ಮುಂದುವರೆದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಬಿಜೆಪಿ ಟಿಕೆಟ್ ರಹಸ್ಯ, ಹೈಕಮಾಂಡ್ ನಿಲುವೇನು?
ಹುಬ್ಬಳ್ಳಿ, ಏಪ್ರಿಲ್, 14: ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮಾತ್ರ ಬಿಜೆಪಿ ಟಿಕೆಟ್ ಘೋಷಣೆ ಆಗಿಲ್ಲ. ಮತ್ತೊಂದೆಡೆ ಮಾಜಿ ಪರಿಷತ್ ಸದಸ್ಯ ನಾಗರಾಜ ಛಬ್ಬಿ ಕಲಘಟಗಿಯ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಆರು ಬಾರಿ ಕೇಸರಿ ಬಾವುಟ ಹಾರಿಸಿ ಪಕ್ಷದ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ, ಸಭಾಪತಿ, ಸಚಿವ ಅಲ್ಲದೇ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿರುವ ಜಗದೀಶ್ ಶೆಟ್ಟರ್ ಅವರು ಪ್ರತಿನಿಧಿಸುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ ಆಗಿದೆ.

6 ಕ್ಷೇತ್ರಗಳಲ್ಲಿ ಅಧಿಕೃತ ಅಭ್ಯರ್ಥಿಗಳ ಘೋಷಣೆ
ಇತ್ತೀಚೆಗಷ್ಟೇ ವರಿಷ್ಠರ ಬುಲಾವ್ ಮೇರೆಗೆ ನವದೆಹಲಿಗೆ ತೆರಳಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವತಃ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಚರ್ಚಿಸಿದ್ದರು. ಆದರೂ ಕೂಡ ಎರಡನೇ ಪಟ್ಟಿಯಲ್ಲಿ ಅವರ ಹೆಸರು ಪ್ರಕಟಗೊಳ್ಳುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಕೇಸರಿ ಪಡೆಯ 6 ಕ್ಷೇತ್ರಗಳಲ್ಲಿ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ.
ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದ ಬಿಜೆಪಿ
ಇನ್ನು 1993ರಿಂದ ಈಚೆಗೆ ಕಮಲ ಪಾಳೆಯದ ಭದ್ರಕೋಟೆಯಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮೂರನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಚುನಾವಣಾ ರಾಜಕಾರಣದಿಂದ ದೂರ ಉಳಿಯುವ ವರಿಷ್ಠರ ಸಲಹೆ ಸೋಲಿಲ್ಲದ ಸರದಾರ ಶೆಟ್ಟರ್ಗೆ ನುಂಗಲಾರದ ತುತ್ತಾಗಿದ್ದು, ಅವರಿಗೆ ಟಿಕೆಟ್ ನೀಡುವುದೋ ಅಥವಾ ಈಗಾಗಲೇ ಮೌಖಿಕವಾಗಿ ತಿಳಿಸಿದಂತೆ ಹೊಸಬರಿಗೆ ಮಣೆ ಹಾಕುವುದೋ ಎನ್ನುವ ವಿಚಾರವೇ ಇದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಶೆಟ್ಟರ್ ಬದಲಿಗೆ ಸೆಂಟ್ರಲ್ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್, ಡಾ.ಮಹೇಶ್ ನಾಲವಾಡ ಹೆಸರುಗಳು ಮುಂಚೂಣಿಯಲ್ಲಿವೆ. ಕಳೆದ ಚುನಾವಣೆಯಲ್ಲಿ ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ 50 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಈಗ ಬಿಜೆಪಿಯದಲ್ಲಿರುವ ಈ ಮೂವರ ಹೆಸರು ಮುಂಚೂಣಿಯಲ್ಲಿವೆ. ಅಲ್ಲದೇ ಸಂಘ ಪರಿವಾರದ ಹಿನ್ನೆಲೆಯ ಜಯತೀರ್ಥ ಕಟ್ಟಿ ಹೆಸರು ಕೂಡ ಅಂತಿಮ ಕ್ಷಣದಲ್ಲಿ ಸೇರ್ಪಡೆಯಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಈ ಕ್ಷೇತ್ರದಲ್ಲಿ 17 ಪಾಲಿಕೆ ಸದಸ್ಯರು ಬಿಜೆಪಿ ಪ್ರತಿನಿಧಿಸುತ್ತಿದ್ದು, (ಮೂವರು ಪಕ್ಷೇತರರು ಸೇರಿ) ಮೊದಲ ಬಾರಿ ಕ್ಷತ್ರೀಯ ಸಮಾಜದವರೂ ಇಲ್ಲಿನ ಟಿಕೆಟ್ ಹಿಂದುಳಿದವರಿಗೆ ನೀಡಬೇಕೆಂಬ ಬೇಡಿಕೆ ಮುನ್ನೆಲೆಗೆ ಬಂದಿದೆ. ಇಂದು ರಾತ್ರಿ ಅಥವಾ ನಾಳೆ ಅಂತಿಮ ಪಟ್ಟಿ ಬಿಡುಗಡೆಗೊಳ್ಳಲಿದೆ ಸಾಧ್ಯತೆ ಇದೆ.
ಏಕಾಂಗಿಯಾದ ಜಗದೀಶ್ ಶೆಟ್ಟರ್
ಶೆಟ್ಟರ್ ಅವರನ್ನು ಶಸ್ತ್ರ ತ್ಯಜಿಸುವಂತೆ ಮಾಡಲು ವ್ಯವಸ್ಥಿತ ಯತ್ನ ನಡೆದಿದೆಯೇ ಎಂಬುದು ಬಿಜೆಪಿ ಪಾಳೆಯದಿಂದಲೇ ಕೇಳಿ ಬರುತ್ತಿರುವ ಮಾತಾಗಿದೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಶೆಟ್ಟರ್, ಈಶ್ವರಪ್ಪ ಸೇವೆ ಬೇರೆ ರಾಜ್ಯಗಳಿಗೆ ಬಳಸಿಕೊಳ್ಳಲಾಗುವುದು ಎನ್ನುವ ಮೂಲಕ ರಾಜ್ಯಪಾಲ ಹುದ್ದೆಯ ಮುನ್ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಒಂದು ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಟಿಕೆಟ್ ನಿರಾಕರಿಸಿದಲ್ಲಿ ಅವರು ಬಂಡಾಯ ಎದ್ದು, ಸ್ವತಂತ್ರವಾಗಿ ಕಣಕ್ಕಿಳಿದು ಸೆಡ್ಡು ಹೊಡೆಯುವರೋ ಅಥವಾ ಪಕ್ಷ ಹೇಳಿದವರನ್ನು ಬೆಂಬಲಿಸುತ್ತಾರೆಯೋ ಎಂಬುದನ್ನು ಕಾದುನೋಡಬೇಕಾಗಿದೆ.
ಅನೇಕ ಹಾಲಿ ಶಾಸಕರಿಗೆ ಕೋಕ್
ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದ್ದು, ಈ ಬಾರಿ ಶತಾಯಗತಾಯ ಮತ್ತೆ ಅಧಿಕಾರ ಬರಲು ಪಣ ತೊಟ್ಟಿರುವ ಬಿಜೆಪಿ ಬುಧವಾರ ತಡರಾತ್ರಿ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿ ಹೈಮಾಂಡ್ ಅನೇಕ ಹಾಲಿ ಶಾಸಕರಿಗೆ ಕೋಕ್ ಕೊಟ್ಟಿದ್ದು, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದವರಿಗೆ ಸ್ಪರ್ಧೆಗೆ ಅವಕಾಶ ನೀಡಿದೆ.
ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ ಛಬ್ಬಿಗೆ ಬಿಜೆಪಿ ಮಣೆ ಹಾಕಿದ್ದು, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಬಿಜೆಪಿ ನಾಯಕರು ಅವಕಾಶ ಕಲ್ಪಿಸಿದ್ದಾರೆ. ಈಗಾಗಲೇ ಹಾಲಿ ಶಾಸಕ ಸಿ.ಎಂ.ನಿಂಬಣ್ಣವರ ಅವರಿಗೆ ಟಿಕೆಟ್ ತಪ್ಪಿಸಿ ನಾಗರಾಜ ಛಬ್ಬಿಗೆ ಟಿಕೆಟ್ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications