುವ ನೀರು ಬರುತ್ತಿಲ್ಲ. ಸೂಕ್ತ ಮೂಲಭೂತ ಸೌಕರ್ಯ ನೀಡದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಕಾರ್ಪೋರೇಟರ್ಗಳಿಗೆ ಜನರು ನಿತ್ಯ ಶಾಪ ಹಾಕುತ್ತಿದ್ದಾರೆ.
ಇನ್ನು ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕಿದ್ದು, ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಜನರಿಗೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿದೆ. ಸದ್ಯ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜನಪ್ರತಿನಿಧಿಗಳು ನಮ್ಮ ಸಂಕಷ್ಟಕ್ಕೆ ಸ್ಪಂದಿಸಬೇಕು ಎನ್ನುವುದು ಕೇಲಗೇರಿ ಜನರ ಆಗ್ರಹವಾಗಿದೆ.












Click it and Unblock the Notifications