ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶ
ಹುಬ್ಬಳ್ಳಿ, ಡಿಸೆಂಬರ್ 16 : "ಉತ್ತರ ಕರ್ನಾಟಕದ ಉದ್ಯೋಗ, ಆರ್ಥಿಕತೆ ಬಲಪಡಿಸುವುದು ಹಾಗೂ ಬೆಂಗಳೂರು ಕೇಂದ್ರಿತವಾಗಿರುವ ಕೈಗಾರಿಕೆಗಳನ್ನು ರಾಜ್ಯದ ಎರಡನೇ ಹಂತದ ನಗರಗಳೆಡೆ ಸೆಳೆಯಲು ಬರುವ ಜನವರಿಯಲ್ಲಿ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ಆಯೋಜಿಸಲಾಗುತ್ತಿದೆ" ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಸೋಮವಾರ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಏರ್ಪಡಿಸಿದ್ದ
'ಇನ್ವೆಸ್ಟ್ ಕರ್ನಾಟಕ - ಹುಬ್ಬಳ್ಳಿ' ಸಮಾವೇಶದ ಪೂರ್ವಭಾವಿ ಸಭೆ ಉದ್ದೇಶಿಸಿ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿದರು.
"ಹೊಸ ಕೈಗಾರಿಕಾ ನೀತಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮಿಗಳ ಸಲಹೆಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶವನ್ನು ಆಯೋಜನೆ ಮಾಡಲಾಗುತ್ತದೆ" ಎಂದರು.

"ಉತ್ತರ ಕರ್ನಾಟಕದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರದೇಶಗಳು, ಹಳೆಯ ಮೈಸೂರು, ಕರಾವಳಿ ಹಾಗೂ ಮಲೆನಾಡು ಭಾಗಗಳ ಎರಡನೇ ಹಂತದ ಪ್ರಮುಖ ನಗರಗಳನ್ನು ಕೈಗಾರಿಕೋದ್ಯಮಗಳ ನೆಲೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು" ಎಂದು ಸಚಿವರು ಭರವಸೆ ನೀಡಿದರು.
"ಈಗಾಗಲೇ ಕೈಗಾರಿಕೋದ್ಯಮಿಗಳನ್ನು ವೈಯಕ್ತಿಕವಾಗಿ ಸಂಪರ್ಕಿಸಲಾಗಿದೆ. ಇದೇ ಡಿ.23 ರಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರೊಂದಿಗೆ ಮುಂಬೈ ನಗರದಲ್ಲಿ ರೋಡ್ ಶೋ ನಡೆಸಿ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿ ಸಮಾವೇಶಕ್ಕೆ ಆಹ್ವಾನಿಸಲಾಗುತ್ತದೆ" ಎಂದು ಜಗದೀಶ್ ಶೆಟ್ಟರ್ ಹೇಳಿದರು.
"ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೇಶದ ಸುಮಾರು 18 ಪ್ರಮುಖ ನಗರಗಳಿಗೆ ವಾಯು ಮಾರ್ಗದ ಸಂಪರ್ಕವಿದೆ. ಬಹುತೇಕ ಎಲ್ಲಾ ವಿಮಾನಗಳೂ ಶೇ.80-90 ರಷ್ಟು ಭರ್ತಿಯಾಗುತ್ತಿವೆ. ಬೆಳಗಾವಿ, ಕಲಬುರಗಿ ವಿಮಾನ ನಿಲ್ದಾಣಕ್ಕೂ ಈಗ ಸಂಪರ್ಕ ಸುಲಭವಾಗಿದೆ" ಎಂದರು.
"ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸಂಪರ್ಕಿಸುವ ಬಹುತೇಕ ಎಲ್ಲಾ ರಸ್ತೆಗಳು ಕೂಡ ರಾಷ್ಟ್ರೀಯ ಹೆದ್ದಾರಿಗಳಾಗಿವೆ. ಮುಂಬೈ- ಬೆಂಗಳೂರು ಮಾರ್ಗವನ್ನು ಕೇಂದ್ರ ಸರ್ಕಾರ ಈಗಾಗಲೇ ಕೈಗಾರಿಕಾ ಕಾರಿಡಾರ್ ಆಗಿ ಘೋಷಿಸಿರುವುದರಿಂದ, ಪೂನಾ- ಬೆಂಗಳೂರು ರಸ್ತೆಯನ್ನು ಅಷ್ಟಪಥ ರಸ್ತೆಯನ್ನಾಗಿಸಿ ಅಭಿವೃದ್ಧಿ ಪಡಿಸಲು ಕೇಂದ್ರ ಅನುದಾನ ನೀಡಲಿದೆ. ಈ ರಸ್ತೆಯನ್ನು ಎಕ್ಸ್ ಪ್ರೆಸ್ ವೇ ಆಗಿ ಪರಿವರ್ತಿಸಲು ಕೋರಲಾಗಿದೆ" ಎಂದು ಸಚಿವರು ಮಾಹಿತಿ ನೀಡಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಕಿರಣ ಅಡವಿ, ಉಪ ನಿರ್ದೇಶಕ ಮೋಹನ್ ಭರಮಕ್ಕನವರ, ಸಹಾಯಕ ನಿರ್ದೇಶಕರಾದ ಎನ್.ಎಂ.ಭೀಮಪ್ಪ, ಶಿವಪುತ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications