ಮತ್ತೊಮ್ಮ ಗ್ರಾಮ ವಾಸ್ತವ್ಯಕ್ಕೆ ಹೊರಟ ಕುಮಾರಸ್ವಾಮಿ
ಹುಬ್ಬಳ್ಳಿ, ಜುಲೈ 24 : ಮುಖ್ಯಮಂತ್ರಿಯಾಗಿದ್ದ ವೇಳೆ ಗ್ರಾಮ ವಾಸ್ತವ್ಯ ಮಾಡಿ ಸಂಚಲನ ಮೂಡಿಸಿದ್ದ ಎಚ್. ಡಿ.ಕುಮಾರಸ್ವಾಮಿ ಅವರು ಇದೀಗ ಮತ್ತೆ ಉತ್ತರ ಕರ್ನಾಟಕ ಭಾಗದಲ್ಲಿ 50 ದಿನಗಳ ಕಾಲ ಗ್ರಾಮ ವಾಸ್ತವ್ಯ ಮಾಡುವುದಾಗಿ ಘೋಷಿಸಿದ್ದಾರೆ.
ಕುಮಾರಪಥ-2018ರ ನಿಮಿತ್ತ ಭಾನುವಾರ (ಜುಲೈ 23) ಹುಬ್ಬಳ್ಳಿಯಲ್ಲಿ ಅಂಗವಿಕಲರೊಂದಿಗೆ ಸಾರಿಗೆ ಬಸ್ನಲ್ಲಿ ಸಂಚರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಆಗಸ್ಟ್ 15ರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಸ ಆರಂಭಿಸಲು ನಿರ್ಧರಿಸಲಾಗಿದ್ದು, 40 ದಿನಗಳ ಕಾಲ ಹಳ್ಳಿಗಳಲ್ಲಿ ವಾಸ್ತವ್ಯ ಮಾಡಲಾಗುವುದು ಎಂದು ತಿಳಿಸಿದರು.
JDS ಅಧಿಕಾರಕ್ಕೆ ಬಂದ್ರೆ ನೀರಿನ ಸಮಸ್ಯೆಗೆ ಇತಿಶ್ರೀ: HDK
ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿದರೂ ಆತ್ಮಹತ್ಯೆಗಳು ನಿಂತಿಲ್ಲ. ಈ ಕಾರಣದಿಂದ ಅವರಿಗೆ ಆತ್ಮಸ್ಥೈರ್ಯ ತುಂಬಲು ಈ ವಾಸ್ತವ್ಯ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಹೈದರಾಬಾದ್ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ 40-45 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದ್ದು, ಈಗಾಗಲೇ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ" ಎಂದರು.
ಯಾವ ಪಕ್ಷದೊಂದಿಗೂ ಹೊಂದಾಣಿ ಇಲ್ಲ
'2018ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಯನ್ನು ಮಾಡಿಕೊಳ್ಳುವುದಿಲ್ಲ. ಅದರ ಅನಿವಾರ್ಯತೆಯೂ ಜೆಡಿಎಸ್ ಗೆ ಇಲ್ಲ' ಎಂದು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುನರುಚ್ಚಿಸಿದರು.
ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಇಂಗಿತ
ಕುಮಾರಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು. ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಹಾಗೂ ಜನರಿಂದ ಒತ್ತಾಯ ಬಂದಿದೆ. ಈ ಬಗ್ಗೆ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಸೂಕ್ತ ಸಂದರ್ಭದಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ಉತ್ತರ ಕರ್ನಾಟಕವನ್ನು ಟಾರ್ಗೆಟ್ ಮಾಡಿರುವ ಎಚ್ಡಿಕೆ
ಅದ್ಯಾಕೋ ಗೊತ್ತಿಲ್ಲ ಉತ್ತರ ಕರ್ನಾಟಕ ಮೇಲೆ ಕುಮಾರಸ್ವಾಮಿಗೆ ಪ್ರೀತಿ ಹುಟ್ಟಿಕೊಂಡಿದೆ. ಇದಕ್ಕೆ ಪೂರಕವೆಂಬಂತೆ ಹುಬ್ಬಳ್ಳಿಯಲ್ಲಿ ಮನೆ ಮಾಡಿರುವುದು. ಹಾಗೂ ಧಾರವಾಡದಲ್ಲಿಯೇ ಕುಮಾರಪಥ 2018 ಆಯೋಜಿಸಿದ್ದು, ಇದೀಗ ಉತ್ತರ ಕರ್ನಾಟದಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗಿವುದನ್ನು ನೋಡಿದರೆ ಈ ಬಾರಿ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಮೊಳಗಲು ಈ ಎಲ್ಲಾ ತಂತ್ರಗಳನ್ನು ನಡೆಸಿದ್ದಾರೆ ಎಂಬುವುದು ಮೇಲ್ನೋಟಕ್ಕೆ ತಿಳಿದಿದೆ.
ಜಮೀರ್ ರುಂಡ ಕತ್ತರಿಸಿಕೊಳ್ಳುವ ಅಗತ್ಯವಿಲ್ಲ
ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದರೆ ರುಂಡ ಕತ್ತರಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವ ಶಾಸಕ ಜಮೀರ್ ಅಹ್ಮದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಚ್.ಡಿಕೆ, ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಜೆಡಿಎಸ್ ಎಲ್ಲ ಕ್ಷೇತ್ರಗಳಲ್ಲಿ ಗೆದ್ದರೂ ಅಥವಾ ಸೋತರು ಅವರು ಆ ರೀತಿ ಮಾಡಿಕೊಳ್ಳುವುದು ಬೇಡಾ. ಎಲ್ಲವನ್ನೂ ಮತದಾರರೆ ತಿರ್ಮಾನ ಮಾಡುತ್ತಾರೆ ಎಂದರು.