ಹುಬ್ಬಳ್ಳಿ : ಸಂಜೆ 5 ಗಂಟೆಗೆ ನರೇಂದ್ರ ಮೋದಿ ಸಮಾವೇಶ
ಹುಬ್ಬಳ್ಳಿ, ಫೆಬ್ರವರಿ 10 : ಪ್ರಧಾನಿ ನರೇಂದ್ರ ಮೋದಿ 2019ರ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಲ್ಲಿ ಇಂದು ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯಲ್ಲಿ ಸಂಜೆ 5 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ.
ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಹತ್ತಿರದ ಕೆ.ಎಲ್.ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಂಜೆ 5 ಗಂಟೆಗೆ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಸುಮಾರು ಮೂರು ಲಕ್ಷ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುಂತಾದ ನಾಯಕರು ಸಮಾವೇಶದ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. ಮುಖ್ಯ ವೇದಿಕೆ ಹೊರತುಪಡಿಸಿ ಎರಡು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ.
ಆಸನ ವ್ಯವಸ್ಥೆ , ಕುಡಿಯುವ ನೀರು, ಊಟದ ವಿಭಾಗ , ಪಾರ್ಕಿಂಗ್ , ಭದ್ರತೆ, ಹಾಗು ಇನ್ನಿತರ ವ್ಯವಸ್ಥೆಗಳ ಕುರಿತು ಪ್ರಹ್ಲಾದ್ ಜೋಶಿ ಅವರು ಮಾಹಿತಿ ಪಡೆದರು. ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದ್ದು, ಸಮಾವೇಶ ಮಾದರಿಯಾಗಲಿದೆ.

ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಧಾರವಾಡದ ಐಐಟಿ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಚಿಕ್ಕಜಾಜೂರು ರೈಲ್ವೆ ಡಬ್ಲಿಂಗ್ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಆದರೆ, ಈ ಸರ್ಕಾರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕೃತ ಆಹ್ವಾನ ನೀಡಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಮಾತ್ರ ಅವರ ಹೆಸರು ಹಾಕಲಾಗಿದೆ. ಆದ್ದರಿಂದ, ಅವರು ಕಾರ್ಯಕ್ರಮಕ್ಕೆ ಗೈರಾಗುವ ಸಾಧ್ಯತೆ ಇದೆ.

ಚುನಾವಣಾ ಪ್ರಚಾರ
ವಿವಿಧ ಯೋಜನೆಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು 2019ರ ಲೋಕಸಭಾ ಚುನಾವಣಾ ಪ್ರಚಾರಕ್ಕೆ ರಾಜ್ಯದಲ್ಲಿ ಚಾಲನೆ ನೀಡಲಿದ್ದಾರೆ. ಕೆ.ಎಲ್.ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ
ಕರ್ನಾಟಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ಪ್ರಧಾನಿ ಹಲವು ಬಾರಿ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ರೈತರ ಸಾಲಮನ್ನಾ ಯೋಜನೆ ರೈತರಿಗೆ ತಲುಪಿಲ್ಲ ಎಂದು ಆರೋಪಿಸಿದ್ದಾರೆ. ಇಂದಿನ ಸಮಾವೇಶದಲ್ಲಿಯೂ ಮೋದಿ ಮೈತ್ರಿ ಸರ್ಕಾರವನ್ನು ಟೀಕಿಸುವ ಸಾಧ್ಯತೆ ಇದೆ.

20+ ಸ್ಥಾನದಲ್ಲಿ ಗೆಲುವು
2019ರ ಲೋಕಸಭಾ ಚುನಾವಣೆಯಲ್ಲಿ 20+ ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಕರ್ನಾಟಕ ಬಿಜೆಪಿ ತಂತ್ರ ರೂಪಿಸಿದೆ. ಇಂದು ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ಸಿಗಲಿದೆ. ಫೆ.19ರಂದು ಮೋದಿ ಪುನಃ ಕರ್ನಾಟಕಕ್ಕೆ ಆಗಮಿಸಲಿದ್ದು, ಕಲಬುರಗಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.












Click it and Unblock the Notifications