NWKRTC: ಹುಬ್ಬಳ್ಳಿ ಪ್ರಯಾಣಿಕರೆ ಇಲ್ಲಿ ಗಮನಿಸಿ; ಶಿವರಾತ್ರಿಗೆ ವಿಶೇಷ ಬಸ್ ವ್ಯವಸ್ಥೆ
ಹುಬ್ಬಳ್ಳಿ, ಮಾರ್ಚ್ 03: ಈ ತಿಂಗಳ ಮಾರ್ಚ್ 8 ರಂದು ಮಹಾ ಶಿವರಾತ್ರಿ ಹಬ್ಬ ಹಾಗೂ ಸಾಲು ಸಾಲು ಸಾರ್ವಜನಿಕ ರಜೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಮಾರ್ಚ್ 8 ರಂದು ಶುಕ್ರವಾರ ಮಹಾ ಶಿವರಾತ್ರಿ, ಮಾರ್ಚ್ 9 ರಂದು ಎರಡನೇ ಶನಿವಾರ ಹಾಗೂ ಮಾರ್ಚ್ 10 ರಂದು ಭಾನುವಾರ ಹೀಗೆ ಸಾಲು ಸಾಲು ಸಾರ್ವಜನಿಕ ರಜೆಗಳು ಬಂದಿವೆ. ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ. ಅವರ ಅನುಕೂಲಕ್ಕಾಗಿ ಮಾರ್ಚ್ 7 ರಿಂದ ಮಾರ್ಚ್ 11ರ ವರೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಸರ್ಕಾರಿ, ಖಾಸಗಿ ಉದ್ಯೋಗಿಗಳು, ಇತರೆ ಕಾರ್ಯ ನಿಮಿತ್ಯ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪರ ಊರುಗಳಲ್ಲಿ ನೆಲೆಸಿರುವ ಹಲವರು ಶಿವರಾತ್ರಿ ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಮಾರ್ಚ್ 7 ರ ಗುರುವಾರ ಹಾಗೂ ಮಾರ್ಚ್ 8 ಶುಕ್ರವಾರ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಅದೇ ರೀತಿ ರಜೆ ಮುಗಿಸಿ ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಮಾರ್ಚ್ 10ರ ಭಾನುವಾರ ಹಾಗೂ ಮಾರ್ಚ್ 11 ರಂದು ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಮಾರ್ಚ್ 7 ರಿಂದ ಮಾರ್ಚ್ 11ರ ವರೆಗೆ ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲಾಗುತ್ತದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಮುಂಗಡ ಬುಕಿಂಗ್ ವ್ಯವಸ್ಥೆ
ಹಬ್ಬದ ವಿಶೇಷ ಬಸ್ಸುಗಳಿಗೆ https://www.ksrtc.in ಅಥವಾ KSRTC Mobile App ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಟಿಕೆಟ್ನಲ್ಲಿ ನಾಲ್ಕು ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.












Click it and Unblock the Notifications