ಜಾರಕಿಹೊಳಿ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್
ಹುಬ್ಬಳ್ಳಿ, ನವೆಂಬರ್ 8: ಹಿಂದೂ ಪದದ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಇದೀಗ ವಿವಾದವಾಗಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಜಾರಕಿಹೊಳಿ ಹೇಳಿಕೆಯಿಂದ ಪಕ್ಷಕ್ಕೆ ಹಾನಿಯಾಗುವುದಿಲ್ಲ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಪದ ಕುರಿತು ಸತೀಶ್ ಜಾರಕಿಹೊಳಿ ಯಾವ ಪದಕೋಶದಲ್ಲಿ ನೋಡಿ ಹೇಳಿದ್ದಾರೆ ಗೊತ್ತಿಲ್ಲ. ಅವರ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಇನ್ನು ಸತೀಶ್ ಜಾರಕಿಹೋಳಿ ಹೇಳಿಕೆಯ ಬಗ್ಗೆ ಶಿಸ್ತು ಕ್ರಮದ ಕುರಿತು ಮುಂದೆ ಆಲೋಚನೆ ಮಾಡುತ್ತೇವೆ. ಆದರೆ ಸತೀಶ್ ಜಾರಕಿಹೊಳಿ ಹೇಳಿಕೆಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಕುರಿತು ರಾಷ್ಟ್ರೀಯ ನಾಯಕರು ಸಹ ಪ್ರತಿಕ್ರಿಯಿಸಿದ್ದಾರೆ ಎಂದರು.

ಸತೀಶ್ ಜಾರಕಿಹೊಳಿ ಈ ರೀತಿ ಹೇಳಿರುವುದು ಸರಿಯಲ್ಲ
ಈ ಬಗ್ಗೆ ಮಾತು ಮುಂದುವರಿಸಿದ ಅವರು, ನಾನೂ ಸಹ ಒಬ್ಬ ಹಿಂದೂ. ಸರ್ವ ಜನಾಂಗ ಸರ್ವ ಧರ್ಮಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವುದು ಕಾಂಗ್ರೆಸ್ ಸಿದ್ಧಾಂತ. ಸತೀಶ್ ಜಾರಕಿಹೊಳಿ ಈ ರೀತಿ ಹೇಳಿರುವುದು ಸರಿಯಲ್ಲ. ಅವರ ಹೇಳಿಕೆಯನ್ನು ನಾವು ಒಪ್ಪಲ್ಲ, ಅದನ್ನು ಖಂಡಿಸುತ್ತೇವೆ. ಇಂತಹ ವೈಯಕ್ತಿಕ ಹೇಳಿಕೆಯನ್ನು ಸಹಿಸಲು ಆಗಲ್ಲ. ಅವರು ಮನೆಗಳಲ್ಲಿ ಏನು ಬೇಕಾದರೂ ಮಾತನಾಡಿಕೊಳ್ಳಲಿ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾತನಾಡಬಾರದು ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಭಾರತ್ ಜೋಡೋದಿಂದ ದೇಶದ ರಾಜಕಾರಣವೇ ಬದಲಾಗುತ್ತಿದೆ.
ಬಿಜೆಪಿ ಸರ್ಕಾರದ ಜನ ಸಂಕಲ್ಪ ಯಾತ್ರೆ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿಯವರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಜನ ಸಂಕಲ್ಪ ಮಾಡಿದ್ದಾರೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಬ್ರಿಟಿಷರ ವಿರುದ್ಧ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಆದರೆ ನರೇಂದ್ರ ಮೋದಿ ಅವರು ಭಾರತ್ ತೋಡೋ ಮಾಡುತ್ತಿದ್ದಾರೆ. ಇದೆ ನಮಗೂ ಬಿಜೆಪಿಯವರಿಗೂ ಇರುವ ವ್ಯತ್ಯಾಸ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಇನ್ನು ಭಾರತ್ ಜೋಡೋದಿಂದ ದೇಶದ ರಾಜಕಾರಣವೇ ಬದಲಾಗುತ್ತಿದೆ. ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಹೀಗಾಗಿ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಬೇರೆ ಬೇರೆ ರೀತಿ ಪ್ರಯತ್ನಿಸುತ್ತಿದ್ದಾರೆ. ಅವರ ಪ್ರಯತ್ನ ಅವರು ಮುಂದುವರಿಸಲಿ. ನಮ್ಮ ಸಾಮಾಜಿಕ ಜಾಲತಾಣ ಮೂಲಕ ನಾವು ಜನರನ್ನು ಮುಟ್ಟುತ್ತಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ
ಇನ್ನು ಹುಬ್ಬಳ್ಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತು ಎಸೆಯಲು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಜನ, ಸಂಕಲ್ಪ ಮಾಡಿದ್ದಾರೆ. ಆದ್ದರಿಂದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಜನರು ಬರುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ. ಹೀಗಾಗಿ ಸಮಾವೇಶಕ್ಕೆ ಬಂದವರನ್ನು ಕೂಡಿ ಹಾಕುವ ಪರಿಸ್ಥಿತಿ ಬಿಜೆಪಿಯವರದ್ದಾಗಿದೆ. ಮಂಡ್ಯದಲ್ಲಿ ಸಮಾವೇಶಕ್ಕೆ ಬಂದ ಯಾರೂ ಎದ್ದು ಹೋಗಬಾರದು ಎಂದು ಬೀಗ ಹಾಕಿದ್ದರು ಎಂದು ಬಿಜೆಪಿ ಪಕ್ಷದ ವಿರುದ್ಧ ಲೇವಡಿ ಮಾಡಿದ್ದಾರೆ.

ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ
ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪಿನ ಪ್ರತಿಯನ್ನು ನಾನು ಇನ್ನೂ ಓದಿಲ್ಲ. ಸಂವಿಧಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಪ್ರತ್ಯೇಕ ಮೀಸಲಾತಿ ಕೊಡಲು ಅವಕಾಶ ಇಲ್ಲ. ಸಂವಿಧಾನದಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ಕೊಡಬೇಕು ಎಂದು ಉಲ್ಲೇಖಿಸಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಓದಿದ ನಂತರ ಈ ಬಗ್ಗೆ ಮತ್ತೆ ಪ್ರತಿಕ್ರಿಯಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications