ಹುಬ್ಬಳ್ಳಿ: ಭಾರೀ ಮಳೆಗೆ ಕುಸಿದು ಬಿದ್ದ ಮನೆ
ಹುಬ್ಬಳ್ಳಿ, ಜುಲೈ, 27: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನಗರದಲ್ಲಿ ಸಾಕಷ್ಟು ಅನಾಹುತಗಳು ನಡೆಯುತ್ತಿವೆ. ಹಾಗೆಯೇ ಇಂದು ಬೆಳ್ಳಗ್ಗೆ ವರುಣನ ಆರ್ಭಟಕ್ಕೆ ಮನೆಯೊಂದು ಕುಸಿದು ಬಿದ್ದು, ಈ ವೇಳೆ ಮನೆಯಲ್ಲಿದ್ದ 5 ಜನ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿವೆ.
ಹುಬ್ಬಳ್ಳಿಯ ಗಿರಣಿಚಾಳದಲ್ಲಿನ ನಾಗರಾಜ ಕಿರೆಸುರು ಎಂಬುವವರಿಗೆ ಸೇರಿದ ಮನೆ ಇಂದು ಭಾರೀ ಮಳೆಯಿಂದ ಏಕಾಏಕಿ ಕುಸಿದು ಬಿದ್ದಿದೆ. ಮನೆಯಲ್ಲಿ 5 ಜನ ಇದ್ದಾಗ ಈ ಅವಘಡ ಸಂಭವಿಸಿದ್ದು, ಅದೃಷ್ಟಾವಶಾತ ಯಾರಿಗೂ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಸದ್ಯ ಈ ಒಂದು ಅವಘಡದಿಂದ ಇದೀಗ ನಾಗರಾಜ ಕುಟುಂಬ ಸಂಕಷ್ಟಕ್ಕೀಡಾಗಿದ್ದು, ಮಹಾನಗರ ಪಾಲಿಕೆ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿ ಹಾನಿಗೊಳಗಾದ ಮನೆಯ ಮಾಲೀಕರಿಗೆ ಸಾಂತ್ವನದ ಜೊತೆಗೆ ಸರ್ಕಾರದಿಂದ ಬರುವ ಪರಿಹಾರ ಆದಷ್ಟು ಬೇಗ ಕೊಡಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕಾಗಿದೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು
ಹಾಗೆಯೇ ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆರಾಯ ಆರ್ಭಟಿಸುತ್ತಲೇ ಇದ್ದಾನೆ. ನದಿಗಳು ಅಪಾಯ ಮಟ್ಟ ಮೀರಿ ಹರಿದು ಪ್ರವಾಹ ಸೃಷ್ಟಿಯಾಗಿದೆ. ಅದರಲ್ಲಿಯೂ ಅಘನಾಶಿನಿ ನದಿಯ ನೆರೆಗೆ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಜಿಲ್ಲೆಯ ಅಘನಾಶಿನಿ, ಗಂಗಾವಳಿ, ಶರಾವತಿ, ವರದಾ ಕಾಳಿ ನದಿ ತುಂಬಿ ಹರಿಯಲಾರಂಭಿಸಿವೆ. ಘಟ್ಟದ ಮೇಲ್ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ, ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಅಲ್ಲದೆ ಗಂಗಾವಳಿ ಹಾಗೂ ಅಘನಾಶಿನಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತುವೆ. ಇದರಿಂದಾಗಿ ನದಿ ತೀರದ ಪ್ರದೇಶಗಳು ಬಹುತೇಕ ಜಲಾವೃತವಾಗಿದ್ದು, ಜನಜಾನುವಾರುಗಳ ಸ್ಥಳಾಂತರ ಕಾರ್ಯ ನಡೆಯುತ್ತಿದೆ.
ಇನ್ನು ಅಘನಾಶಿನಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದೆ. ಸಿದ್ದಾಪುರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾದ ಕಾರಣ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವುದು ನದಿ ತೀರದ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಶಿರಸಿ- ಕುಮಟಾ ರಸ್ತೆಯ ರಾಗಿಹೊಸಳ್ಳಿ ಬಳಿ ಗುಡ್ಡದ ಮಣ್ಣು ರಸ್ತೆಗೆ ಕುಸಿಯುತ್ತಿರುವುದು ಸಂಚಾರಕ್ಕೆ ಅಡೆತಡೆಯಾಗಿದೆ. ಸದ್ಯ ಈ ಮಾರ್ಗದಲ್ಲಿ ಭಾರೀ ವಾಹನಗಳ ಓಡಾಟ ಕಷ್ಟವಿದ್ದು, ಲಘು ವಾಹನಗಳಿಗೆ ಸಂಚರಿಸಲು ಪೊಲೀಸರು ಅವಕಾಶ ಮಾಡಿಕೊಡುತ್ತಿದ್ದಾರೆ. ಅಲ್ಲದೆ ಶಿರಸಿ ಮತ್ತು ಕುಮಟಾದಿಂದ ಸಾಗುವವರಿಗೆ ಬದಲಿ ಮಾರ್ಗಗಳನ್ನು ಬಳಸುವಂತೆಯೂ ಸೂಚಿಸಲಾಗಿದೆ.
ಸದ್ಯ ಜಿಲ್ಲಾಡಳಿತದಿಂದ ಅಘನಾಶಿನಿಯಿಂದ ಪ್ರವಾಹ ಬಾಧಿತ ಪ್ರದೇಶಗಳ ಜನರಿಗಾಗಿ 4 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಹೊನ್ನಾವರದಲ್ಲಿಯೂ ಶರಾವತಿ ನದಿ ಉಕ್ಕಿ ಹರಿಯುತ್ತಿದ್ದು, ಒಟ್ಟು 5 ಕಡೆ ಕಾಳಜಿ ಕೇಂದ್ರ ತೆರೆದು ವ್ಯವಸ್ಥೆ ಮಾಡಲಾಗಿದೆ. ಜೋಯಿಡಾದಲ್ಲಿ ಮಳೆ ಶಾಲೆಯೊಂದು ಕುಸಿದು ಬಿದ್ದಿದೆ. ಅದೃಷ್ಟವಸಾತ್ ಶಾಲೆಗೆ ರಜೆ ನೀಡಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.












Click it and Unblock the Notifications