ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶಮೂರ್ತಿ ಅದ್ಧೂರಿ ವಿಸರ್ಜನೆ
ಹುಬ್ಬಳ್ಳಿ, ಸೆಪ್ಟೆಂಬರ್ 10: ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನು ಅದ್ಧೂರಿ ಮೆರವಣಿಗೆ ನಡೆಸಿ ನಂತರ ಇಂದಿರಾ ಗಾಜಿನ ಮನೆ ಬಳಿಯ ಬಾವಿಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಗಿದೆ. ಒಟ್ಟು ಮೂರು ದಿನಗಳವರೆಗೆ ಪ್ರತಿಷ್ಠಾಪಿಸಿದ್ದ ಮೂರ್ತಿಗೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಗಣೇಶೋತ್ಸವ ಮಹಾಮಂಡಳಿ ಕಾರ್ಯಕರ್ತರು ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿಸಿದರು.
ಬಿಜೆಪಿ ಎಂಎಲ್ಸಿ ಸಿ.ಟಿ. ರವಿ, ಆರ್ಎಸ್ಎಸ್ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಅವರು ಈದ್ಗಾ ಮೈದಾನದ ಗಣೇಶನ ವಿಗ್ರಹದ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾತಂಡಗಳ ಪ್ರದರ್ಶನದೊಂದಿಗೆ ಅದ್ಧೂರಿ ಮೆರವಣಿಗೆ ನಡೆದಿದ್ದು, ಪಂಚವಾದ್ಯ, ರಾಮ್ಡೋಲು-ತಾಷಾ, ಝಾಂಜ್ ಹಾಗೂ ಡಿಜೆ ಮೇಳಗಳು ಮೆರವಣಿಗೆಗೆ ಮೆರಗು ತಂದವು.

ರಸ್ತೆಯುದ್ದಕ್ಕೂ ಭಗವಾಧ್ವಜ, ಕೇಸರಿ ಬಾವುಟಗಳು ರಾರಾಜಿಸಿದವು. ನೆರೆದವರು ಗಣೇಶ, ಹನುಮಾನ್ ಹಾಗೂ ಶ್ರೀರಾಮನಿಗೆ ಜೈಕಾರ ಮೊಳಗಿಸಿದರು. ಗಣಪತಿ ಬಪ್ಪಾ ಮೋರಯಾ..ಎಂದು ಕೇಕೆ ಹಾಕಿದರಲ್ಲೇ ಡಿಜೆ ಸೌಂಡ್ಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಮೆರವಣಿಗೆಯು ಚನ್ನಮ್ಮ ಮೈದಾನದಿಂದ ಆರಂಭವಾಗಿ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ನಗರದ ಇಂದಿರಾ ಗಾಜಿನ ಮನೆಯವರೆಗೆ ಸಾಗಿತು. ನಂತರ ಪಕ್ಕದ ಬಾವಿಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ಗಳ ತಂಡ, ಕೆಎಸ್ಆರ್ಪಿ, ಸಿಎಆರ್, ಕ್ಯಾಪಿಡ್ ಆ್ಯಕ್ಷನ್ ಫೋರ್ಸ್ ಸ್ಥಳದಲ್ಲಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಲಿನ ಕಟ್ಟಡಗಳಲ್ಲಿ ಕ್ಯಾಮರಾ ಅಳವಡಿಸಲಾಗಿತ್ತು. ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಡಿಸಿಪಿಗಳಾದ ಮಹಾನಿಂಗ ನಂದಗಾವಿ, ಸಿ.ಆರ್. ರವೀಶ ಮೆರವಣಿಗೆಯುದ್ದಕ್ಕೂ ಸಾಗಿ ಬಂದು ಭದ್ರತೆ ನೀಡಿದರು.

ಗಣೇಶ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿಯಲ್ಲಿ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿತ್ತು. ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಬೇರೆಡೆಯಿಂದ ಆಗಮಿಸಿದ್ದ ಪ್ರಯಾಣಿಕರು ಇಳಿಯಲು ಪ್ರತ್ಯೇಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡಿದರು.












Click it and Unblock the Notifications