ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ; ಅನುಭವಿ ಕಾನೂನು ತಜ್ಞರ ನೇಮಕ,- ಸಿಎಂ
ಹುಬ್ಬಳ್ಳಿ, ಸೆಪ್ಟೆಂಬರ್, 05: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಬಗ್ಗೆ ನವೆಂಬರ್ 23ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಕಸಬಾಪೇಟೆ ಹಾಗೂ ದಕ್ಷಿಣ ಪೊಲೀಸ್ ಠಾಣೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಅಲ್ಲದೇ ಗೋಕುಲ್ ರಸ್ತೆ, ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕು ಸ್ಥಾಪನೆಯನ್ನು ನೇರವೇರಿಸಿದರು. ನಂತರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಗಡಿವಿವಾದದ ಕುರಿತು ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ , ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಸಾಕಷ್ಟು ಅಧ್ಯಯನವನ್ನು ಸಹ ನಡೆಸಲಾಗಿದೆ. ವಾದ ಮಂಡನೆಗೆ ಹಿರಿಯ, ಅನುಭವಿ ವಕೀಲರನ್ನು ನೇಮಿಸಲು ಸೂಚಿಸಲಾಗಿದೆ. ವೃತ್ತಿ ಶಿಕ್ಷಣ ಪ್ರವೇಶಕ್ಕೆ, ಸಿಇಟಿ ಅಂಕ ಪರಿಗಣನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದ ಪ್ರಕಾರ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಡ್ವೊಕೇಟ್ ಜನರಲ್ ಅವರಿಗೆ ನಿರ್ದೇಶನ ನೀಡಲಾಗಿದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಔರಾದ್ಕರ್ ವರದಿ ಜಾರಿ ಬಗ್ಗೆ ಸಿಎಂ ಅಭಿಪ್ರಾಯ
ಪೊಲೀಸ್ ಇಲಾಲೆಖೆಗೆ ಸಂಬಂಧಿಸಿದಂತೆ ನೇಮಕ ಮಾಡಲಾಗಿದ್ದ ಔರಾದ್ಕರ್ ವರದಿ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ಗೋಕುಲ ರಸ್ತೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಪೊಲೀಸರ ವೇತನ ತಾರತಮ್ಯದ ಬಗ್ಗೆ ಸರ್ಕಾರಕ್ಕೆ ಸಲ್ಲಿಸಿದ ರಾಘವೇಂದ್ರ ಔರಾದ್ಕರ್ ವರದಿ ಸಂಪೂರ್ಣವಾಗಿ ಜಾರಿ ಆಗಿದೆ. ಪೊಲೀಸ್ ಸಿಬ್ಬಂದಿಗೆ ಸಂಬಂಧಿಸಿದ ರಾಘವೇಂದ್ರ ಔರಾದ್ಕರ್ ವರದಿ ಅನುಷ್ಠಾನಗೊಳ್ಳುತ್ತಿದೆ. ಸಿಬ್ಬಂದಿಯೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯ ಆಗಿದೆ ಎಂದರು.

ಹಿರಿಯ ಅಧಿಕಾರಿ ರಾಘವೇಂದ್ರ ಔರಾದ್ಕರ್ ಪೊಲೀಸರ ವೇತನ ತಾರತಮ್ಯದ ಬಗ್ಗೆ ಸ್ಟಡಿ ಮಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿತ್ತು. ಅದು ಜಾರಿ ಆಗಿದೆ. ಇನ್ನು ಸಿಇಟಿ ಕುರಿತು ಸಾಕಷ್ಟು ಗೊಂದಲ ಉಂಟಾಗಿದ್ದು, ಶೀಘ್ರವೇ ಇದರ ಬಗ್ಗೆ ಮುಖ್ಯ ಕಾರ್ಯದರ್ಶಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಜೊತೆಗೆ ಮಾತನಾಡಿ ಬಗೆಹರಿಸಲಾಗುವುದು ಎಂದರು.

ನಗರದಲ್ಲಿ ಪೊಲೀಸ್ ಠಾಣೆಗಳ ಉದ್ಘಾಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ವೇಳೆ ಮಾತನಾಡಿ, ನೇಕಾರನಗರ ಬಾಣತಿಕಟ್ಟೆ ಸರ್ಕಲ್ ಬಳಿ ಕಸಬಾಪೇಟ ಪೊಲೀಸ್ ಠಾಣೆಯ ನೂತನ ಕಟ್ಟಡ, ಗಂಗಾಧರ ನಗರ ಕೆಇಬಿ ಕಛೇರಿ ಹತ್ತಿರ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ, ಗೋಕುಲ ರಸ್ತೆ, ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ನೂತನ ಕಟ್ಟಡ ಶಂಕುಸ್ಥಾಪನೆ ನಡೆಯಲಿದೆ ಎಂದಿದದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರ ಅಭಿವೃದ್ಧಿ ಆಗುತ್ತಿದೆ ಎಂದರು. ನಂತರ ತಡರಾತ್ರಿ ಸಹ ಹುಬ್ಬಳ್ಳಿ-ಧಾರವಾಡದಲ್ಲಿ ಕುಡಿಯುವ ನೀರಿನ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.












Click it and Unblock the Notifications