ಬೆದರಿಕೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ: ಬಿ ರಿಪೋರ್ಟ್ ತಳ್ಳಿ ಹಾಕಿದ ಹೈಕೋರ್ಟ್
ಹುಬ್ಬಳ್ಳಿ, ಸೆಪ್ಟೆಂಬರ್, 29: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಭಾರತೀಯ ಜನತಾ ಪಕ್ಷದ ನಾಯಕರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾಡ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣದ ಸಾಕ್ಷಿಯಾಗಿದ್ದ ಗುರುನಾಥಗೌಡ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪೊಲೀಸರು ವಿನಯ್ ಕುಲಕರ್ಣಿ ಪರ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿ ತನಿಖೆ ಮುಂದುವರಿಸುವಂತೆ ಆದೇಶಿಸಿದೆ.
ಅಸಮರ್ಪಕ ತನಿಖೆ ನಡೆಸಿದ ಧಾರವಾಡ ಉಪನಗರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ತನಿಖೆ ಮುಂದುವರಿಸುವಂತೆ ಸೂಚಿಸಿದೆ. ದೂರುದಾರ ಗುರುನಾಥಗೌಡ ಸಾಕ್ಷ್ಯವಾಗಿ ಸಿಡಿ ನೀಡಿದ್ದರೂ ಪೊಲೀಸರು ಪರಿಗಣಿಸಿಲ್ಲ ಎಂಬುದನ್ನು ಕೋರ್ಟ್ ಬೊಟ್ಟು ಮಾಡಿದೆ.

ಡಿಜಿಟಲ್ ಸಾಕ್ಷ್ಯ ಪರಿಗಣಿಸದೇ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಆರೋಪಿಗಳನ್ನು ತನಿಖೆಗೆ ಒಳಪಡಿಸದೇ ಬೇಜವಾಬ್ದಾರಿ ತೋರಿದ್ದಾರೆ. ತನಿಖೆಗೆ ಸರ್ಕಾರದ ಪೂರ್ವಾನುಮತಿ ಬೇಕೆಂದು ತಪ್ಪು ಮಾಹಿತಿ ನೀಡಲಾಗಿದೆ. ತನಿಖಾಧಿಕಾರಿ ಕಾನೂನು ಅರಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣದ ಮರುತನಿಖೆ ನಡೆಸುವಂತೆ ನ್ಯಾಯಾಧೀಶಾದ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ.
ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್ಗೆ ಮನವಿ ಸಲ್ಲಿಸಿದ್ದ ಕುಲಕರ್ಣಿಗೆ ಅನುಮತಿ ಸಿಗುತ್ತಲೇ ಇಲ್ಲ. ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು.
ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದ್ದು, ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಆದ್ದರಿಂದ ಬಿ ವರದಿ ಸಲ್ಲಿಕೆ ಸೂಕ್ತ ಸಮಯವಲ್ಲ ಎಂದಿದ್ದಾರೆ.












Click it and Unblock the Notifications