2ನೇ ಹಂತದ ನಗರಗಳಲ್ಲಿ ಮೊದಲ ಬಾರಿಗೆ ಹೂಡಿಕೆದಾರರ ಸಮಾವೇಶ; ಸಜ್ಜಾಗಿದೆ ಹುಬ್ಬಳ್ಳಿ
ಹುಬ್ಬಳ್ಳಿ, ಫೆಬ್ರವರಿ 13: ದೇಶದ ಇತಿಹಾಸದಲ್ಲಿಯೇ ಎರಡನೇ ಹಂತದ ನಗರಗಳಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಹೂಡಿಕೆದಾರರ ಸಮಾವೇಶಕ್ಕೆ ಹುಬ್ಬಳ್ಳಿ ಸಿದ್ಧವಾಗಿದೆ. ಇನ್ ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಬಂಡವಾಳ ಹೂಡಿಕೆಯ ನಿರೀಕ್ಷೆ ಹೊಂದಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ನಗರದ ಡೆನಿಸನ್ಸ್ ಹೋಟೆಲ್ ಹುಲ್ಲುಹಾಸಿನ ಪ್ರಾಂಗಣದಲ್ಲಿ ಸಿದ್ಧಪಡಿಸಲಾಗಿರುವ ಇನ್ ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
"ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಎರಡೂ ಕಡೆಯಿಂದಲೂ ಉದ್ಯಮಿಗಳಿಗೆ, ಪ್ರತಿಷ್ಠಿತ ಕಂಪೆನಿಗಳಿಗೆ ಸಮಾವೇಶಕ್ಕೆ ಆಮಂತ್ರಿಸಲಾಗಿದೆ. ಗೋದ್ರೆಜ್, ಆದಾನಿ, ಟಾಟಾ, ಹಿಂದೂಜಾ, ಎಲ್ ಅಂಡ್ ಟಿ ಸೇರಿದಂತೆ ಪ್ರತಿಷ್ಠಿತ ಕಂಪೆನಿಗಳು ತಮ್ಮ ಪ್ರತಿನಿಧಿಗಳನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ. ಎರಡನೇ ಹಂತದ ನಗರಗಳಲ್ಲಿ ಮೊದಲ ಬಾರಿಗೆ ನಡೆದ ಸಮಾವೇಶ ಎಂಬ ಹೆಗ್ಗಳಿಕೆ ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಬರಲಿದೆ. ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳೊಂದಿಗೆ ಒಪ್ಪಂದ ಮಾಡಿಕೊಂಡು ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ನೀಡಲಾಗುವುದು" ಎಂದರು.

ಶಾಸಕ ಅರವಿಂದ ಬೆಲ್ಲದ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಜಂಟಿ ಕೈಗಾರಿಕಾ ನಿರ್ದೇಶಕ ಮೋಹನ ಭರಮಕ್ಕನವರ, ಶಿವಪುತ್ರಪ್ಪ, ಎನ್.ಎಂ.ಭೀಮಪ್ಪ ಮತ್ತಿತರರು ಇದ್ದರು.












Click it and Unblock the Notifications