ಹುಬ್ಬಳ್ಳಿ: ಕಳಸಾ-ಬಂಡೂರಿಗೆ ಆಗ್ರಹಿಸಿ ಪ್ರತಿಭಟನೆ
ಹುಬ್ಬಳ್ಳಿ, ಜುಲೈ 15: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮಸ್ಥರು ಜುಲೈ 15 ರಂದು ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಅಂದಾಜು ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ರೈತರ ಪ್ರತಿಭಟನೆಯ ಬಿಸಿ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ತಟ್ಟಿದ್ದು, ಕಿಲೋಮಿಟರ್ ವರೆಗೂ ಸಾಲುಗಟ್ಟಿ ನಿಂತಿದ್ದವು.
ಸತತ ಬರಗಾಲದಿಂದ ಈ ಭಾಗದ ರೈತರು ಕಂಗೆಟ್ಟಿದ್ದಾರೆ. ಇದರ ಮಧ್ಯೆ ರೈತರಿಗೆ ದೊರೆಯಬೇಕಾದ ಬೆಳೆ ವಿಮೆ ಈವರೆಗೂ ತಲುಪಿಲ್ಲ. ಈ ಭಾಗದ ಹಲವು ದಶಕಗಳ ಬೇಡಿಕೆಯಾಗಿರುವ ಮಹದಾಯಿ, ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆ ರಾಜಕೀಯ ಕಿತ್ತಾಟದಿಂದ ಈವರೆಗೂ ಜಾರಿಯಾಗಿಲ್ಲ. ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಿಂಚಿತ್ತೂ ಗಮನ ಹರಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಸತತ ಬರಗಾಲದಿಂದ ಕಂಗೆಟ್ಟಿರುವ ರೈತರ ರಾಷ್ಟ್ರೀಕೃತ ಬ್ಯಾಂಕುಗಳ ಬೆಳೆ ಸಾಲಮನ್ನಾ ಮಾಡಬೇಕು. ಕಳಸಾ-ಬಂಡೂರಿ ನಾಲಾ ಜೋಡಣೆ ಯೋಜನೆ ಜಾರಿಗೊಳಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬೇಕು. ರೈತರಿಗೆ ದೊರೆಯಬೇಕಾದ ಬೆಳೆವಿಮೆಯನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಆಗ್ರಹಿಸಿದರು.












Click it and Unblock the Notifications