ಹುಬ್ಬಳ್ಳಿ ಸಿಲಿಂಡರ್ ಸ್ಫೋಟದಲ್ಲಿ ಇಬ್ಬರು ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ
ಹುಬ್ಬಳ್ಳಿ, ಡಿಸೆಂಬರ್ 26: ಹುಬ್ಬಳ್ಳಿಯ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು(ಡಿಸೆಂಬರ್ 26) ಬೆಳಗಿನ ಜಾವ ಮೃತಪಟ್ಟಿದ್ದಾರೆ. ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಮೃತ ಅಯ್ಯಪ್ಪ ಮಾಲಾಧಾರಿಗಳು ಎಂದು ಗುರುತಿಸಲಾಗಿದೆ.
ಈ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸ್ಥಳೀಯ ನಾಯಕರು ಸಾಂತ್ವನ ಹೇಳಿದ್ದು, ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದಾರೆ. ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರ ಬದುಕಿಸಲು ಪ್ರಯತ್ನ ಮಾಡಿದ್ದೇವು. 4 ತಜ್ಞ ವೈದ್ಯರನ್ನು ಕರೆಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು. ಆದರೆ ಇದನ್ನು ಮೀರಿ ಸುಟ್ಟ ಪರಿಣಾಮ ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲಾಗಲ್ಲಿಲ್ಲ ಎಂದರು.
ಇನ್ನು ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ. ಇನ್ನು ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮೃತಪಟ್ಟ ಮಾಲಾಧಾರಿಗಳ ಕುಟುಂಬಕ್ಕೆ ಮುಖ್ಯಮಂತ್ರಿಗಳ ನಿರ್ದೇಶನದ ಮೇಲೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.

ಇನ್ನು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದ್ದು, ಇನ್ನುಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದ ಸಚಿವ ಸಂತೋಷ್ ಲಾಡ್ ಉಳಿದ ಗಾಯಾಳುಗಳ ಕುಟುಂಬದವರ ಜೊತೆ ಸಮಾಲೋಚನೆ ಮಾಡಿ ಇನ್ನು ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ ಎಂದು ಹೇಳಿದ್ದಾರೆ.
ಇನ್ನುಳಿದ ಗಾಯಾಳುಗಳಾದ ರಾಜು ಹರ್ಲಾಪುರ (21), ವಿನಾಯಕ ಬಾತಕೇರ (12), ಪ್ರಕಾಶ ಬಾರಕೇರ (42), ಮಂಜು ತೋರದ (22), ಪ್ರವೀಣ ಚಲವಾದಿ (24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ (29) ಇವರುಗಳ ಸ್ಥಿತಿಯೂ ಗಂಭೀರವಾಗಿದೆ. ಅಯ್ಯಪ್ಪ ಮಾಲಾಧಾರಿಗಳು ರಾತ್ರಿ ಊಟ ಮುಗಿಸಿಕೊಂಡು ಸಣ್ಣ ಕೋಣೆಯಲ್ಲಿ ಮಲಗಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications