ಧಾರವಾಡ ಪ್ರವೇಶ ಅನುಮತಿಗೂ ಮುನ್ನವೇ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಟಿಕೆಟ್
ಧಾರವಾಡ, ಏಪ್ರಿಲ್ 6: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿದೆ.
ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಪ್ರಕರಣದ ವಿಚಾರಣೆ ಅಂತಿಮಗೊಳ್ಳುವ ಮೊದಲೇ ಕಾಂಗ್ರೆಸ್ ಟಿಕೆಟ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಅನುಮತಿಯನ್ನು ನಿರಾಕರಿಸಿತ್ತು. ಹೀಗಾಗಿ ವಿನಯ್ ಕುಲಕರ್ಣಿಗೆ ಮತ್ತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶದ ಅನುಮತಿಯ ತೀರ್ಮಾನವನ್ನು ಸ್ಥಳೀಯ ನ್ಯಾಯಾಲಯಕ್ಕೆ ವಹಿಸಿತ್ತು.
ಸದ್ಯ ಧಾರಾವಾಡ ಸ್ಥಳೀಯ ನ್ಯಾಯಾಲಯದಲ್ಲಿ ಯೋಗೀಶ್ ಗೌಡ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶದ ಬಗ್ಗೆ ಈವರೆಗೂ ನ್ಯಾಯಾಲಯ ತೀರ್ಪು ನೀಡಿಲ್ಲ. ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ, ಕಾನೂನಾತ್ಮಕವಾಗಿ ತೀರ್ಮಾನ ಅಂತಿಮಗೊಂಡಿಲ್ಲ. ಆದರೆ ಕೋರ್ಟ್ ತೀರ್ಪಿಗೂ ಮೊದಲೇ ಕಾಂಗ್ರೆಸ್ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರು ಅಂತಿಮಗೊಳಿಸಿದೆ.
ಇನ್ನೇನು ಕೆಲವೇ ದಿನಗಳಲ್ಲಿ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶದ ಬಗ್ಗೆ ನ್ಯಾಯಾಲಯದ ತೀರ್ಪು ಹೊರ ಬೀಳಲಿದ್ದು, ಒಂದು ವೇಳೆ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಸಿಕ್ಕರೆ ಧಾರವಾಡ ಗ್ರಾಮೀಣ ಕ್ಷೇತ್ರದ ರಾಜಕೀಯ ರಣಕಣ ಮತ್ತಷ್ಟು ರಂಗೇರಲಿದೆ. ಇನ್ನು ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ಸಿಗದಿದ್ದರೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಸಹ ಕೇಳಿ ಬರುತ್ತಿದೆ.

ಇನ್ನು ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್ ನೀಡಬೇಕು ಎಂದು ಅವರ ಅಭಿಮಾನಿಗಳು ಇತ್ತೀಚೆಗಷ್ಟೇ ಅವರ ಮನೆ ಎದುರು ಉಪವಾಸ ಸತ್ಯಾಗ್ರಹ ಮಾಡಿದ್ದರು. ಪರ-ವಿರೋಧಗಳ ನಡುವೆ ಇದೀಗ ವಿನಯ್ ಕುಲಕರ್ಣಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ನಡೆಸಲು ಒಪ್ಪಿಗೆ ಬಂದಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಂತಾಗಿದೆ. ವಿನಯ್ ಕುಲಕರ್ಣಿ ಅವರು ಜಿಲ್ಲೆಯ ಹೊರಗಿದ್ದುಕೊಂಡೇ ಚುನಾವಣೆ ಎದುರಿಸುತ್ತಾರೋ ಅಥವಾ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ಸಿಗಲಿದೆಯೋ ಕಾದು ನೋಡಬೇಕಿದೆ.
ಇಸ್ಮಾಯಿಲ್ ತಮಟಗಾರಗೆ ನಿರಾಸೆ
ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಮಧ್ಯೆ ಟಿಕೆಟ್ಗಾಗಿ ಪೈಪೋಟಿ ಏರ್ಪಟ್ಟಿತ್ತು. ಸದ್ಯ ಧಾರವಾಡ ಜಿಲ್ಲೆಯಿಂದ ಹೊರಗಿರುವ ವಿನಯ್ ಕುಲಕರ್ಣಿ 2023ರ ವಿಧಾನಸಭಾ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆಸುವುದು ಅಂತಿಮವಾಗಿದೆ. ಇದರಿಂದ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಇಸ್ಮಾಯಿಲ್ ತಮಟಗಾರಗೆ ನಿರಾಸೆಯಾಗಿದ್ದು, ಮರಳಿ ಜೆಡಿಎಸ್ ಸೇರ್ಪಡೆ ಆಗಲು ಸಜ್ಜಾಗಿದ್ದಾರೆ ಎನ್ನಲಾಗಿದೆ.












Click it and Unblock the Notifications