ಹುಬ್ಬಳ್ಳಿ: ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಮುಸ್ಲೀಮರ ವಿರೋಧ
ಹುಬ್ಬಳ್ಳಿ, ಜನವರಿ 05: ಹುಬ್ಬಳ್ಳಿಯ ಬಾಣತಿಕಟ್ಟೆ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ಗೆ ಸ್ಥಳೀಯ ಮುಸ್ಲಿಂ ಸಮುದಾಯದ ಸದಸ್ಯರು ಹಾಗೂ ಕೆಲವು ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಹೌದು, ಸಿದ್ದರಾಮಯ್ಯ ಸರ್ಕಾರದ ಬಹು ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಹುಬ್ಬಳ್ಳಿಯಲ್ಲಿ ಮುಸ್ಲೀಮರಿಂದ ವಿರೋಧ ವ್ಯಕ್ತವಾಗಿದೆ. ಆದರೆ ಅದಕ್ಕೆ ಕಾರಣ ಯೋಜನೆಯ ಗುಣಮಟ್ಟ ಅಲ್ಲ.
ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗೆ ಹುಬ್ಬಳ್ಳಿ ಪಾಲಿಕೆ ಮೀಸಲಿಟ್ಟ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮ ಸ್ಥಳೀಯ ಮುಸ್ಲಿಂ ಅಲ್ಪಸಂಖ್ಯಾತರಿಗೆ ಬೇಸರ ತಂದಿದೆ. ಹಾಗಾಗಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಖಂಡಿಸಿ ಮುಸ್ಲಿಂ ಸಮುದಾಯದವರು ಹಾಗೂ ವಿದ್ಯಾರ್ಥಿಗಳು ಇಲ್ಲಿನ ಬಾಣತಿಕಟ್ಟೆ ವೃತ್ತದಲ್ಲಿ ನಡೆಯುತ್ತಿರುವ ಕಾಮಗಾರಿಗೆ ಅಡ್ಡಿಪಡಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಿದಾಗಲೇ ಮುಸ್ಲಿಂ ಹಾಗೂ ಇನ್ನು ಕೆಲವರು ಇದಕ್ಕೆ ಅಡ್ಡಿಪಡಿಸಿದ್ದರು, ಆದರೆ ಇದನ್ನು ಪಾಲಿಕೆ ಅಧಿಕಾರಿಗಳು ಪರಿಗಣಿಸಿರಲಿಲ್ಲ.
ಇಂದು ಬೆಳಿಗ್ಗೆ ಕಾಮಗಾರಿ ಪ್ರಾರಂಭ ಮಾಡಲು ಕಾರ್ಮಿಕರು ಮತ್ತು ಅಧಿಕಾರಿಗಳು ಬಂದಾಗ ಸ್ಥಳಕ್ಕೆ ಬಂದ ಮುಸ್ಲಿಂ ಸಮುದಾಯದ ಮಂದಿ ಹಾಗೂ ಕೆಲವು ವಿದ್ಯಾರ್ಥಿಗಳು ಕಾಮಗಾರಿಗೆ ಅಡ್ಡಿಯುಂಟು ಮಾಡಿದರು ಹಾಗಾಗಿ ಪಾಲಿಕೆ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ನಡೆಸುತ್ತಿದ್ದರು. ಆದರೆ ಪ್ರತಿರೋದ ಜಾಸ್ತಿಯಾಗಿದ್ದರಿಂದ ಕೆಲಸ ಸ್ಥಗಿತಗೊಳಿಸಲಾಯಿತು.












Click it and Unblock the Notifications