ಹುಬ್ಬಳ್ಳಿಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ನಡೆದಿದ್ಯಾಕೆ...?
ಹುಬ್ಬಳ್ಳಿ, ಜನವರಿ 05: ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದು ಮಹತ್ವದ ಸರ್ವ ಪಕ್ಷದ ಸಭೆಯನ್ನು ಮೂರು ಪಕ್ಷಗಳ ಜನಪ್ರತಿನಿಧಿಗಳು ನಡೆಸಿದ್ದು, ಪಕ್ಷಾತೀತವಾಗಿ ಯೋಜನೆ ಬಗ್ಗೆ ಕೆಲಸ ಮಾಡಲಾಗುವುದು ಎಂದು ಸಭೆಯಲ್ಲಿ ಸರ್ವ ಸಮ್ಮತ ತೀರ್ಮಾನಕ್ಕೆ ಬರಲಾಗಿದೆ.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸರ್ಕ್ಯೂಟ್ ಹೌಸದಲ್ಲಿ ನಡೆದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳ ಸಭೆ ನಡೆಯಿತು. ಒಂದು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚೆ ನಡೆಸಿದ ನಾಯಕರು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ವಿನಿಮಯ ಮಾಡಿಕೊಂಡರು.
ಕಳಸಾ ಬಂಡೂರಿ ಹೋರಾಟಗಾರರಿಂದ ಪ್ರಧಾನಿ ಮೋದಿ ಪ್ರತಿಕೃತಿ ದಹನ
ಸಭೆ ಬಳಿಕ ಮಾತನಾಡಿದ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಮಹದಾಯಿ ವಿಚಾರವಾಗಿ ಮುಂದಿನ ಕ್ರಮದ ಬಗ್ಗೆ ಸಂಪೂರ್ಣವಾಗಿ ಚರ್ಚಿಸಲಾಗಿದ್ದು, ಸಂಬಂಧಪಟ್ಟ ನೀರಾವರಿ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು. ಈಗ ಮಹದಾಯಿ ವಿಚಾರವಾಗಿ ಉತ್ತಮ ವಾತಾವರಣ ನಿರ್ಮಾಣವಾಗಿದ್ದು, ಇದೊಂದು ಉತ್ತಮ ಹೆಜ್ಜೆ ಆಗಿದ್ದು, ಬಹಳ ಶಾಂತ ರೀತಿಯಲ್ಲಿ ಸಭೆಯಲ್ಲಿ ಹಲವಾರು ವಿಚಾರಗಳ ಬಗ್ಗೆ ತಿರ್ಮಾನ ಕೈಗೊಳ್ಳಲಾಗಿದೆ ಎಂದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಮಾತನಾಡಿ, "ಮಹದಾಯಿ ವಿಚಾರವಾಗಿ ಈ ಸಭೆ ಮೊದಲ ದಿಟ್ಟ ಹೆಜ್ಜೆಯಾಗಿದ್ದು, ಮಹದಾಯಿ ಸಮಸ್ಯೆಯ ಪರಿಹಾರಕ್ಕೆ ತಾರ್ಕಿಕ ಅಂತ್ಯ ಹಾಕಲು ಈ ಸಭೆ ಮಹತ್ವವನ್ನು ಪಡೆದಿದೆ" ಎಂದರು.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, "ಮಹದಾಯಿ ಯೋಜನೆ ವಿಚಾರವಾಗಿ ಕರೆದಿರುವ ಜನಪ್ರತಿನಿಧಿಗಳ ಸಭೆಯಲ್ಲಿ ಸರ್ವಪಕ್ಷಗಳ ಜನಪ್ರತಿನಿಧಿಗಳು ಭಾಗಿಯಾಗಿದ್ದು, ಪಕ್ಷಾತೀತವಾಗಿ ಕೆಲಸ ಮಾಡಲು ಈ ಸಭೆ ಸಹಾಯಕಾರಿ ಆಗಿದೆ. ಸಿದ್ದರಾಮಯ್ಯ ಕೂಡಾ ಸಭೆಯ ತಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದು, ಎಲ್ಲ ಶಾಸಕರು ಮಹದಾಯಿ ವಿಚಾರವಾಗಿ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಅಂತಿಮ ಪರಿಹಾರ ಕಂಡುಕೊಳ್ಳಲಾಗುವುದು" ಎಂದರು.
ಮೋದಿ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ: ಹೊರಟ್ಟಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಪಕ್ಷಾತೀತವಾಗಿ ಯಾವುದೇ ದೋಷಾರೋಪಣೆ ಮಾಡದೇ, ಪಕ್ಷಗತ ರಾಜನೀತಿ ಬಿಟ್ಟು ಒಟ್ಟಿಗೆ ಸೇರಿರುವುದು ಒಳ್ಳೆಯ ವಿಚಾರ ಎಂದರು.