ಅ.24 ರಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
ಹುಬ್ಬಳ್ಳಿ, ಅಕ್ಟೋಬರ್ 21: ಬಂಗಾಳಕೊಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಂತೂ ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ.
ಅ.21 ಬುಧವಾರದಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರವಾಹ ಪೀಡಿತ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.
ಕಲಬುರಗಿ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಯಡಿಯೂರಪ್ಪ!
ಅದೇ ರೀತಿ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಭೇಟಿ ನೀಡಲಿದ್ದಾರೆ. ಖುದ್ದು ಅವರೇ ಈ ವಿಷಯ ತಿಳಿಸಿದ್ದು, ಅಕ್ಟೋಬರ್ 24, 25 ರಂದು ಪ್ರವಾಹ ಪೀಡಿತ ರಾಯಚೂರು, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ ಎಂದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತರಹ ನಾನು ಮೇಲಿನಿಂದಲೇ ವೈಮಾನಿಕ ಸಮೀಕ್ಷೆ ನಡೆಸುವುದಿಲ್ಲ. ಕಾರಿನಲ್ಲಿ ಹೋಗಿ ಜನರ ಸಂಕಷ್ಟ ಆಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ಹೇಳಿದರು.
ರಾಜ್ಯ ಸರ್ಕಾರವು ಪ್ರವಾಹ ಪೀಡಿತರಿಗೆ ಕಳೆದ ವರ್ಷದ ಪರಿಹಾರ ಹಣವನ್ನೇ ಬಿಡುಗಡೆ ಮಾಡಿಲ್ಲ ಎಂದು ದೂರಿದ ಮಾಜಿ ಸಿಎಂ ಸಿದ್ದರಾಮಯ್ಯ, ಈ ಬಾರಿಯೂ ಜನರು ಪ್ರವಾಹದಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಜನರ ನೋವಿಗೆ ಸ್ಪಂದಿಸಬೇಕಾಗಿದೆ ಎಂದರು. ನಾನು ಬಿ.ಎಸ್ ಯಡಿಯೂರಪ್ಪನಂತೆ ವೈಮಾನಿಕ ಸಮೀಕ್ಷೆ ನಡೆಸದೇ, ಜನರ ಬಳಿಯೇ ಹೋಗುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ನಡೆಸುವ ಕುರಿತು ಈ ಹಿಂದೆ ಹೇಳಿಕೆ ನೀಡಿದ್ದ ಸಿದ್ದರಾಮಯ್ಯನವರು, ಮುಖ್ಯಮಂತ್ರಿಯಾದವರು ವೈಮಾನಿಕ ಸಮೀಕ್ಷೆ ಎಂದುಕೊಂಡು ವಿಮಾನದಲ್ಲಿ ಸುತ್ತಾಡಿದರೆ ಜನರ ಕಷ್ಟ ತಿಳಿಯುತ್ತಾ? ಎಂದು ಪ್ರಶ್ನಿಸಿದರು.
Recommended Video
ಅಧಿಕ ಪ್ರವಾಹವಿರುವ ಸಂದರ್ಭ ಅಥವಾ ರಸ್ತೆಯಲ್ಲಿ ತೆರಳಲು ಸಾಧ್ಯವಿಲ್ಲದ ಸಂದರ್ಭದಲ್ಲಿ ವಿಮಾನದಲ್ಲಿ ಹೋಗಲಿ. ಅದು ಬಿಟ್ಟು ಹೀಗೆ ಮೇಲೆಯಿಂದ ವೈಮಾನಿಕ ಸಮೀಕ್ಷೆ ಎಂದರೆ ಜನರ ಕಷ್ಟ ಹೇಗೆ ತಿಳಿಯುತ್ತೆ ಎಂದು ವಾಗ್ದಾಳಿ ನಡೆಸಿದರು.