Hubballi ಚನ್ನಮ್ಮ ವೃತ್ತದ ಮೇಲ್ಸೇತುವೆ ಕಾಮಗಾರಿ ಕೆಲಸ ಎಲ್ಲಿಗೆ ಬಂತು?
ವಾಣಿಜ್ಯ ನಗರಿ, ಉತ್ತರ ಕರ್ನಾಟಕದ ಪ್ರಮುಖ ನಗರವಾಗಿರುವ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಬೃಹತ್ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ವಾಹನಗಳ ಸುಗಮ ಸಂಚಾರ, ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಭವಿಷ್ಯದ ದೃಷ್ಟಿಯಿಂದ ಈ ಯೋಜನೆಗೆ ಸರ್ಕಾರ ಕೈ ಹಾಕಿದೆ. ಹಾಗಾದರೆ ಯೋಜನೆ ಕಾಮಗಾರಿ ಎಲ್ಲಿಗೆ ಬಂದು? ಯೋಜನೆ ಕೆಲಸಗಳು ಎಷ್ಟು ಪೂರ್ಣಗೊಂಡಿದೆ. ಇನ್ನೂ ಏನೆಲ್ಲ ಕೆಲಸ ಬಾಕಿ ಇದೆ?
ಹುಬ್ಬಳ್ಳಿ ನಗರದಲ್ಲಿ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನು ಬುಧವಾರ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ವಿವಿಧ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದರು. ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿ ವೀಕ್ಷಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯ ಕೆಲಸಗಳು ಈಗಾಗಲೇ ಶೇಕಡಾ 50 ರಷ್ಟು ಮುಕ್ತಾಯಗೊಂಡಿವೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಕೋರಿದರು.

ಯೋಜನೆಯ ಉದ್ದೇಶ, ಏನೆಲ್ಲ ಅಭಿವೃದ್ಧಿ ಆಗುತ್ತೆ?
ನಗರದಲ್ಲಿ 2022 ರಿಂದ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದೆ. ವಿಜಯಪುರ ರಸ್ತೆಯ ಕಡೆಯಿಂದ (710.00ಮೀ.), ಗದಗ ರಸ್ತೆಯಿಂದ (700.00 ಮೀ), ಚೆನ್ನಮ್ಮ ವೃತ್ತದಿಂದ ಹೊಸೂರ ವೃತ್ತದವರೆಗೆ (850.00 ಮೀ), ಗೋಕುಲ ರಸ್ತೆಯಲ್ಲಿ ಏರ್ಪೋರ್ಟ್ ಕಡೆಗೆ (689.00ಮೀ), ಧಾರವಾಡ ರಸ್ತೆ ಕಡೆಗೆ (310.00 ಮೀ), ಹಾಗೂ 350 ಮೀ. ಅಪರ್ಯಾಂಪ್ ಸೇರಿ ಒಟ್ಟು 3.600 ಕಿ.ಮೀ ಮೇಲ್ಸೆತುವೆ ನಿರ್ಮಿಸಲು ಉದ್ದೇಶಿಸಲಾಗಿದೆ.
4 ತಿಂಗಳ ಕಾಲ ರಸ್ತೆಯ ಈ ಭಾಗ ಬಂದ್
ಏಪ್ರೀಲ್ 20 ರಿಂದ ಆಗಸ್ಟ 19 ರವರೆಗೆ ಸುಮಾರು 4 ತಿಂಗಳ ಕಾಲ ಚನ್ನಮ್ಮ ವೃತ್ತದಿಂದ ಬಸವ ವನದವರೆಗೆ (500 ಮೀ.), ವಿಜಯಪುರ ರಸ್ತೆಯಲ್ಲಿ ಚನ್ನಮ್ಮ ವೃತ್ತದಿಂದ ಕೋರ್ಟ್ ವೃತ್ತದವರೆಗೆ (150 ಮೀ.) ಹಾಗೂ ಚನ್ನಮ್ಮ ವೃತ್ತದಲ್ಲಿ ಆಯ್ದ ಭಾಗಗಳಲ್ಲಿ ಪಿಲ್ಲರ್ ಕಾಮಗಾರಿಗಳಿಗೆ ಬ್ಯಾರಿಕೇಡಿಂಗ್ ಮಾಡಲು ಚನ್ನಮ್ಮ ವೃತ್ತಕ್ಕೆ ಸಂಪರ್ಕಿಸುವ ರಸ್ತೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.

ಚನ್ನಮ್ಮ ವೃತ್ತದಿಂದ ಬಸವವನದವರೆಗೆ ಹಾಗೂ ವಿಜಯಪುರ ರಸ್ತೆಯಲ್ಲಿ 80 ಗಿರ್ಡರ್ ಹಾಗೂ 16 ಸ್ಪಾನಗಳ ಸ್ಲಾಬ್ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಚನ್ನಮ್ಮ ವೃತ್ತದಲ್ಲಿ ರೋಟರಿ ಕಾಮಗಾರಿಗಾಗಿ ಪೋರ್ಟ್ಲ್ ಕ್ಯಾಪ್ ಹಾಗೂ 8 ಪಿಯರ್ಗಳ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಸರ್ವಸಿದ್ಧತೆಯನ್ನು ಮಾಡಿಕೊಂಡಿದೆ.
ಹೀಗಾಗಿ ಈ ಭಾಗದಲ್ಲಿ 4 ತಿಂಗಳ ಕಾಲ ನಗರ ಸಾರಿಗೆ ನಿಲ್ದಾಣ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ. ಐಟಿ ಪಾರ್ಕ್ ಹತ್ತಿರದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ಸ್ಥಾಪಿಸಲಾಗುವುದು. ಅಲ್ಲದೇ ಉಪ ನಗರ ಬಸ್ ನಿಲ್ದಾಣವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ನಿರ್ವಹಣೆ ಹಾಗೂ ರಕ್ಷಣೆ ಮಾಡಬೇಕು. ವಿಜಯಪುರ ಮತ್ತು ಗದಗ ಹಾಗೂ ಉಳಿದ ಪ್ರದೇಶದಿಂದ ಬರುವ ಬಸ್ಸುಗಳಿಗೆ ಕಾರವಾರ ರಸ್ತೆ, ಸಿ.ಬಿ.ಟಿ. ಹಾಗೂ ಹೊಸೂರ ಬಸ್ ನಿಲ್ದಾಣಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಟ್ರಾಫಿಕ್ ಸಮಸ್ಯೆಯಾಗದಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಸಂಚಾರ ಮಾರ್ಗಗಳ ಬದಲಾವಣೆ
ಧಾರವಾಡದಿಂದ ವಿಜಯಪುರ ಮತ್ತು ಗದಗ ಕಡೆಗೆ ಹೋಗುವ ಮಾರ್ಗ, ಹೊಸೂರ ವೃತ್ತದಿಂದ ಕಾಟನ ಮಾರ್ಕೆಟ್, ಶಾರದಾ ಹೋಟೆಲ್, ದೇಸಾಯಿ ವೃತ್ತದ ಮೂಲಕ ಪಿಂಟೋ ವೃತ್ತ ಅಥವಾ ಕೋರ್ಟ ವೃತ್ತದ ಮೂಲಕ ಗದಗ ಹಾಗೂ ವಿಜಯಪುರಕ್ಕೆ ಸಂಚರಿಸಬಹುದಾಗಿದೆ. ಇದಲ್ಲದೇ ಹೊಸೂರ ವೃತ್ತದಿಂದ ಕಾಟನ್ ಮಾರ್ಕೆಟ್, ನೀಲಿಜಿನ ರಸ್ತೆ, ಚನ್ನಮ್ಮ ವೃತ್ತದ ಮಾರ್ಗವಾಗಿ, ಸರ್ ಸಿದ್ದಪ್ಪ ಕಂಬಳಿ ರಸ್ತೆ ಮೂಲಕವಾಗಿ ಸಹ ಗದಗ ಹಾಗೂ ಸಿ.ಬಿ.ಟಿ ಕಡೆಗೆ ಸಂಚರಿಸಬಹುದು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ವಿಜಯಪುರ ರಸ್ತೆಯಿಂದ ಧಾರವಾಡಕ್ಕೆ ಹೋಗಲು ಸಲಹೆ
ನಗರದ ಸರ್ವೋದಯ ವೃತ್ತದಿಂದ ಡಿ.ಆರ್.ಎಮ್ ಆಫೀಸ್, ಸ್ಟೇಷನ ರಸ್ತೆ, ಚನ್ನಮ್ಮ ವೃತ್ತದಿಂದ ಕಾರವಾರ ರಸ್ತೆ, ಭಾರತ ಮಿಲ್ ವೃತ್ತ ಮತ್ತು ವಾಣಿ ವಿಲಾಸ ವೃತ್ತದ ಮೂಲಕ ಧಾರವಾಡಕ್ಕೆ ಸಂಚರಿಸಬಹುದಾಗಿದೆ.
ಗದಗ-ಧಾರವಾಡಕ್ಕೆ ಹೋಗುವವರು ಗಮನಿಸಿ
ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ರಸ್ತೆ ಮಾರ್ಗವಾಗಿ ಬಂದು, ಚನ್ನಮ್ಮ ವೃತ್ತದಿಂದ ಕಾರವಾರ ರಸ್ತೆ, ಭಾರತ ಮಿಲ್ ವೃತ್ತ ಮತ್ತು ವಾಣಿ ವಿಲಾಸ ವೃತ್ತದ ಮೂಲಕ ಧಾರವಾಡಕ್ಕೆ ಸಂಚರಿಸಬಹುದಾಗಿದೆ.
ಈ ರಸ್ತೆಯಲ್ಲಿ ಲಘು ವಾಹನ ನಿಷೇಧ
ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನೀಲಿಜಿನ್ ರಸ್ತೆಯನ್ನು ಕೇವಲ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಬಸ್ಗಳ ಸಂಚಾರಕ್ಕೆ ತೆರೆಯಲಾಗಿದೆ. ಈ ರಸ್ತೆಯಲ್ಲಿ ಲಘು ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.
ಉಪನಗರ ಸಾರಿಗೆ ವಾಹನಗಳ ಕಾರ್ಯಚರಣೆಗೆ ಮಾರ್ಗ..
ನಗರದ ಹೊಸೂರು ವೃತ್ತದಿಂದ, ಕಾಟನ್ ಮಾರ್ಕೇಟ್ ರಸ್ತೆ, ಸಾಂಸ್ಕೃತಿಕ ಭವನ ಮೊದಲು ಬಲ ತಿರುವು, ಉತ್ತರ ಸಂಚಾರ ಪೋಲೀಸ್ ಠಾಣೆ ಪಕ್ಕದ ಬಲ ತಿರುವು, ಅಟೋ ಹೌಸ್ (ಸ್ವಿಮ್ಮಿಂಗ್ ಪೂಲ್) ಬಳಿ ಬಲ ತಿರುವು ಪಡೆದು, ಗ್ಲಾಸ್ ಹೌಸ್ ಕಂಪೌಂಡ್ ಪಕ್ಕದಲ್ಲಿರುವ ಬಸ್ ನಿಲುಗಡೆ ಮುಖಾಂತರ ಮರಳಿ ಹೊಸೂರು ಸರ್ಕಲ್ ತೆರಳುವುದು. ಈ ಸಂಪೂರ್ಣ ರಸ್ತೆಯನ್ನು ಉಪನಗರ ಸಾರಿಗೆ ನಿಲುಗಡೆ ಮತ್ತು ಕಾರ್ಯಾಚರಣೆ ಮಾಡಲಿದೆ. ಕಮರಿಪೇಟೆ ಪೋಲಿಸ್ ಠಾಣೆಯಿಂದ ಚನ್ನಮ್ಮ ಸರ್ಕಲ್ಗೆ ಬರುವ ವಾಹನಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.












Click it and Unblock the Notifications