ಧಾರವಾಡದಲ್ಲಿ ಎನ್ಡಿಎ ಮಾದರಿಯ ಪೊಲೀಸ್ ತರಬೇತಿ ಕೇಂದ್ರ ಸ್ಥಾಪನೆ; ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಸೆಪ್ಟೆಂಬರ್, 05: ಧಾರವಾಡದಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಪುಣೆಯ ಖಡಕ್ ವಾಸ್ಲಾದ ಎನ್ಡಿಎ ಮಾದರಿಯ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುವುದು. ತಂತ್ರಜ್ಞಾನ, ವಿಜ್ಞಾನ ಆಧರಿಸಿ ಸೈಬರ್ ಅಪರಾಧಗಳ ತ್ವರಿತ ಪತ್ತೆ ಮಾಡುವ ಕೌಶಲ್ಯವನ್ನು ಪೊಲೀಸರು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸುಧಾರಣೆಗಳನ್ನು ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ, ಗೋಕುಲ ರಸ್ತೆ, ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿದರು. ಮಧ್ಯಮ ಕ್ರಮಾಂಕದ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲು ಪುಣೆಯ ಖಡಕ್ ವಾಸ್ಲಾದಲ್ಲಿರುವ ಎನ್ಡಿಎ ಮಾದರಿಯ ತರಬೇತಿ ಕೇಂದ್ರವನ್ನು ಧಾರವಾಡದಲ್ಲಿ ಸ್ಥಾಪಿಸಲಾಗುವುದು. ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಕಂಟ್ರೋಲ್ ಕಮಾಂಡ್ ಸೆಂಟರ್ ಸ್ಥಾಪನೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಹಣ ಒದಗಿಸಬಹುದು. ಸೂಕ್ತ ಪ್ರಸ್ತಾವನೆ ಬಂದರೆ ರಾಜ್ಯ ಸರ್ಕಾರದಿಂದ ಹಣ ಒದಗಿಸಲಿದೆ. ತಂತ್ರಜ್ಞಾನದ ದುರುಪಯೋಗ ತಡೆಯಬೇಕು. ಡಿಜಿಟಲ್ ಹಾಗೂ ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿ ಇನ್ನೂ ಸುಧಾರಣೆ ತರಲಾಗುವುದು ಎಂದರು.

81 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ
ಪೊಲೀಸ್ ಠಾಣೆಗಳು ಸಮಾಜದ ಭದ್ರತೆಗೆ ಅತ್ಯಗತ್ಯ. ದಕ್ಷವಾದ ಸೇನೆ ಹಾಗೂ ಪೊಲೀಸರು ಇರುವಲ್ಲಿ ಶಾಂತಿ ನೆಲೆಸಿರುತ್ತದೆ. ಶಾಂತಿ ಇದ್ದಲ್ಲಿ ಅಭಿವೃದ್ಧಿ ಆಗುತ್ತದೆ. ಕರ್ನಾಟಕ ಪೊಲೀಸರು ದಕ್ಷತೆಗೆ ಹೆಸರಾಗಿದ್ದಾರೆ. ಹುಬ್ಬಳ್ಳಿಯ ಜನದಟ್ಟಣೆ ಹಾಗೂ ವಾಹನ ದಟ್ಟಣೆ ನಿಯಂತ್ರಣಕ್ಕೆ ಸಂಚಾರ ಪೊಲೀಸ್ ಠಾಣೆಗಳ ಅಗತ್ಯತೆ ಮನಗಂಡು ಅಲ್ಲಿ ಠಾಣೆ ಸ್ಥಾಪಿಸಲಾಗಿದೆ. ಅಭಿವೃದ್ಧಿಯ ವಿಷಯದಲ್ಲಿ ಅಧಿಕಾರಿಗಳು ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ನೆರವು ನೀಡಲು ಅಧಿಕಾರಿಗಳು ಹಿಂದೇಟು ಹಾಕಬಾರದು. 2025ರೊಳಗೆ 11 ಸಾವಿರ ಪೊಲೀಸ್ ವಸತಿ ಗೃಹಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ 2 ಸಾವಿರ ವಸತಿ ಗೃಹಗಳು ತಲೆ ಎತ್ತಲಿವೆ ಎಂದು ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದ ನಂತರ ಒಂದೇ ವರ್ಷದ ಅವಧಿಯಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗಿದೆ. 8101 ಶಾಲೆಗಳ ಕಟ್ಟಡಗಳನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಲಾಗಿದೆ. ತಲಾ 7 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿ 81 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದೆ. ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳೂ ಸೇರಿ ಎರಡನೇ ಹಂತದ ಒಟ್ಟು ಆರು ನಗರಗಳಿಗೆ ಹೊಂದಿಕೊಂಡು ವಿಸ್ತೃತ ಹೊಸ ನಗರಗಳನ್ನು ನಿರ್ಮಿಸಲಾಗುವುದು. ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಸ್ಥಾಪನೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.

ಠಾಣೆಗಳ ನಿರ್ಮಾಣಕ್ಕೆ ತಗಲಿದ ವೆಚ್ಚ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ವರ್ಷದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಿರುವುದು ದಾಖಲೆಯ ಕಾರ್ಯವಾಗಿದೆ. ಈ ಬಾರಿ ಬಜೆಟ್ನಲ್ಲಿ ಮುಖ್ಯಮಂತ್ರಿ ಅವರು ಪೊಲೀಸ್ ವಸತಿ ಗೃಹ ಹಾಗೂ ಠಾಣೆಗಳಿಗೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ನೀಡಿದ್ದಾರೆ. ಪೊಲೀಸ್ ವಿದ್ಯಾನಿಧಿ ಮೂಲಕ ಪೊಲೀಸರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುತ್ತಿರುವುದು ಸ್ವಾಗತಾರ್ಹವಾಗಿದೆ. ತಂತ್ರಜ್ಞಾನ ಮತ್ತು ವಿಜ್ಞಾನ ಪೊಲೀಸ್ ಇಲಾಖೆಯಲ್ಲಿ ಹೆಚ್ಚು ಅಳವಡಿಕೆ ಆಗಬೇಕು. ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಿ, ಎಲ್ಲೆಡೆ ಸುಲಭವಾಗಿ ಹಂಚಿಕೆ ಮಾಡಿಕೊಳ್ಳುವಂತಹ ವ್ಯವಸ್ಥೆ ಜಾರಿಗೊಳ್ಳಬೇಕು. ಆಧುನಿಕತೆ ಮತ್ತು ಪೊಲೀಸರ ಮಾನವೀಯತೆ ಜೊತೆಯಾಗಿ ಸಾಗಬೇಕು ಎಂದರು.

ಶೀಘ್ರದಲ್ಲಿಯೇ 900 ಪಿಎಸ್ಐಗಳ ನೇಮಕಾತಿ
ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಉದ್ಘಾಟಿಸಿರುವುದು ಸಂತೋಷದ ಸಂಗತಿ ಆಗಿದೆ. ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು. ಈಗ ವಾರ್ಷಿಕ 100ಕ್ಕೂ ಹೆಚ್ಚು ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಶೇಕಡಾ 35ರಷ್ಟಿದ್ದ ಖಾಲಿ ಹುದ್ದೆಗಳ ಪ್ರಮಾಣವನ್ನು ಶೇಕಡಾ 12ಕ್ಕೆ ಇಳಿಕೆ ಮಾಡಲಾಗಿದೆ. ಶೀಘ್ರದಲ್ಲಿಯೇ 900 ಪಿಎಸ್ಐಗಳ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಶೇಕಡಾ 20ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಪೊಲೀಸ್ ಇಲಾಖೆ ಈ ವರ್ಷ ಅತ್ಯಂತ ಸವಾಲಿನದಾಗಿತ್ತು. ಹುಬ್ಬಳ್ಳಿಯ ಗಲಭೆಯನ್ನು ಇಲ್ಲಿನ ಪೊಲೀಸ್ ಆಯುಕ್ತ ಲಾಭೂರಾಮ್ ನೇತೃತ್ವದ ತಂಡ ಅತ್ಯಂತ ಸಮರ್ಥವಾಗಿ ಹಾಗೂ ಕ್ಷಿಪ್ರವಾಗಿ ತಹಬಂದಿಗೆ ತಂದಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ಎಡಿಜಿಪಿ ಅರುಣ್ ಚಕ್ರವರ್ತಿ, ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ, ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಬಿ.ಜಗಲಾಸರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನೂತನ ಠಾಣೆಗಳಲ್ಲಿರುವ ಸೌಕರ್ಯಗಳು
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮವು 2.12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಕಸಬಾ ಪೇಟ ಪೊಲೀಸ್ ಠಾಣೆ,1.94 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಕಂಪ್ಯೂಟರ್ ಆಯುಧ, ವರದಿ, ವಿಚಾರಣಾ ಕೊಠಡಿಗಳು, ಪುರುಷ ಮತ್ತು ಮಹಿಳಾ ಲಾಕ್ ಅಪ್, ಪ್ಯಾಂಟ್ರಿ, ದಾಖಲೆಗಳ ಕೊಠಡಿ, ಸಭಾಂಗಣ, ಶೌಚಾಲಯ ಮತ್ತಿತರ ಸೌಕರ್ಯಗಳನ್ನು ಹೊಂದಿವೆ. 7.49 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಗೋಕುಲ ರಸ್ತೆ, ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಲಾಯಿತು ಎಂದು ಹೇಳಿದರು.












Click it and Unblock the Notifications