'ದೇವೇಗೌಡರು, ಕುಮಾರಸ್ವಾಮಿಯಿಂದ ಉ ಕರ್ನಾಟಕಕ್ಕೆ ಮುಂಚಿಂದಲೂ ಅನ್ಯಾಯ'
ಹುಬ್ಬಳ್ಳಿ, ಜುಲೈ 7: ಕುಮಾರಸ್ವಾಮಿ ಹಾಗೂ ದೇವೇಗೌಡರಿಂದ ಉತ್ತರ ಕರ್ನಾಟಕಕ್ಕೆ ಮೊದಲಿನಿಂದಲೂ ಅನ್ಯಾಯವಾಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್ನಲ್ಲಿ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಅನುದಾನ ನೀಡಲಾಗಿದೆ. ಜೆಡಿಎಸ್ ಗೆ ಈ ಭಾಗದಲ್ಲಿ ಸೀಟು ಬಂದಿಲ್ಲ ಎಂದು ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಯವರು ಜನರ ಕಣ್ಣಿಗೆ ಮಣ್ಣೆರಚಿದ್ದಾರೆ. ಒಂದು ಕೈಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಆರ್ಥಿಕ ಸ್ಥಿತಿ ಹದಗೆಡುತ್ತಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನವರು ರಾಜ್ಯವನ್ನು ಸಾಲಗಾರ ರಾಜ್ಯವಾಗಿ ಮಾಡುತ್ತಿದ್ದಾರೆ. ಕೇಂದ್ರದ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ದೂರಿದರು.

ರಾಹುಲ್ ಗಾಂಧಿಯವರೇ ನಿಮ್ಮ ಸರಕಾರ ಮಾಡಿದ ಸಾಲ ನಾವು ತೀರಿಸಿದ್ದೇವೆ. ಆದರೂ ನೀವು ಮೋದಿ ಸರಕಾರಕ್ಕೆ ಚಾಲೆಂಜ್ ಮಾಡಿದ್ದೀರಿ. ಈಗ ನಿಮ್ಮ ಸಹಭಾಗಿತ್ವದ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದೆ. ಇದಕ್ಕೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದರು.
ಮೂರ್ನಾಲ್ಕು ಜಿಲ್ಲೆಗೆ ಸೀಮಿತ ಬಜೆಟ್
ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಬಜೆಟ್ ಹಾಗೂ ಸಚಿವ ಸಂಪುಟದಲ್ಲಿಯೂ ಅನ್ಯಾಯ ಮುಂದುವರೆದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿಯವರು ಮಂಡ್ಯ, ಹಾಸನ, ರಾಮನಗರಕ್ಕೆ ಸೀಮಿತವಾದ ಬಜೆಟ್ ಮಂಡಿಸಿದ್ದಾರೆ. ಇದರಿಂದ ಉತ್ತರ ಕರ್ನಾಟಕ, ಕರಾವಳಿಗೆ ಅನ್ಯಾಯವಾಗಿದೆ. ಸರಿಪಡಿಸುವ ಕೆಲಸ ಮಾಡದಿದ್ದರೆ ಅನಾಹುತ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅವರಿಗೆ ನಿಜವಾಗಿಯೂ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಕಾಳಜಿ ಇದ್ದರೆ ಅವರ ಜೊತೆ ನಾವು ಕೈ ಜೋಡಿಸುತ್ತೇವೆ. ಇದು ಹೀಗೇ ಮುಂದುವರಿದರೆ ತಾರತಮ್ಯದ ಕಾರಣ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಾಗುತ್ತದೆ. ಬೇರೆ ರಾಜ್ಯ ಮಾಡುವುದೇ ಸರಿ ಎನ್ನುವ ಅಭಿಪ್ರಾಯ ಬರುತ್ತದೆ. ಅನ್ಯಾಯ ಸರಿಪಡಿಸುವಂತೆ ಸರಕಾರದ ಮೇಲೆ ಒತ್ತಡ ತರುತ್ತೇವೆ. ಬಜೆಟ್ ಬಗ್ಗೆ ಸದನದಲ್ಲಿ ಹೋರಾಟ ಮಾಡುತ್ತೇವೆ ಎಂದರು.
ಬಜೆಟ್ನಲ್ಲಿ ನಂಜುಂಡಪ್ಪ ವರದಿ ಬಗ್ಗೆ ಪ್ರಸ್ತಾವನೆ ಮಾಡಿಲ್ಲ. ಹೊಸ ತಾಲೂಕುಗಳಿಗೆ ಅನುದಾನ ನೀಡಿಲ್ಲ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಸಿಎಂಗೆ ಪತ್ರ ಬರೆದ ಎಚ್.ಕೆ ಪಾಟೀಲ್ ಅವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಚ್.ಕೆ.ಪಾಟೀಲ್ ಮಂತ್ರಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷರೂ ಆಗಿಲ್ಲ. ಸ್ಥಾನಮಾನ ಸಿಗದಿದ್ದಕ್ಕೆ ಬಂಡಾಯ ಎದ್ದಿರಬೇಕು. ಯಾಕೆ ಬಂಡಾಯ ಎದ್ದಿದ್ದಾರೆ ಎಂದು ಎಚ್.ಕೆ. ಪಾಟೀಲ್ ಸ್ಪಷ್ಟೀಕರಣ ನೀಡಬೇಕು ಎಂದು ಹೇಳಿದರು.












Click it and Unblock the Notifications