ಉದ್ಯಮದ ಎಲ್ಲಾ ರಂಗಗಳಲ್ಲಿ ಕನ್ನಡಿಗರು ಅಗ್ರಸ್ಥಾನದಲ್ಲಿರಬೇಕು: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಜುಲೈ 16: ಧಾರವಾಡ ಮತ್ತು ತುಮಕೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಅಗತ್ಯವಿರುವ ಶಾಸನಗಳಿಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ತಿದ್ದುಪಡಿ ತರಲಾಗುವುದು. ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದ ಮೂಲಕ ಮಾರುಕಟ್ಟೆಯನ್ನು ಗಳಿಸಿಕೊಳ್ಳಬಹುದು. ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಮಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದಲ್ಲಿ ಸ್ವಯಂ ಶಿಸ್ತು ತರುವ ಈ ಸಂಸ್ಥೆಗೆ ಎನ್ಎ ಬಿಎಲ್ ಮಾನ್ಯತೆ ದೊರೆತಿರುವುದು ಸಂತಸ ತಂದಿದೆ. ಹುಬ್ಬಳ್ಳಿಯ ಕೆಎಂಟಿಆರ್ಸಿ ಅತ್ಯಾಧುನಿಕ ಉಪಕರಣಗಳ ಪೂರೈಕೆಗಾಗಿ 4 ಕೋಟಿ ರೂಪಾಯಿ ಕೋರಿ ಸಂಸ್ಥೆ ಪ್ರಸ್ತಾವನೆ ಸಲ್ಲಿಸಿದೆ. ಸರಕಾರ ಹಣಕಾಸು ನೆರವು ನೀಡಲಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಎಫ್ಎಂಜಿಸಿ ಕ್ಲಸ್ಟರ್ ಸ್ಥಾಪನೆ ಮೂಲಕ ಒಂದು ಲಕ್ಷ ಉದ್ಯೋಗ ಸೃಜನೆಯಾಗಲಿವೆ. ಉತ್ತರ ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಇದು ಮಹತ್ವದ ಪಾತ್ರ ವಹಿಸಲಿದೆ. ಬಜೆಟ್ ಘೋಷಿತ ಈ ಕಾರ್ಯಕ್ರಮಕ್ಕೆ ಈಗಾಗಲೇ ಆದೇಶವನ್ನು ಕೂಡ ಹೊರಡಿಸಲಾಗಿದೆ ಎಂದರು.

ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಶಾಸನಗಳ ತಿದ್ದುಪಡಿ
ಧಾರವಾಡ ಮತ್ತು ತುಮಕೂರು ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಶಾಸನಗಳ ತಿದ್ದುಪಡಿ ಅಗತ್ಯವಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ತಿದ್ದುಪಡಿಗಳನ್ನು ತರಲಾಗುವುದು. ಭವಿಷ್ಯದಲ್ಲಿ ಈ ಭಾಗದ ನಗರಗಳು ಬೃಹತ್ ಕೈಗಾರಿಕಾ ನಗರಗಳಾಗಿ ಅಭಿವೃದ್ಧಿ ಹೊಂದಲಿವೆ. ಕೈಗಾರಿಕಾ ಉತ್ಪನ್ನಗಳು ತಮ್ಮ ಗುಣಮಟ್ಟ ಕಾಯ್ದುಕೊಂಡರೆ ಮಾರುಕಟ್ಟೆ ತಾನಾಗಿಯೇ ಸೃಷ್ಟಿಯಾಗುತ್ತದೆ.

ಹೂಡಿಕೆದಾರರ ಸಮ್ಮೇಳನದಲ್ಲಿ ಕನ್ನಡಿಗರು ಭಾಗವಹಿಸಲು ಸಿಎಂ ಕರೆ
ಕಠಿಣ ಪರಿಶ್ರಮದಿಂದ ಸಣ್ಣ ಕೈಗಾರಿಕೆಗಳನ್ನು ಬೃಹತ್ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಬಹುದು. ಉದ್ಯಮಿಗಳು ಸಾಹಸಿಗಳಾಗಬೇಕು. ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು. ಬರುವ ನವೆಂಬರ್ 2 ಹಾಗೂ 3 ರಂದು ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಸ್ಥಳೀಯ ಕನ್ನಡಿಗ ಉದ್ದಿಮೆದಾರರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದೆ. ಉದ್ಯಮದ ಎಲ್ಲಾ ರಂಗಗಳಲ್ಲಿ ಕನ್ನಡಿಗರು ಅಗ್ರಸ್ಥಾನದಲ್ಲಿ ಇರಬೇಕು ಎಂದು ಮುಖ್ಯಮಂತ್ರಿಯವರು ಆಶಯ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಲು ಸೂಚನೆ
ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ತಿಳಿಸಿದರು.
ಉತ್ತರ ಕರ್ನಾಟಕ ಪ್ರವಾಸದ ಬಗ್ಗೆ ಜಿಲ್ಲಾಧಿಕಾರ ಜೊತೆಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ್ದೇನೆ. ಬೀದರ್, ಬೆಳಗಾವಿ, ರಾಯಚೂರು ಸೇರಿದಂತೆ ಎಲ್ಲೆಡೆಯಿಂದ ವರದಿ ತರಿಸಿಕೊಂಡಿದ್ದೇನೆ. ಆದೇ ರೀತಿ ಆದೇಶವನ್ನು ಹೊರಡಿಸಿ ಎಲ್ಲೆಲ್ಲಿ ನದಿ ಪಾತ್ರದಲ್ಲಿ ಮಿತಿಗಿಂತ ನದಿ ಹೆಚ್ಚು ಹರಿಯುವ ಸಂಭವವಿದೆ. ಬೀದರ್, ಬೆಳಗಾವಿ ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಜಿಲ್ಲಾಧಿಕಾರಿಗಳೊಂದಿಗೆ ಇಲ್ಲಿನ ಜಿಲ್ಲಾಧಿಕಾರಿಗಳು, ಅಧಿಕಾರಿಗಳು, ಡ್ಯಾಮ್ ಸಂಬಂಧಿತ ಅಧಿಕಾರಿಗಳು ಸಂಪರ್ಕದಲ್ಲಿ ಇರಲು ತಿಳಿಸಿದ್ದೇನೆ, ಅಲ್ಲಿ ಡ್ಯಾಮ್ಗೆ ಸಂಬಂಧಿತ ಅಧಿಕಾರಿಗಳು ಸಂಪರ್ಕದಲ್ಲಿ ಇರಲು ತಿಳಿಸಿದ್ದೇನೆ. ಈ ಹಿಂದೆ ಪ್ರವಾಹ ಪರಿಸ್ಥಿತಿ ನಿಭಾಯಿಸಿದ ಅನುಭವದ ಮೇಲೆ ಪರಿಸ್ಥಿತಿ ನಿಭಾಯಿಸಲು ತಿಳಿಸಲಾಗಿದೆ ಎಂದರು.

ಮೇ ತಿಂಗಳಲ್ಲಿ ಬಿದ್ದ ಮನೆಗೂ ಪರಿಹಾರ
ಮಳೆಯಿಂದ ಮನೆಗಳು ಬಿದ್ದರೇ ಕೂಡಲೇ 10 ಸಾವಿರ ಪರಿಹಾರ, ಪೂರ್ಣ ಪ್ರಮಾಣವಾಗಿ ಮನೆ ಬಿದ್ದರೇ ಐದು ಲಕ್ಷ 3 ಲಕ್ಷ 50 ಸಾವಿರ ಈ ತರಹದ ಎಬಿಸಿಯಾಗಿ ಪರಿಹಾರ ಕೊಡುವ ಕೆಲಸ ಮಾಡಲಾಗುತ್ತಿದೆ. ಬೆಳೆಹಾನಿಯಾದರೇ ಜಂಟಿ ಸರ್ವೇ ಮಾಡಿ ಕೇಂದ್ರಕ್ಕೆ ವರದಿ ಕಳಿಸಿಕೊಡುವ ಕೆಲಸ ಮಾಡಲಾಗುತ್ತಿದೆ. ಅದರಂತೆ ಕಳೆದ ಬಾರಿಯಂತೆ ಪರಿಹಾರ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಸ್ತೆ ರಿಪೇರಿಗಳಿಗೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗುವುದು. ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲ ಅಧಿಕಾರಿಗಳು ಸಹಕಾರದಿಂದ ಕೆಲಸ ಮಾಡಬೇಕು. ಮತ್ತೆ ಮತ್ತೆ ಪುನಃ ಪ್ರವಾಹ ಸಮಸ್ಯೆ ಎದುರಿಸುವ ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ತಿಳಿಸಿದ್ದೇನೆ. ಮೇ ತಿಂಗಳಲ್ಲಿ ಬಿದ್ದ ಮನೆಗಳಿಗೂ ಹೊಸ ನಿಯಮದ ಅನುಸಾರ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು ಎಂದರು.












Click it and Unblock the Notifications