ಹುಬ್ಬಳ್ಳಿ: ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲೆಗೆ ಬೀಗ ಜಡಿದ ಗ್ರಾಮಸ್ಥರು
ಹುಬ್ಬಳ್ಳಿ, ಜೂನ್ 28: ಶಾಲೆ ಆರಂಭವಾಗಿ ಇನ್ನೂ ಒಂದು ತಿಂಗಳು ಕೂಡ ಪೊರೈಸಿಲ್ಲ. ಈ ನಡುವೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆಯೊಂದು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಮೊರಬ ಗ್ರಾಮದ ಸರ್ಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ.
ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಗ್ರಾಮಸ್ಥರು, ಶಾಲಾ ಸಮಿತಿಯ ಸದಸ್ಯರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮದ ದೈಹಿಕ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನು ಮೊರಬದ ಶಾಲೆಯಲ್ಲಿ 1 ರಿಂದ 7ನೇ ತರಗತಿಯವರೆಗೆ ಸುಮಾರು 200 ಮಕ್ಕಳಿದ್ದಾರೆ. ಶತಮಾನ ಕಂಡ ಶಾಲೆಯಾಗಿದೆ. ಮೊದಲೇ ಮುಖ್ಯ ಶಿಕ್ಷಕರ ನೇಮಕಾತಿಯಾಗಿಲ್ಲ. ಇದರ ಮರಳಿ ಯಾರನ್ನು ನೇಮಕ ಮಾಡಿಲ್ಲ. ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮೊದಲಿನಿಂದಲೂ ವಿಶೇಷ ಸಾಧನೆ ಮಾಡಿ, ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರರು, ರಾಜ್ಯಮಟ್ಟದ ಕಬ್ಬಡಿ ಆಟದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಲೆಯಲ್ಲಿ ಸುವ್ಯವಸ್ಥಿತವಾದ ಮೈದಾನ ಇದೆ. ಇಷ್ಟು ಇದ್ದಾಗಲೂ ದೈಹಿಕ ಶಿಕ್ಷಣ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಶಾಲೆಯಲ್ಲಿ ಉಳಿದೆಲ್ಲ ವ್ಯವಸ್ಥೆ ಇದ್ದರೂ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದ್ದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ತೊಂದರೆ ಆಗುತ್ತಿದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಮಾಡಬೇಕು. ಮುಖ್ಯ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಡಿಡಿಪಿಐ ಹಾಗೂ ಬಿಇಓ ಅವರು ಗಮನ ಹರಿಸಬೇಕು ಎಂದು ಪ್ರತಿಭಟನಾ ನಿರತ ಗ್ರಾಮಸ್ಥರನ್ನು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಬಿಇಓ ಎಸ್.ಬಿ. ಮಲ್ಲಾಡ್ ಅವರು ಆಗಮಿಸಿ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಗ್ರಾಮಸ್ಥರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರೆಯಿತು. ಪ್ರತಿಭಟನೆಯ ಭಾಗವಾಗಿ ಮಕ್ಕಳು ಮೈದಾನದಲ್ಲಿಯೇ ಕುಳಿತು ಓದಿದರು. ಪ್ರತಿಭಟನೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ಗಂಗಪ್ಪ ಕಾಲವಾಡ, ಸದಸ್ಯ ಮಂಜುನಾಥ ರೆಡ್ಡಿ ಕರಡ್ಡಿ, ಬಸವರಾಜ ಶಿರಗುಪ್ಪಿ, ಗ್ರಾಪಂ ಅಧ್ಯಕ್ಷ ನಾಗರಾಜ ಮನಗೂಳಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.












Click it and Unblock the Notifications