ಹುಬ್ಬಳ್ಳಿ: ಗೋ ಬ್ಯಾಕ್ ಮೋದಿ ಎಂದ ರೈತ ಹೋರಾಟಗಾರರ ಬಂಧನ
ಹುಬ್ಬಳ್ಳಿ, ಫೆಬ್ರವರಿ 10: ಮಹದಾಯಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಿವ್ಯ ಮೌನ ವಹಿಸಿರುವುದನ್ನು ಖಂಡಿಸಿ ಇಂದು ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಳಸಾ ಬಂಡೂರಿ ಹೋರಾಟ ಸಮಿತಿ, ಕಾಂಗ್ರೆಸ್ ಕಿಸಾನ್ ಘಟಕದ ಸದಸ್ಯರು ಪ್ರತಿಭಟನೆ ನಡೆಸಿ, 'ಗೋ ಬ್ಯಾಕ್ ಮೋದಿ' ಎಂದು ಘೋಷಣೆ ಕೂಗಿದರು.
ಕಪ್ಪು ಪಟ್ಟಿ ಧರಿಸಿದ್ದ ಮಹದಾಯಿ ಹೋರಾಟಗಾರರು ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು. ಹೋರಾಟಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೆಎಲ್ ಇ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಹುಬ್ಬಳ್ಳಿಯ ಕೆಎಲ್ಇ ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ಸಮಾವೇಶದಲ್ಲಿ ಮೋದಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರು ಭಾರಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಪೊಲೀಸರು ಮುಂಚಿತವಾಗಿ ಪ್ರಮುಖ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಗಬ್ಬೂರ ಬೈಪಾಸ್ ಬಳಿಯ ಕೆಎಲ್ಇ ಜಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ರಾಜ್ಯದ ಮೊದಲ ಲೋಕಸಭೆ ಚುನಾವಣೆ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.
ಸಮಾವೇಶಕ್ಕೆ ಆಗಮಿಸುವವರಿಗೆ ಪಾರ್ಕಿಂಗ್ ವ್ಯವಸ್ಥೆ, ಊಟೋಪಚಾರದ ವ್ಯವಸ್ಥೆ ಸೇರಿ ವಿವಿಧ ಕೆಲಸ ಕಾರ್ಯಗಳಿಗೆ 32 ಸಮಿತಿಗಳನ್ನು ರಚಿಸಲಾಗಿದ್ದು, ಮಾಜಿ ಡಿಸಿಎಂ ಆರ್ ಅಶೋಕ್ ಅವರು ಉಸ್ತುವಾರಿ ವಹಿಸಿಕೊಂಡಿದ್ದರು.
ಉತ್ತರ ಕನ್ನಡ, ಹಾವೇರಿ ಹಾಗೂ ಧಾರವಾಡ ಸೇರಿ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಬೃಹತ್ ರ್ಯಾಲಿಯಲ್ಲಿ ಎರಡು ಲಕ್ಷದಷ್ಟು ಜನ ಸೇರಿದ್ದಾರೆ.