ಕೇಂದ್ರ, ರಾಜ್ಯಕ್ಕೆ ರೈತರ ಹಿತ ಬೇಕಾಗಿಲ್ಲ- ಮಾಜಿ ಸಚಿವ ಬಾಬಾಗೌಡ
ಹುಬ್ಬಳ್ಳಿ, ಜುಲೈ 4: ಒಂದು ಕಡೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ರೈತರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಸರ್ಕಾರ ಕಾಟಾಚಾರಕ್ಕೆ ರೈತರ ಕೇವಲ 50 ಸಾವಿರ ಸಾಲ ಮನ್ನಾ ಮಾಡಿ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಅಧ್ಯಕ್ಷ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಪ್ರಕಟಿಸಿದರು.
"ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರೈತರ ಹಿತ ಬೇಕಾಗಿಲ್ಲ. ಸತತ ಮೂರು ವರ್ಷಗಳ ಬರಗಾಲದಿಂದ ರೈತರು ಕಂಗಾಲಾಗಿದ್ದಾರೆ. ರೈತರು ಬೆಳೆದ ಬೆಳೆಗೆ ಯೋಗ್ಯವಾದ ಬೆಲೆ ಇಲ್ಲ. ಈ ಕಾರಣದಿಂದ ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಬುದ್ದಿ ಕಲಿಸುವುದು ಅನಿವಾರ್ಯವಾಗಿದ್ದು, ರೈತರು ಮನಸ್ಸು ಮಾಡಿದರೆ ಮುಖ್ಯಮಂತ್ರಿಯನ್ನು ಮನೆಗೆ ಕಳಿಸುವುದು ದೊಡ್ಡದೇನಲ್ಲ," ಎಂದು ಎಚ್ಚರಿಕೆ ನೀಡಿದರು.
ಇದಕ್ಕೆ ಪೂರ್ವಭಾವಿಯಾಗಿ ಇದೇ ಜುಲೈ 21ರಂದು ನಗರದ ಸಿದ್ಧಾರೂಢ ಮಠದ ಆವರಣದಲ್ಲಿ ಬೃಹತ್ ರೈತ ದೀಕ್ಷಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಅಂದಾಜು 25 ಸಾವಿರ ರೈತರಿಗೆ ದೀಕ್ಷೆ ನೀಡಲು ನಿರ್ಧರಿಸಲಾಗಿದೆ. ಈ ಸಮಾವೇಶದ ಮೂಲಕವೇ ಮುಂದಿನ ಚುನಾವಣೆಗೆ ತಯಾರಿ ಆರಂಭಿಸಲಾಗುವುದು ಎಂದು ಬಾಬಾಗೌಡ ಪುನರುಚ್ಚರಿಸಿದರು.