ಜಲ ವಿವಾದದ ಬಗ್ಗೆ ಏಪ್ರಿಲ್ನಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ; ಸಿಎಂ
ಹುಬ್ಬಳ್ಳಿ, ಮಾರ್ಚ್ 27; "ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, "ಅಂತರರಾಜ್ಯ ಜಲವಿವಾದಗಳ ಶೀಘ್ರವಾಗಿ ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಬೇಕಿದೆ. ಕಾನೂನಾತ್ಮಕ ವಿಚಾರಗಳಲ್ಲಿ ನ್ಯಾಯಾಲಯಗಳಿಂದ ಕೂಡಲೇ ಪರಿಹಾರ ಕಂಡುಕೊಳ್ಳಬೇಕಿದೆ. ರೈಲ್ವೆ ಯೋಜನೆಗಳ ಭೂ ಸ್ವಾಧೀನ ಪ್ರಕ್ರಿಯೆಗಳು ಪೂರ್ಣಗೊಳಿಸಲು ಹೆಚ್ಚಿನ ಪ್ರಾಶಸ್ತ್ಯ ನೀಡಿ ಇತ್ಯರ್ಥ ಮಾಡಲಾಗುವುದು" ಎಂದರು.
"ಕೋವಿಡ್ ಕರಿನೆರಳಿನಿಂದ ಹೊರಬಂದಿರುವುದರಿಂದ ಅಭಿವೃದ್ಧಿ ಪರ್ವ ಈಗ ಶುರುವಾಗಿದೆ. ಯೋಜನಾಬದ್ಧವಾಗಿ ರಾಜ್ಯವನ್ನು ಅಭಿವೃದ್ಧಿಗೊಳಿಸಲು ತಳಪಾಯವನ್ನು ಹಾಕಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಂಡವಾಳ ಹೂಡಿಕೆಗೆ ಒತ್ತು; "ಕೈಗಾರಿಕೆಗೆ ಬಜೆಟ್ನಲ್ಲಿ ಘೋಷಣೆ ಮಾಡಿರುವಂತೆ ಜಮೀನು ಗುರುತಿಸುವಿಕೆ, ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆ ಆಕರ್ಷಿಸಲು ಹೆಚ್ಚಿನ ಒತ್ತು ನೀಡಲಾಗಿದೆ. ಇವುಗಳಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.
"ಮಹಿಳೆಯರ ಸಬಲೀಕರಣಕ್ಕೆ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಅದಕ್ಕೆ ರೂಪುರೇಷೆಗಳನ್ನು ನೀಡಲಾಗುತ್ತಿದೆ. ಕೃಷಿ ಸೆಕಂಡರಿ ನಿರ್ದೇಶನಾಲಯವನ್ನು ಸ್ಥಾಪಿಸಲು ಆದೇಶ ಮಾಡಲಾಗಿದೆ. ಶೀಘ್ರ ದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು" ಎಂದರು.
"ಹುಬ್ಬಳ್ಳಿಗೆ ಸಂಬಂಧಿಸಿದಂತೆ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗೆ ಈಗಾಗಲೇ ಮೇಲ್ವಿಚಾರಣಾ ಮಂಡಳಿಯಲ್ಲಿ ತೀರ್ಮಾನವಾಗಿದೆ. ಅದರನ್ವಯ ಆದಷ್ಟು ಬೇಗ ಸ್ಥಳ ನಿಗದಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅದಾದ ಕೂಡಲೇ ಕಟ್ಟಡ ನಿರ್ಮಾಣ ಮಾಡಲಾಗುವುದು. ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆಯನ್ನು ಜೊತೆಜೊತೆಯಲ್ಲಿಯೇ ಪ್ರಾರಂಭಿಸಲಾಗುವುದು" ಎಂದು ತಿಳಿಸಿದರು.
"ಕಲ್ಯಾಣ ಕರ್ನಾಟಕಕ್ಕೆ 3000 ಕೋಟಿ ನೀಡಲಾಗಿದ್ದು, ಈ ಬಾರಿ ಏಪ್ರಿಲ್ ತಿಂಗಳೂಳಗೆ ಹಣ ಬಿಡುಗಡೆಗೆ ಕಾರ್ಯಾದೇಶ ನೀಡಲಾಗುವುದು. ಈ ವರ್ಷ 1400 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ" ಎಂದರು.
ನಿರಾತಂಕವಾಗಿ ಪರೀಕ್ಷೆ ಬರೆಯಲಿ: "ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು" ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.
"ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು" ಎಂದರು.












Click it and Unblock the Notifications