ಶೆಟ್ಟರ್ಗೆ ಶಾಕ್ ನೀಡಿದ ಬಿಎಸ್ವೈ, ಜೋಶಿ: ಬಿಜೆಪಿ ಸೇರಿದ ಹು-ಧಾ ಪಾಲಿಕೆ ಮಾಜಿ ಮೇಯರ್
ಬಿಸಿಲಿನ ಝಳದಂತೆ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದೆ. ಮತದಾರನ ಓಲೈಕೆಗೆ ಮುಂದಾಗಿರುವ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಉತ್ತರ ಕರ್ನಾಟಕದಲ್ಲಂತೂ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರಗಳನ್ನು ಬಿಜೆಪಿ ಹೈಕಮಾಂಡ್ ಸವಾಲಾಗಿ ಸ್ವೀಕರಿಸಿದೆ. ಬಿಜೆಪಿಗೆ ಇಡೀ 222 ಕ್ಷೇತ್ರಗಳು ಒಂದು ತೂಕವಾದರೆ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತ್ತು ಅಥಣಿ ಕ್ಷೇತ್ರಗಳೇ ಒಂದು ತೂಕವಾಗಿರಲಿವೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಸೋಲಿಸಲು ಮತ್ತು ಅಥಣಿಯಲ್ಲಿ ಲಕ್ಷ್ಮಣ ಸವದಿ ಸೋಲಿಸಲು ರಣತಂತ್ರ ರೂಪಿಸಿರುವ ಬಿಜೆಪಿ, ಬೇರೆ ಬೇರೆ ಪಕ್ಷದ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆದುಕೊಳ್ಳುತ್ತಿದೆ.
ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿರುವ ಕೇವಲ ಹತ್ತೇ ದಿನದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಘಟಾನುಘಟಿ ಬಿಜೆಪಿ ನಾಯಕರುಗಳು ಸರಣಿ ಸಭೆಗಳನ್ನು ಮಾಡಿದ್ದು, ಶೆಟ್ಟರ್ ಸೋಲಿಸಲು ಬೇಕಾದ ಎಲ್ಲಾ ರಣವ್ಯೂಹ ಹಣೆಯುತ್ತಿದ್ದಾರೆ.

ಹುಬ್ಬಳ್ಳಿ- ಧಾರವಾಡ ಪಾಲಿಕೆ ಸದಸ್ಯರನ್ನು ಹಾಗೂ ಪಕ್ಷದ ಪದಾಧಿಕಾರಿಗಳು ಜಗದೀಶ್ ಶೆಟ್ಟರ್ ಹಿಂದೆ ಹೋಗದಂತೆ ಹಿಡಿದಿಟ್ಟುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಷ್ಟೆ ಅಲ್ಲದೇ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೂ ಗಾಳ ಹಾಕುತ್ತಿದ್ದು, ಮೊದಲ ಹಂತವಾಗಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್ ಪ್ರಕಾಶ್ ಕ್ಯಾರಕಟ್ಟಿ ಅವರನ್ನು ಬಿಜೆಪಿಗೆ ಸೆಳೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ಗೆ ಶಾಕ್ ನೀಡಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಆಪರೇಶನ್ ಕಮಲ ಯಶಸ್ವಿಯಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮೇಯರ್ ಪ್ರಕಾಶ್ ಕ್ಯಾರಕಟ್ಟಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದು ಜಗದೀಶ್ ಶೆಟ್ಟರ್ಗೆ ದೊಡ್ಡ ಹಿನ್ನಡೆ ಎಂದು ಹೇಳಲಾಗಿದೆ.

ಪ್ರಕಾಶ್ ಕ್ಯಾರಕಟ್ಟಿ ಮಾತ್ರವಲ್ಲದೆ, ಸ್ಥಳೀಯ ಮುಖಂಡರಾದ ಸದಾಶಿವ ಕಾರಡಗಿ, ಹನುಮಂತ ನಿರಂಜನ್ ಕೂಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಈ ಮೂಲಕ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಮುನ್ನ ಜಗದೀಶ್ ಶೆಟ್ಟರ್ಗೆ ಆಘಾತ ನೀಡಲಾಗಿದೆ.
ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿರುವ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಟಿಕೆಟ್ ಸಿಗದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಆರೋಪ ಮಾಡಿದ ಕಾರಣ ಈ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಬಿಜೆಪಿಯಲ್ಲಿ ರಣತಂತ್ರ ಹೆಣೆಯಲಾಯಿತು.
ಬಿಜೆಪಿ ಹೈಕಮಾಂಡ್ ಸೇರಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್ ಸೋಲಿಗೆ ಟೊಂಕಕಟ್ಟಿ ನಿಂತಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಹೊತ್ತಿದ್ದಾರೆ.
ಚುನಾವಣಾ ಅಖಾಡದಲ್ಲಿ ಜಾತಿ, ನಂಬಿಕೆ ದ್ರೋಹ, ಸಿದ್ಧಾಂತ, ಸಂಘ ಪರಿವಾರ, ಹಿಂದುತ್ವ ಹೀಗೆ ನಾನಾ ಅಸ್ತ್ರಗಳನ್ನು ಜಗದೀಶ್ ಶೆಟ್ಟರ್ ವಿರುದ್ಧ ಪ್ರಯೋಗಿಸುತ್ತಿದ್ದಾರೆ.
ಹೈಕಮಾಂಡ್ ಮನವೊಲಿಕೆಗೂ ಬಗ್ಗದ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್ಬೈ ಹೇಳಿ ಕಾಂಗ್ರೆಸ್ ಸೇರಿದರು. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಸೋಲಿಸಲು ಸರಣಿ ಸಭೆ ಮಾಡುತ್ತಿದ್ದಾರೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಆಗುಬಹುದಾಗಿದ್ದ ಲಿಂಗಾಯತ ಡ್ಯಾಮೇಜ್ ಕಂಟ್ರೋಲ್ಗೆ ಕೈ ಹಾಕಿದರು.
ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಯಲ್ಲಿ ಪ್ರಮುಖರ ಸಭೆ ನಡೆಸಿ ಲಿಂಗಾಯತ ನಾಯಕರಿಗೆ ಅನ್ಯಾಯ ಮಾಡಿಲ್ಲ ಎನ್ನುವ ಸಂದೇಶ ರವಾನಿಸಿದರು. ಖುದ್ದು ಬಿ.ಎಸ್. ಯಡಿಯೂರಪ್ಪ ಅವರೇ ಜಗದೀಶ್ ಶೆಟ್ಟರ್ ಸೋಲಿಸುವ ಹೊಣೆ ಹೊತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವಿಗೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಹೆಗಲು ಕೊಟ್ಟು ಶ್ರಮಿಸುತ್ತಿದ್ದಾರೆ. ಇವರ ಜೊತೆ ಸಂಘ ಪರಿವಾರವು ಜೊತೆಗೆ ನಿಂತಿದೆ.












Click it and Unblock the Notifications