ವಿದ್ಯುತ್ ದರ ಏರಿಕೆ: ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್ಗೆ ಯಾರೆಲ್ಲ ಬೆಂಬಲ ಸೂಚಿಸಿದ್ದಾರೆ?
ಹುಬ್ಬಳ್ಳಿ, ಜೂನ್, 22: ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಹಾಗೆಯೇ ಧಾರವಾಡ ಜಿಲ್ಲೆಯಲ್ಲೂ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ವಿವಿಧ ವಾಣಿಜ್ಯೋದ್ಯಮಿಗಳು ಬಂದ್ಗೆ ಬೆಂಬಲ ನೀಡಿದ್ದು, ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಸ್ತಬ್ಧವಾಗಿವೆ. ಕೈಗಾರಿಕೆ, ಟ್ರಾನ್ಸ್ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಅಲ್ಲದೆ ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಮುಂದಾಗಲಿರುವ ಕೈಗಾರಿಕೋದ್ಯಮಿಗಳು ಸರ್ಕಾರ ಹಾಗೂ ಕೆ.ಇ.ಆರ್.ಸಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.
ಇನ್ನೂ ನಗರದಲ್ಲಿ ತುರ್ತು ಸೇವೆ ಹಾಗೂ ಸಾರಿಗೆ ವ್ಯವಸ್ಥೆ ಹೊರತುಪಡಿಸಿ ವ್ಯಾಪಾರ ವಹಿವಾಟು ಎಲ್ಲವೂ ಬಂದ್ ಆಗಿದೆ. ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ವಿವಿಧ ಕೈಗಾರಿಕೋದ್ಯಮಿಗಳು ಮುಂದಾಗಿದ್ದಾರೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕೈಗಾರಿಕೋದ್ಯಮಿಗಳು ಮುಂದಾಗಿದ್ದಾರೆ.
ಬಳ್ಳಾರಿಯಲ್ಲೂ ಕರ್ನಾಟಕ ಬಂದ್ಗೆ ಬೆಂಬಲ
ವಿದ್ಯುತ್ ದರ ಏರಿಕೆ ವಿರೋಧಿಸಿ ಬಳ್ಳಾರಿ ಛೇಂಬರ್ ಆಫ್ ಕಾಮರ್ಸ್ ಸೇರಿ ಹಲವು ಸಂಘಟನೆಗಳು ಬಳ್ಳಾರಿ ನಗರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದಿಂದ ಷರತ್ತುಗಳೊಂದಿಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆಯಾದ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಳೆದ ಮೇ 12ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 70 ಪೈಸೆ ಏರಿಕೆ ಮಾಡಿದೆ.
ಇದರಿಂದ ರೊಚ್ಚಿಗೆದ್ದ ಬಳ್ಳಾರಿ ಛೇಂಬರ್ ಆಫ್ ಕಾಮರ್ಸ್ ಸೇರಿ ಹಲವು ಸಂಘಟನೆಗಳು ನಗರದಲ್ಲಿ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿಸಿವೆ. ಅಲ್ಲದೆ ಬೆಂಗಳೂರು ರಸ್ತೆ, ಹೆಚ್.ಆರ್.ಜಿ ವೃತ್ತದ ಮೂಲಕ ಡಿಸಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದರು.

ವಿದ್ಯುತ್ ಶುಲ್ಕ ಹೆಚ್ಚಳದಿಂದಾಗಿ ವ್ಯಾಪಾರಸ್ಥರು, ಸಾಮಾನ್ಯ ಜನತೆ ಹಾಗೂ ಕೈಗಾರಿಕೆಗಳ ಮೇಲೆ ಆಗುವ ಪರಿಣಾಮಗಳ ಕುರಿತು ಸರ್ಕಾರಕ್ಕೆ ಗಂಭೀರತೆಯನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ. ಆದರೆ, ಅಧಿಕಾರಿಗಳು ಮತ್ತು ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ.
ವಿದ್ಯುತ್ ಬಿಲ್ ಹೆಚ್ಚಳದಿಂದ ಕೈಗಾರಿಕೆಗಳು ಸಂಕಷ್ಟ ಅನುಭವಿಸುತ್ತಿವೆ. ಕೂಡಲೇ ವಿದ್ಯುತ್ ದರ ಇಳಿಕೆ ಮಾಡಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ.ಶ್ರೀನಿವಾಸ್ ರಾವ್ ಒತ್ತಾಯಿಸಿದರು.
ನಂತರ ಸಂಘಟನೆಗಳ ಮುಖಂಡರೆಲ್ಲ ಸೇರಿ ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.












Click it and Unblock the Notifications