ಬಿಜೆಪಿಯವರು ತಮ್ಮ ಮೇಲಿನ ಭ್ರಷ್ಟಾಚಾರ ಆರೋಪ ಮುಚ್ಚಿಕೊಳ್ಳಲು ಕುಕ್ಕರ್ ಬ್ಲಾಸ್ಟ್ ವಿಚಾರ ತೆಗೆದಿದ್ದಾರೆ: ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ, ಡಿಸೆಂಬರ್, 19: ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದು, ಮುಂದಿನ ಐದಾರು ದಿನಗಳ ಬಳಿಕ ಸ್ಪಷ್ಟತೆ ತಿಳಿಯಲಿದೆ. ಅಲ್ಲಿಯವರೆಗೆ ಈ ಬಗ್ಗೆ ಏನೂ ಹೇಳುವುದಿಲ್ಲ ಎಂದು ಮಂಗಳೂರ ಡಿಸಿಪಿ ಹೇಳಿಕೆ ಕೊಟ್ಟಿದ್ದಾರೆ. ಆದರೂ ಸಹ ಡಿಜಿಪಿ ಆರೋಪಿಯನ್ನು ತನಿಖೆ ನಡೆಸದೇ ಭಯೋತ್ಪಾದಕ ಎಂದು ಯಾವ ಆಧಾರದ ಮೇಲೆ ಹೇಳಿಕೆ ಕೊಟ್ಟಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಬ್ಬಳ್ಳಿಯಲ್ಲಿ ಒತ್ತಾಯಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ, ಮತಕಳವು ಪ್ರಕರಣವನ್ನು ವಿಷಯಾಂತರ ಮಾಡಲು ಮಂಗಳೂರು ಕುಕ್ಕರ್ ಪ್ರಕರಣವನ್ನು ಬಳಸಿಕೊಂಡರು ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದರು. ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದರೂ ಏನಾನ್ನಾದರೂ ಪ್ರಚಾರ ಮಾಡಲಿ. ನಮ್ಮದು ಕಾಂಗ್ರೆಸ್ ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷವಾಗಿದೆ. ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆಯನ್ನು ದಮನ ಮಾಡಿದ್ದೇವೆ. ಮಂಗಳೂರು ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದೀವಿ ಎಂದರು.
ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬಿಜೆಪಿ ಭ್ರಷ್ಟಾಚಾರ, ಮತಗಳ್ಳತನ, ಬೋಗಸ್ ವೋಟರ್ ಸೃಷ್ಟಿಯನ್ನು ಮುಚ್ಚುವ ಪ್ರಯತ್ನವನ್ನು ಮಾಡುತ್ತಿದೆ. ಬಿಜೆಪಿಯವರು ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವುದಕ್ಕೆ ಕುಕ್ಕರ್ ಬ್ಲಾಸ್ಟ್ ಪ್ರಕರಣ ಮುಂದೆ ತಂದಿದ್ದಾರೆ. ಇನ್ನು ಗೃಹ ಸಚಿವರು ಇದೇ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ. ಅಮಾಯಕರ ಅವಾರ್ಡ್ ತೆಗೆದುಕೊಳ್ಳಲು ನಾನು ಸಿದ್ದನಿದ್ದೇನೆ. ಅಶೋಕ್ ಡೇಟ್, ಟೈಮ್ ಫಿಕ್ಸ್ ಮಾಡಲಿ ಎಂದು ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.

ಜ. 2ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ
ಇಂದು ಸಂಜೆ ಬೆಳಗಾವಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ್ ಅವರ ಮಧ್ಯಸ್ಥಿಕೆಯಲ್ಲಿ ಚುನಾವಣೆ ಆಕಾಂಕ್ಷಿಗಳು ಸಲ್ಲಿಸಿರುವ ಅರ್ಜಿಗಳ ಪರಾಮರ್ಶೆ ನಡೆಯಲಿದೆ. ಹಾಗೂ ಪದಾಧಿಕಾರಿಗಳ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಇದೇ ಡಿಸೆಂಬರ 30ರಂದು ವಿಜಯಪುರದಲ್ಲಿ ಹಾಗೂ ಜನವರಿ 2 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಜನವರಿ 8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶವನ್ನು ನಡೆಸಲಾಗುವುದು ಎಂದರು.

ಪಕ್ಷದ ತೀರ್ಮಾನವೇ ಅಂತಿಮ
ಬಸ್ ಯಾತ್ರೆ ರೂಪರೇಷೆ ಕಾರ್ಯಸೂಚಿಯನ್ನು ಬೆಳಗಾವಿಯಲ್ಲಿ ಪ್ರಮುಖರೊಂದಿಗೆ ಸಭೆ ಸೇರಿ ತಿರ್ಮಾಣ ಮಾಡಲಾಗುವುದು. ಇನ್ನು ಮಹದಾಯಿ ವಿಚಾರವಾಗಿ ಜನವರಿ 2 ಹುಬ್ಬಳ್ಳಿಯಲ್ಲಿ ಹೋರಾಟ ಸಮಾವೇಶ ಮಾಡುತ್ತೇವೆ. ಸಿದ್ದರಾಮಯ್ಯ ಬಸ್ ಯಾತ್ರೆಗೆ ಕಂಡೀಷನ್ ಹಾಕಿದ್ದಾರೆ ಅನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ಕಂಡೀಷನ್ ಹಾಕಲ್ಲ, ಪಕ್ಷದ ತೀರ್ಮಾನವೇ ಅಂತಿಮವಾಗಿದೆ. ಹಾಗೆಯೇ ಪ್ರತಿ ವಿಚಾರದಲ್ಲೂ ಸಿದ್ದರಾಮಯ್ಯ, ಹರಿಪ್ರಸಾದ್ ಸೇರಿದಂತೆ ಕಾರ್ಯಾಧ್ಯಕ್ಷರ ಜೊತೆಗೆ ಚರ್ಚಿಸುತ್ತಿದ್ದೇನೆ ಎಂದರು.












Click it and Unblock the Notifications