National Youth Festival 2023: ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜುಗೊಂಡ ಅವಳಿ ನಗರ
ಹುಬ್ಬಳ್ಳಿ, ಜನವರಿ 11: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭಕ್ಕೆ ಜನವರಿ 12ರಂದು ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವ ಕ್ಲಬ್ ರಸ್ತೆಯ ರೈಲ್ವೆ ಮೈದಾನದವರೆಗಿನ ರಸ್ತೆಯನ್ನು ಶುಚಿಗೊಳಿಸಲಾಗಿದೆ. ಗುಂಡಿಗಳಿಗೆ ಡಾಂಬರು ಹಾಕಿ, ಸಮತಟ್ಟಗೊಳಿಸಲಾಗಿದೆ.
ಗೋಕುಲ ರಸ್ತೆ, ವಾಣಿವಿಲಾಸ ವೃತ್ತ, ಲಕ್ಷ್ಮೀ ವೇ ಬ್ರಿಜ್, ದೇಶಪಾಂಡೆ ನಗರ, ಸರ್ವೋದಯ ವೃತ್ತದ ರಸ್ತೆಯ ಇಕ್ಕೆಲಗಳಲ್ಲಿದ್ದ ದೂಳು ತೆಗೆಯಲಾಗಿದೆ. ರಸ್ತೆ ವಿಭಜಕಗಳಿಗೆ ಸುಣ್ಣ-ಬಣ್ಣ ಬಳಿದು ಅಲಂಕರಿಸಲಾಗಿದೆ. ಪರ್ಯಾಯ ಮಾರ್ಗವಾಗಿ ಗೋಕುಲ ರಸ್ತೆ, ಅಕ್ಷಯ ಪಾರ್ಕ್, ಶಿರೂರು ಪಾರ್ಕ್, ಕಿಮ್ಸ್ ಮುಖ್ಯರಸ್ತೆ, ಹೊಸೂರು ವೃತ್ತದ ಮಾರ್ಗಗಳನ್ನು ಪ್ರಧಾನಿ ಸಂಚಾರಕ್ಕೆ ಸಿದ್ಧಗೊಳಿಸಲಾಗಿದೆ.

ಇನ್ನು ಧಾರವಾಡದಲ್ಲೂ ಬಣ್ಣದ ಲೈಟ್ಗಳಿಂದ ಕರ್ನಾಟಕ ವಿಶ್ವವಿದ್ಯಾಲಯ, ಕರ್ನಾಟಕ ಕಾಲೇಜ್, ಜಿಲ್ಲಾ ಪಂಚಾಯತ ಕಾರ್ಯಾಲಯ ಹಾಗೂ ಪ್ರಮುಖ ರಸ್ತೆಗಳು ಕಂಗೊಳಿಸುತ್ತಿವೆ.
ಸರ್ವೋದಯ ವೃತ್ತದ ಬಳಿಯ ಮೇಲ್ಸೇತುವೆಗೆ ಹಾಗೂ ಕ್ಲಬ್ ರಸ್ತೆಯ ಅಕ್ಕಪಕ್ಕದ ತಡೆಗೋಡೆಗಳಿಗೆ ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸುವ ಚಿತ್ರಗಳನ್ನು ಬಿಡಿಸಲಾಗಿದೆ. ಹಳೇ ರೈಲ್ವೆ ಡಿಜಿಎಂ ಕಚೇರಿಗೆ ತೆರಳುವ ರಸ್ತೆಗೆ ಡಾಂಬರು ಹಾಕಿ, ನೂತನ ರಸ್ತೆಯನ್ನಾಗಿ ಮಾಡಲಾಗಿದೆ. ಪ್ರಧಾನಿ ಆಗಮಿಸಲಿರುವ ಮಾರ್ಗದುದ್ದಕ್ಕೂ ಸ್ವಾಮಿ ವಿವೇಕಾನಂದ, ಪ್ರಧಾನಿ ಮೋದಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಭಾವಚಿತ್ರಗಳಿರುವ ಸ್ವಾಗತದ ಫ್ಲೆಕ್ಸ್, ಕಟೌಟ್, ಬ್ಯಾನರ್ಗಳನ್ನು ಹಾಕಲಾಗಿದೆ. ರಸ್ತೆ ಮಧ್ಯದ ವಿದ್ಯುತ್ ಕಂಬಗಳಿಗೆ ಕೇಸರಿ ಬಟ್ಟೆ ತೂಗು ಬಿಡಲಾಗಿದೆ.
50X40 ಉದ್ದ- ಅಗಲದ ಪ್ರಧಾನ ವೇದಿಕೆ ನಿರ್ಮಿಸಿದ್ದು, ಉತ್ಸವದಲ್ಲಿ ಪಾಳ್ಗೊಳ್ಳುವ ಕಲಾವಿದರಿಗೆ, ಗಣ್ಯರಿಗೆ ಹಾಗೂ ಸಾರ್ವಜನಿಕರಿಗೆಂದು 100X100 ಉದ್ದ-ಅಗಲದ ಬೃಹತ್ ಪೆಂಡಾಲ್ ಹಾಕಲಾಗಿದೆ. ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡ ವಿವಿಧ ರಾಜ್ಯಗಳ ಆಯ್ದ 7,500 ಮಂದಿ ಯುವಕರಿಗೆ ಹಾಗೂ ಒಂದು ಸಾವಿರದಷ್ಟು ಗಣ್ಯರಿಗೆ ಮುಂಭಾಗದಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಒಟ್ಟು 30 ಸಾವಿರ ಮಂದಿಗೆ ಅವಕಾಶ ಕಲ್ಪಿಸಲಾಗಿದೆ. ಶ್ವಾನದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಮಂಗಳವಾರ ಮೈದಾನದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಭದ್ರತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬುಧವಾರ ಮಧ್ಯಾಹ್ನ 12ಕ್ಕೆ ಕರ್ತವ್ಯದಲ್ಲಿ ನಿಯೋಜಿತರಾಗಿ, ತಾಲೀಮು ನಡೆಸಲಿದ್ದಾರೆ.
ಪ್ರಧಾನಿಯವರ ಸುರಕ್ಷತೆ ಹಿನ್ನೆಲೆಯಲ್ಲಿ ಎಸ್ಪಿಜಿ ಅಧಿಕಾರಿಗಳ ತಂಡ ಮೈದಾನಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಕೆಲವೆಡೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳೀಯ ಆಡಳಿತ ಸೂಚನೆ ನೀಡಿದೆ. ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗಿನ ಮಾರ್ಗದ ಆಯ್ದ ಪ್ರದೇಶದಲ್ಲಿ ಸಿಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ.












Click it and Unblock the Notifications