ಪ್ರತ್ಯೇಕ ರಾಜ್ಯಕ್ಕಾಗಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿ, ಆಗಸ್ಟ್ 02 : ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಒತ್ತಾಯಿಸಿದ ಗುರುವಾರ ಕರೆ ನೀಡಿದ್ದ ಬಂದ್ ವಾಪಸ್ ಪಡೆಯಲಾಗಿದೆ. ಆದರೆ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಿ ಕರೆ ನೀಡಿದ್ದ ಉತ್ತರ ಕರ್ನಾಟಕ ಬಂದ್ ವಿಚಾರದಲ್ಲಿ ವಿವಿಧ ಸಂಘಟನೆಗಳಲ್ಲೇ ಒಡಕು ಕಾಣಿಸಿಕೊಂಡಿದೆ. ಆದ್ದರಿಂದ, ಬಂದ್ ವಾಪಸ್ ಪಡೆಯಲಾಗಿದೆ.
ಆದರೆ, ಗುರುವಾರ ಹುಬ್ಬಳ್ಳಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ನಗರದ ಚೆನ್ನಮ್ಮ ವೃತ್ತದಲ್ಲಿ ಉತ್ತರ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಉತ್ತರ ಕರ್ನಾಟಕ ರಚನೆ ವಿಚಾರದಲ್ಲಿ ನಮ್ಮ ಹೋರಾಟ ಅಚಲ, ಬಂದ್ ವಾಪಸ್ ಪಡೆದಿರಬಹುದು. ಆದರೆ, ಹೋರಾಟ ನಿಲ್ಲುವುದಿಲ್ಲ ಎಂದು ಸಂಘಟನೆಯ ಸದಸ್ಯರು ಹೇಳಿದರು.
'ಪ್ರತ್ಯೇಕ ರಾಜ್ಯ ರಚನೆ ವಿಚಾರದಲ್ಲಿ ನಮ್ಮ ನಿರ್ಧಾರ ಅಚಲ. ನಾವು ಇಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತೇವೆ' ಎಂದು ಉತ್ತರ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ಹೇಳಿದರು.
ಉತ್ತರ ಕರ್ನಾಟಕ ರೈತ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ವಿರೂಪಾಕ್ಷ ಕಳ್ಳಿಮನಿ ಮಾತನಾಡಿ, 'ನಮ್ಮ ಹೋರಾಟ ಈಗ ಆರಂಭವಾಗಿದೆ. ನಮ್ಮ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ' ಎಂದರು.












Click it and Unblock the Notifications