ಶ್ರೀಕೃಷ್ಣ ಮಠದಲ್ಲಿ ಇಫ್ತಾರ್, ಪೇಜಾವರ ಶ್ರೀ ಕಾರ್ಯಕ್ಕೆ ಉಗ್ರಪ್ಪ ಶ್ಲಾಘನೆ
ಹುಬ್ಬಳ್ಳಿ, ಜೂನ್ 29 : ರಂಜಾನ್ ಹಬ್ಬದ ಪ್ರಯುಕ್ತ ಇದೇ ಮೊದಲ ಬಾರಿಗೆ ಮುಸ್ಲಿಂ ಬಾಂಧವರಿಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಫ್ತಾರ್ ಆಯೋಜಿಸಿದ್ದ ಪೇಜಾರ ಶ್ರೀ ಕಾರ್ಯಕ್ಕೆ ವಿಧಾನಪರಿಷತ್ ಸದಸ್ಯ ಹಾಗೂ ಅತ್ಯಾಚಾರ ತಡೆ ಸಲಹಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಶ್ಲಾಘಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರ ಈ ನಡೆಗೆ ವಿರೋಧ ಸರಿಯಲ್ಲ. ಹಿಂದೂತ್ವದ ಬಗ್ಗೆ ಅರಿವಿಲ್ಲದ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ ಹೊರತು ಬಹುತೇಕರು ಅವರಿಗೆ ಬೆಂಬಲ ಸೂಚಿಸಿದ್ದಾರೆ ಎಂದು ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಕಾರ್ಯವನ್ನು ಶ್ಲಾಘಿಸಿದಲ್ಲದೆ ಶ್ರೀಗಳ ವಿರುದ್ಧ ಪ್ರತಿಭಟನೆಗೆ ಕರೆ ಕೊಟ್ಟಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನಡೆಯನ್ನು ತೀವ್ರವಾಗಿ ಖಂಡಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ಪೇಜಾವರರಿಂದ ಐತಿಹಾಸಿಕ ಇಫ್ತಾರ್ ಕೂಟ
ಹಕ್ಕು ಬಾದ್ಯತಾ ಸಮಿತಿಯಿಂದ ಶಿಕ್ಷೆಗೆ ಗುರಿಯಾಗಿರುವ ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಅವರ ಪ್ರಕರಣದ ಸಂಬಂಧ ಬಹಿರಂಗ ಹೇಳಿಕೆ ನೀಡಿದರೆ ಅದು ನಿಂದನೆಯಾಗುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗದ ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವುದು ಸರಿಯಾದ ಮಾರ್ಗ ಎಂದ ಉಗ್ರಪ್ಪ ಈ ಕುರಿತು ಹೆಚ್ಚು ಪ್ರತಿಕ್ರಿಯಿಸಲು ನಿರಾಕರಿಸಿದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯೂಡಿಯೂಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಉಗ್ರಪ್ಪ, ಯಡಿಯೂರಪ್ಪ ಅವರ ರೈತ ಪರ ನಿಲುವು ಡೋಂಗಿತನ ಎಂದು ಕುಟುಕಿದರು.
ಬಿಎಸ್ ವೈ ಸಿಎಂ ಆಗಿದ್ದಾಗ ಸಾಲಮನ್ನಾ ಕುರಿತು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದ್ದ ಅವರು, ಇದೀಗ ಬಿಜೆಪಿ ಸಂಸದರೊಂದಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ರೈತರ ಸಾಲಮನ್ನಾ ಮಾಡಿಸಲಿ ಎಂದು ಸವಾಲು ಹಾಕಿದರು.