ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ಘಟನೆ: ಯಾರು ಏನು ಹೇಳಿದರು?
ಹುಬ್ಬಳ್ಳಿ ಏಪ್ರಿಲ್ 17: 'ಕೇಸರಿ ಧ್ವಜ ಶಾಂತಿಯ ಸಂಕೇತ. ಮಸೀದಿ ಮೇಲೆ ಭಗವಾಧ್ವಜ ಹಾರಿಸಿದರೆ ಏನು ತಪ್ಪು?' ಎಂದು ಶಾಸಕ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಶಾಸಕರೇಣುಕಾಚಾರ್ಯ ಇಂದು ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ಗಲಾಟೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಭಗವಾಧ್ವಜ ಹಾರಿಸುವುದರಲ್ಲಿ ತಪ್ಪೇನಿದೆ? ಇನ್ನು ಮುಂದೆ ಈ ರೀತಿ ಮಾಡಿದರೆ ಹಿಂದುಗಳು ಏನು ಎಂದು ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಯುವಕ ಹಾಕಿದ ಪ್ರಚೋದನಾಕಾರಿ ಪೋಸ್ಟರ್ನಿಂದಾಗಿ ಹುಬ್ಬಳ್ಳಿಯಲ್ಲಿ ವಿವಾದ ಉಂಟಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜೊತೆಗೆ ಆರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಹೇಳಳಾಗುತ್ತಿದೆ. ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರವನ್ನು ಎಡಿಟ್ ಮಾಡಿ ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡಿದ್ದ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಚಿತ್ರ ವೈರಲ್ ಆಗುತ್ತಿದ್ದಂತೆ ಒಂದು ಕೋಮಿನವರು ಕಲ್ಲು ತೂರಾಟ ನಡೆಸಿದರು.

'ಆರೋಪಿ ಬಂಧನದ ಬಳಿಕ ಹಿಂಸಾಚಾರ ಸಹಿಸುವುದಿಲ್ಲ'
ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, 'ಆರೋಪಿಯನ್ನು ಅರೆಸ್ಟ್ ಮಾಡಿದರೂ ಗುಂಪು ಹಿಂಸಾತ್ಮಾಕಗೊಂಡಿದೆ. ಇದರಲ್ಲಿ ಏಳು ಎಂಟು ಜನ ಗಾಯಗೊಂಡಿದ್ದಾರೆ. ಯಾರು ಕಾನೂನು ಕೈತೆಗೆದುಕೊಳ್ಳುತ್ತಾರೆ ಅವರನ್ನು ಬಿಡುವುದಿಲ್ಲ. ಪೊಲೀಸರು ವಿಶೇಷವಾಗಿ ತನಿಖೆ ಮಾಡುತ್ತಾರೆ. ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ. ತಪ್ಪಿಕಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ' ಎಂದು ಹೇಳಿದ್ದಾರೆ.

'ಹೇಳಿದ್ದೇವಿ, ಸೂಚಿಸಿದ್ದೇವೆ ಅಂದ್ರಾಗಲ್ಲ ಕ್ರಮ ಕೈಗೊಳ್ಳಬೇಕು'
ಇನ್ನೂ ಹೊಸಪೇಟೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ,'ಆರಗ ಜ್ಞಾನೇಂದ್ರ ಅವರಿಗೆ ಸಿಎಂ ಖಡಕ್ ಸಂದೇಶ ನೀಡಬೇಕು. ಪರಿಶೀಲಿಸುತ್ತೇವೆ, ಈಗಾಗಲೇ ಹೇಳಿದ್ದೇವೆ ಇದೆಲ್ಲಾ ನಡೆಯುವುದಿಲ್ಲ. ಆಕ್ಷನ್ ತೆಗೆದುಕೊಂಡು ತಪ್ಪಿಕಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಸಮುದಾಯಕ್ಕೆ ಭಯದ ವಾತಾವರಣ ನಿರ್ಮಾಣ ಮಾಡುತ್ತಾರೆ. ರಾಮನವಮಿ, ಹನುಮಂತ ಜಯಂತಿಯಲ್ಲೂ ನಮ್ಮ ಒಳ್ಳೇತನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದು ಸರಿ ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಹೊಸಪೇಟೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ,'ಇಂತಹ ಘಟನೆಯನ್ನು ನಾವು ಸಹಿಸುವುದಿಲ್ಲ. ನಮ್ಮರಾಜ್ಯದಲ್ಲಿ ಈ ರೀತಿ ಆಗುವುದು ನಾವು ಸಹಿಸುವುದಿಲ್ಲ. ಅದನ್ನು ತಡೆಗೆ ಪೊಲೀಸರು ಕ್ರಮ ಕೈಗೊಳ್ಳಬೇಕು' ಎಂದಿದ್ದಾರೆ.

'ಇಸ್ಲಾಂ ಅಂದ್ರೆ ಶಾಂತಿ ಸಂಕೇತ'
'ಇಸ್ಲಾಂ ಅಂದ್ರೆ ಶಾಂತಿ ಸಂಕೇತ ಎಂದು ಹೇಳುತ್ತಾರೆ. ಹೀಗೆ ಕಲ್ಲು ತೂರಟ ಮಾಡಿರುವುದು ಎಷ್ಟು ಸರಿ? ಹುಬ್ಬಳ್ಳಿಯಲ್ಲಿ ನಡೆದಿದ್ದು ಹೇಯ ಹಾಗೂ ಕ್ರೂರ ಕೃತ್ಯ. ಇದು ಪೂರ್ವ ನಿಯೋಜಿತ ಕೃತ್ಯ ಎಂದು ಬೆಂಗಳೂರಿನಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಘಟನೆಯಿಂದ ನನಗೆ ಡಿಜೆ ಹಳ್ಳಿ ನೆನಪಾಗುತ್ತಿದೆ. ಇದೇ ಮಾದರಿಯಲ್ಲಿ ಅಲ್ಲೂ ಕೂಡ ಆಗಿತ್ತು. ಈ ಕ್ರೌರ್ಯವನ್ನು ಹದ್ದುಬಸ್ತ್ ನಲ್ಲಿಡಬೇಕು ಎಂದು ಹೇಳಿದ್ದಾರೆ.
|
'ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ'
ಇನ್ನೂ ಈ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 'ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ'.
ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್ ರಾದ್ಧಾಂತಕ್ಕೆ ಕಾರಣ. ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ & ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು. ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ.












Click it and Unblock the Notifications