BSY on Jagadish Shettar: ನಾನು ಕೆಜೆಪಿ ಕಟ್ಟಿ ಅಪರಾಧ ಮಾಡಿದ್ದೆ, ಆದರೆ...; ಶೆಟ್ಟರ್ ವಿರುದ್ಧ ಬಿಎಸ್ವೈ ವಾಗ್ದಾಳಿ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮತಬೇಟೆ ಜೋರಾಗಿದೆ. ಅಲ್ಲದೇ ರಾಜಕೀಯ ಪಕ್ಷಗಳ ಮತ್ತು ನಾಯಕರ ಆರೋಪ ಮತ್ತು ಪ್ರತ್ಯಾರೋಪಗಳು ನಡೆಯುತ್ತಿವೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಬಿಜೆಪಿ ನಾಯಕರು ತಿರುಗಿ ಬಿದ್ದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಸೋಲಿಸಲು ರಣತಂತ್ರ ರೂಪಿಸಿದ್ದಾರೆ.

ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಜಗದೀಶ್ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಪಕ್ಷದಿಂದ ಎಲ್ಲ ಹುದ್ದೆ ಮತ್ತು ಲಾಭ ಪಡೆದು ಕಾಂಗ್ರೆಸ್ ಸೇರಿ ಬಿಜೆಪಿಗೆ ದ್ರೋಹ ಬಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬುಧವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, "ನಾನು ಈ ಹಿಂದೆ ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿ ಅಪರಾಧ ಮಾಡಿದ್ದೆ. ಈ ಬಗ್ಗೆ ರಾಜ್ಯದ ಜನರಲ್ಲಿ ನಾನು ಕ್ಷಮೆ ಕೇಳಿದ್ದೇನೆ. ಆದರೆ, ಜಗದೀಶ್ ಶೆಟ್ಟರ್ ರೀತಿ ಕಾಂಗ್ರೆಸ್ ಸೇರಿರಲಿಲ್ಲ," ಎಂದು ಹರಿಹಾಯ್ದರು.

" ಜಗದೀಶ್ ಶೆಟ್ಟರ್ ಬಿಜೆಪಿಗೆ ವಿಶ್ವಾಸದ್ರೋಹ ಮಾಡಿದ್ದಾರೆ, ವಿಶ್ವಾಸದ್ರೋಹಿಗಳನ್ನು ಕ್ಷಮಿಸುವುದಿಲ್ಲ. ಮತ್ತೆ ಬಿಜೆಪಿಗೆ ಬಂದರೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ," ಎಂದು ಕಡ್ಡಿ ತುಂಡು ಮಾಡಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ನಾಯಕರು ತಂತ್ರ ರೂಪಿಸಿದ್ದು, ಎರಡು ದಿನಗಳ ಹಿಂದೆ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
"ಟಿಕೆಟ್ ನಿರಾಕರಿಸಲು ಜಗದೀಶ್ ಶೆಟ್ಟರ್ ಅವರಿಗೆ ಕಾರಣ ನೀಡಿದ್ದೆವು. ಶೆಟ್ಟರ್ ಕಾಂಗ್ರೆಸ್ ಸೇರಿದ್ದರಿಂದ ಬಿಜೆಪಿ ಪಕ್ಷಕ್ಕೆ ನಷ್ಟವಿಲ್ಲ, ಈ ಬಾರಿ ಅವರು ಸೋಲಲಿದ್ದಾರೆ," ಎಂದು ಅಮಿತ್ ಶಾ ತಿಳಿಸಿದ್ದರು.
ಶೆಟ್ಟರ್- ಸವದಿ ಕ್ಷೇತ್ರದಲ್ಲಿ ಬಿಎಸ್ವೈ ಮತಪ್ರಚಾರ
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ, ಏಪ್ರಿಲ್ 26ರಂದು ಅಥಣಿ, ಕುಡಚಿ ಮತ್ತು ಹುಬ್ಬಳ್ಳಿ-ಧಾರವಾಡದ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರೋಡ್ ಶೋ, ಸಾರ್ವಜನಿಕ ಸಭೆಗಳನ್ನು ನಡೆಸಲಿರುವ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಮತಯಾಚಿಸಲಿದ್ದಾರೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ ಸವದಿ ಸ್ಪರ್ಧಿಸಿದ್ದಾರೆ.
ಬಳಿಕ ಮಧ್ಯಾಹ್ನ 2 ಗಂಟೆಗೆ ಕುಡಚಿಯಲ್ಲಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆ ನಡೆಸಲಿರುವ ಬಿ.ಎಸ್. ಯಡಿಯೂರಪ್ಪ ಪಿ. ರಾಜೀವ್ ಪ್ರಚಾರ ಮಾಡಲಿದ್ದಾರೆ. ಇನ್ನು ಸಂಜೆ 4.15ಕ್ಕೆ ಸವದತ್ತಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದು, ರತ್ನಾ ಮಾಮನಿ ಪರ ಮತ ಕೇಳಲಿದ್ದಾರೆ. ಸಂಜೆ 6.30ಕ್ಕೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಮಹೇಶ್ ಟೆಂಗಿನಕಾಯಿ ಪರ ರೋಡ್ ಶೋ ನಡೆಸಲಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications