ನಿಖಿಲ್ ಗೆ ರಾಜಕೀಯ ಜೀವನದಲ್ಲಿ ಉಜ್ವಲ ಭವಿಷ್ಯವಿದೆ:ಬಸವರಾಜ ಹೊರಟ್ಟಿ
ಹುಬ್ಬಳ್ಳಿ , ಮಾರ್ಚ್ 18: ನಿಖಿಲ್ ಕುಮಾರಸ್ವಾಮಿ ಒಬ್ಬ ಪ್ರತಿಭಾವಂತ ವ್ಯಕ್ತಿ. ಅವರಿಗೆ ರಾಜಕೀಯ ಜೀವನದಲ್ಲಿ ಉಜ್ವಲ ಭವಿಷ್ಯವಿದೆ. ನಿಖಿಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಗೆಲ್ಲಲೇಬೇಕು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಅಭಿವೃದ್ಧಿ ಮಾಡುತ್ತಾರೆ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಆಯೋಜಿಸಿದ್ದ ಧಾರವಾಡ ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಟೀಕೆಗಳನ್ನು ಮಾಡದೇ ತಮಗೆ ವಹಿಸಿರುವ ಕೆಲಸಗಳನ್ನು ಮಾಡಬೇಕು ಎಂದು ಮನವಿ ಮಾಡಿದರು.
ನಮಗೆ ಮಂಡ್ಯ ಕ್ಷೇತ್ರ ಬಹಳ ಮಹತ್ವದ್ದು. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ರೆ ಮಾತ್ರ ನಿಖಿಲ್ ಗೆಲ್ಲಲು ಸಾಧ್ಯ. ಟೀಕೆ ಟಿಪ್ಪಣಿ ಮೂಲಕ ಕಾಲಹರಣ ಮಾಡದೇ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ನಿಷ್ಠಾವಂತರಾಗಿ ಕಾರ್ಯ ನಿರ್ವಹಿಸಬೇಕು. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶತಾಯಗತಾಯ ಶ್ರಮಿಸಬೇಕು ಎಂದು ಬಸವರಾಜ ಹೊರಟ್ಟಿ ಕಾರ್ಯಕರ್ತರಿಗೆ ಮನವಿ ಮಾಡಿದರು.

ಸುಮಲತಾ ಅವರು ನಮ್ಮ ಸಹೋದರಿಯ ಸಮಾನ, ಈ ಹಿನ್ನೆಲೆಯಲ್ಲಿ ನಾವು ಯಾರ ಬಗ್ಗೆ ಕೂಡ ಟೀಕೆ ಟಿಪ್ಪಣಿ ಮಾಡುವುದಿಲ್ಲ ಎಂದ ಬಸವರಾಜ ಹೊರಟ್ಟಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಘಟಕಗಳನ್ನು ಸೃಷ್ಟಿಸುವ ಮೂಲಕ ಕಾರ್ಯಕರ್ತರ ಸಹಕಾರದಿಂದ ಸಾರ್ವಜನಿಕ ಸಹಭಾಗಿತ್ವಕ್ಕೆ ಶ್ರಮಿಸಲಾಗುತ್ತದೆ. ಅಲ್ಲದೆ ಪ್ರತಿಯೊಬ್ಬರು ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳ ಜಯಕ್ಕೆ ಬೆಂಬಲ ಸೂಚಿಸಬೇಕು ಎಂದರು.
ಬಿಜೆಪಿಯವರು ಕೇವಲ ಭಾಷಣ ಮಾಡುತ್ತಾರೆ ವಿನಃ ಯಾವುದೇ ಕೆಲಸ ಕಾರ್ಯ ಮಾಡುತ್ತಿಲ್ಲ. ಒಳ್ಳೆಯ ಕೆಲಸ ಕಾರ್ಯ ಮಾಡುವರಿಗೆ ಪ್ಲೆಕ್ಸ್, ಬ್ಯಾನರ್ ಅವಶ್ಯಕತೆಯಿಲ್ಲ. ಅಲ್ಲದೆ ಜನರಿಗೆ ಮೋಸ ಮಾಡುವುದು ಹೇಗೆ ಎಂಬುದನ್ನು ಬಿಜೆಪಿಯವರನ್ನು ನೋಡಿ ಕಲಿಯಬೇಕು ಎಂದು ಹೊರಟ್ಟಿ ವಾಗ್ದಾಳಿ ನಡೆಸಿದರು.












Click it and Unblock the Notifications