ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಹೃದಯಾಘಾತದಿಂದ ನಿಧನ
Recommended Video
ಹುಬ್ಬಳ್ಳಿ. ಮಾರ್ಚ್ 22: ರಾಜ್ಯ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ (57) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೃದಾಯಾಘಾತಕ್ಕೆ ಒಳಗಾಗಿದ್ದ ಶಿವಳ್ಳಿ ಅವರನ್ನು ಹುಬ್ಬಳ್ಳಿಯ ಲೈಫ್ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿಗೆ ತೀವ್ರ ಹೃದಯಾಘಾತ
ಧಾರವಾಡದ ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಶಿವಳ್ಳಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ ತಿಂಗಳ ಆರಂಭದಲ್ಲಷ್ಟೇ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಬಳಿಕ ಚೇತರಿಸಿಕೊಂಡು ಸರ್ಕಾರದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು.
ಫೆಬ್ರವರಿ 3ರಂದು ಹುಬ್ಬಳ್ಳಿಯ ಕರಡಿಕೊಪ್ಪ ಗ್ರಾಮದಲ್ಲಿ ಕೆಲಸ ಮುಗಿಸಿಕೊಂಡು ಮರಳುವ ಸಂದರ್ಭದಲ್ಲಿ ಅವರು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಒಮ್ಮೆ ಗೆದ್ದ ಶಾಸಕ ಸತತವಾಗಿ ಮತ್ತೆ ಆಯ್ಕೆಯಾದ ದಾಖಲೆಯೇ ಇಲ್ಲದ ಕುಂದಗೋಳ ಕ್ಷೇತ್ರದಲ್ಲಿ ಸತತ ಎರಡು ಬಾರಿ ಬಾರಿ ಗೆದ್ದು ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿ ಇತಿಹಾಸ ಸೃಷ್ಟಿಸಿದ್ದರು.
ಮೂರು ಬಾರಿ ಶಾಸಕರಾಗಿದ್ದ ಅವರು, 1994ರಲ್ಲಿ ರಾಜಕೀಯ ಪ್ರವೇಶಿಸಿದ್ದರು. 1999ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು. 2008ರ ಚುನಾವಣೆಯಲ್ಲಿ ಆರು ಸಾವಿರ ಮತಗಳಿಂದ ಸೋಲು ಅನುಭವಿಸಿದ್ದರು. 2013, 2018ರ ಚುನಾವಣೆಗಳಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದರು.