ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ 6 ಪಥವಾಗಿ ಅಗಲೀಕರಣ
ಹುಬ್ಬಳ್ಳಿ, ಫೆಬ್ರವರಿ 12: ಹುಬ್ಬಳ್ಳಿ-ಧಾರವಾಡ ನಡುವಿನ 30 ಕಿ. ಮೀ. ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಮಾರ್ಪಡಿಸಲು ಕೂಡಲೇ ಟೆಂಡರ್ ಕರೆಯುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೂಚನೆ ನೀಡಿದ್ದಾರೆ.
ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಕರ್ನಾಟಕದ ಹಲವು ಸಂಸದರು ಗುರುವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು. ರಾಜ್ಯದ ರಸ್ತೆ ಯೋಜನೆಗೆಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ನಿತಿನ್ ಗಡ್ಕರಿ ಅವರು ಹುಬ್ಬಳ್ಳಿ-ಧಾರವಾಡ ನಡುವಿನ 30 ಕಿ. ಮೀ. ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೂಡಲೇ ಟೆಂಡರ್ ಕರೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಯೋಜನೆಗಾಗಿ ಈಗಾಗಲೇ ವಿಸ್ತೃತ ಯೋಜನಾ ವರದಿ ತಯಾರು ಮಾಡಲಾಗಿದೆ. ಜನರ ಅನುಕೂಲಕ್ಕಾಗಿ ಆರ್. ಓ. ಬಿ. ಮತ್ತು ಆರ್. ಯು. ಬಿ. ನಿರ್ಮಾಣ ಮಾಡಲು ಸೂಚನೆ ನೀಡಲಾಗಿದೆ. ರಸ್ತೆ ಅಗಲೀಕರಣಕ್ಕೆ 33 ಹೆಕ್ಟೇರ್ ಭೂಸ್ವಾಧೀನ ಅಗತ್ಯವಿದೆ. ಭೂಮಿ ವಶಪಡಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಸೂಚಿಸಲಾಗಿದೆ.
2020ರ ಜುಲೈನಲ್ಲಿಯೇ ಪ್ರಹ್ಲಾದ್ ಜೋಶಿ ಅವರು ಬೆಂಗಳೂರಿನಲ್ಲಿ ಸಭೆ ನಡೆಸಿ ಬೈಪಾಸ್ ರಸ್ತೆಯನ್ನು 1,200 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆಯಾಗಿಸುವ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು.
ಈಗ ರಸ್ತೆಯನ್ನು ನಿರ್ಮಾಣ ಮಾಡಿ ನಿರ್ವಹಣೆಯನ್ನು ನಂದಿ ಹೈವೇ ಇನ್ಪ್ರಾಸ್ಟ್ರಕ್ಚರ್ ಕಂಪನಿ ಮಾಡುತ್ತಿದೆ. 6 ಪಥದ ರಸ್ತೆ ನಿರ್ಮಾಣ ಮಾಡಲು ಕಂಪನಿಯವರು ಸಹ ಒಪ್ಪಿಗೆ ನೀಡಿದ್ದಾರೆ. 6 ಪಥದ ರಸ್ತೆ ನಿರ್ಮಾಣದ ಜೊತೆಗೆ ಜನರ ಅನುಕೂಲಕ್ಕಾಗಿ ಎರಡೂ ಕಡೆ ಸರ್ವೀಸ್ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ.
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಕೆಲವು ದಿನಗಳ ಹಿಂದೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಾವಣಗೆರೆ ಮೂಲದ 13 ಜನರು ಮೃತಪಟ್ಟಿದ್ದರು. ಈ ಅಪಘಾತದ ನಂತರ ಬೈಪಾಸ್ ರಸ್ತೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬ ಕೂಗು ಜೋರಾಗಿತ್ತು.












Click it and Unblock the Notifications