ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಕಳಪೆ ಮನೆ ನಿರ್ಮಾಣ: ಶೆಟ್ಟರ್
ಹುಬ್ಬಳ್ಳಿ, ಜುಲೈ 03 : ರೈಲು ಯೋಜನೆಗಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಐಎಚ್ ಡಿಸಿ ಯೋಜನೆ ಅಡಿಯಲ್ಲಿ ಇಲ್ಲಿನ ಕನ್ಯಾ ನಗರದಲ್ಲಿ ನಿರ್ಮಿಸಿರುವ ಮನೆಗಳನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಸೋಮವಾರ ಪರಿಶೀಲಿಸಿದರು.
ರೈಲ್ವೆ ಯೋಜನೆಗಳಿಗಾಗಿ ಮನೆ ಕಳೆದುಕೊಂಡವರಿಗೆ ಪುನರ್ವಸತಿಗಾಗಿ ನಿರ್ಮಿಸಿರುವ ಈ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ ಹಾಗೂ ಮನೆಗಳ ಗುಣಮಟ್ಟ ಕಳಪೆಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಯಿತು.

ಬಳಿಕ ಮಾತನಾಡಿದ ಜಗದೀಶ ಶೆಟ್ಟರ್, "ಒಟ್ಟು 13 ಕೋಟಿ ವೆಚ್ಚದಲ್ಲಿ ಧಾರವಾಡದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾಗಿರುವ ಈ ಮನೆಗಳು ಸಂಪೂರ್ಣ ಕಳಪೆಯಾಗಿದ್ದು, ನಿರ್ಮಾಣಕ್ಕೆ ಕಳಪೆ ವಸ್ತುಗಳನ್ನು ಉಪಯೋಗಿಸಲಾಗಿದೆ" ಎಂದು ಆರೋಪಿಸಿದರು.
ಮನೆಗಳು ವಾಸಕ್ಕೆ ಯೋಗ್ಯವಾಗಿಲ್ಲ. ಇದರಿಂದ ಸರ್ಕಾರದ ಹಣ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಮಂಡಳಿಯ ಉನ್ನತ ಅಧಿಕಾರಿಗಳು ಈ ಕುರಿತು ಸಮಗ್ರ ತನಿಖೆ ನಡೆಸಬೇಕು. ಕಾಮಗಾರಿ ಕಳಪೆಯಾಗಲು ಕಾರಣರಾದ ಅಂದಿನ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಫಲಾನುಭವಿಗಳ ಆಯ್ಕೆಯಲ್ಲಿಯೂ ಅವ್ಯವಹಾರವಾಗಿದ್ದು, ಯೋಜನೆಯಲ್ಲಿ ನಿರಾಶ್ರಿತರಲ್ಲದವರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂಬ ಆರೋಪವಿದೆ. ಇದನ್ನೂ ಸಹ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಬೇಕು. ಒಂದು ವೇಳೆ ಅಕ್ರಮ ನಡೆದಿದ್ದರೆ ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶೆಟ್ಟರ್ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರಣ್ಯ ನಗರ, ವಲ್ಲಭಾಯಿ ನಗರ, ಸುಡಗಾಡ ಚಾಳ, ಮಂಟೂರ ರಸ್ತೆ, ಹಾಗೂ ಮತ್ತಿತರ ಬಡಾವಣೆಗಳಲ್ಲಿ ನಿರ್ಮಾಣವಾಗಿರುವ ಮನೆಗಳನ್ನು ಪರಿಶೀಲಿಸಿದರು.












Click it and Unblock the Notifications