'ಜನಾರ್ದನ ರೆಡ್ಡಿ ಕಾಂಗ್ರೆಸ್ ಸೇರ್ಪಡೆ ಹೈಕಮಾಂಡ್ ಗೆ ಬಿಟ್ಟಿದ್ದು'
ಹುಬ್ಬಳ್ಳಿ, ಫೆಬ್ರವರಿ 15: ಕಾಂಗ್ರೆಸ್ ಒಂದು ದೊಡ್ಡ ಪಕ್ಷ. ಇದಕ್ಕೆ ಹಲವಾರು ಬಾಗಿಲುಗಳು ಇವೆ. ಯಾವಾಗಲಾದರೂ ಯಾರಾದರೂ ಯಾವ ಬಾಗಿಲಿನಿಂದ ಬರಬಹುದು. ಈ ಬಗ್ಗೆ ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಅವರು ಜನಾರ್ದನ ರೆಡ್ಡಿ ಕಾಂಗ್ರೆಸ್ ಸೇರ್ಪಡೆ ವದಂತಿ ಬಗ್ಗೆ ಇಲ್ಲಿ ಪ್ರತಿಕ್ರಿಯಿಸಿದರು.
ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಹೇಳಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಕಲಘಟಗಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಬಳ್ಳಾರಿಯಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ತೆರೆಮರೆಯ ಚಾಣಾಕ್ಷನಿಗೆ ಸಿಕ್ತು ಹೊಸ ನೆಲೆ
ಕಲಘಟಗಿಯಲ್ಲಿ ಕೆಲವು ಕಾರ್ಯಕರ್ತರ ಮಧ್ಯೆ ಅಸಮಾಧಾನ ಇದೆ. ಚುನಾವಣೆ ವೇಳೆಗೆ ಎಲ್ಲವೂ ಸರಿ ಹೋಗುತ್ತದೆ. ಕಳೆದ ಹತ್ತು ವರ್ಷಗಳಿಂದ ಕಲಘಟಗಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಅದು ಜನರ ಮುಂದಿದೆ. ಕಲಘಟಗಿ ಕ್ಷೇತ್ರದ ಜನ ನನ್ನನ್ನು ಯಾವತ್ತೂ ಕೈ ಬಿಡುವುದಿಲ್ಲ ಎಂದು ಹೇಳಿದರು.
ಶಾಸಕ ಸುರೇಶಬಾಬು ಕಾಂಗ್ರೆಸ್ ಪಕ್ಷಕ್ಕೆ ಬರುವುದಿಲ್ಲ. ಅವರು ಬಿಜೆಪಿಯಲ್ಲಿ ಇರುತ್ತಾರೆ. ಆ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ ಎಂದರು. ಹುಬ್ಬಳ್ಳಿಗೆ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ನೆಹರೂ ಮೈದಾನವನ್ನು ವೀಕ್ಷಣೆ ಮಾಡಿದರು ಸಚಿವರು.
ಫೆಬ್ರವರಿ 26ರಂದು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಬಹಿರಂಗ ಸಮಾವೇಶ ಇದ್ದು, ಸಚಿವರಾದ ವಿನಯ ಕುಲಕರ್ಣಿ, ಸಂತೋಷ ಲಾಡ್, ಮಾಣಿಕ್ಕಂ ಟ್ಯಾಗೂರ್ ಸೇರಿದಂತೆ ಕಾಂಗ್ರೆಸ್ ನ ಅನೇಕ ಮುಖಂಡರು ಮೈದಾನ ವೀಕ್ಷಣೆ ಮಾಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.