Panchamasali Reservation: ಶಿಗ್ಗಾಂವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಆಕ್ರೋಶ
ಹಾವೇರಿ, ಜನವರಿ, 13: 2ಎ ಮೀಸಲಾತಿ ಬೇಕು ಪಂಚಮಸಾಲಿ ಸಮುದಾಯದವರು ಹಾಗೂ ಸ್ವಾಮೀಜಿಗಳು ಕಳೆದ 2 ವರ್ಷದಿಂದ ಮೌನ ಪ್ರತಿಭಟನೆ ಮಾಡಿಕೊಂಡೇ ಬಂದಿದ್ದಾರೆ. ಇಂದು ಮತ್ತೆ ಸಿಎಂ ಬಸವರಾಜ ಬೊಮ್ಮಾಯಿ ತವರು ಶಿಗ್ಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ಮಾಡಿದರು.
ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಪಟ್ಟು ಹಿಡಿದು ಸರ್ಕಾರಕ್ಕೆ ಎಚ್ಚರಿಸುತ್ತಲೇ ಬಂದಿದ್ದಾರೆ. ಇದೀಗ ಪಂಚಮಸಾಲಿ ಸಮುದಾಯದವರೆಲ್ಲ ಸೇರಿ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರಾದ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಕೈಮೀರಿ ಹೋಗಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಶುರುವಾಗಿದೆ.
ಪ್ರಧಾನಿ ಮೋದಿ ಬಳಿ ಬಂದ ಬಾಲಕ ಯಾರು?: ಆತನ ಉದ್ದೇಶ ಏನಾಗಿತ್ತು?
ಮಾತು ತಪ್ಪಿದ ಸಿಎಂ ಎಂದು ಘೋಷಣೆ
ಮಾತೃ ಮೇಲೆ ಆಣೆ ಮಾಡಿ ಮಾತು ತಪ್ಪಿದ ಸಿಎಂ ಬಸವರಾಜ ಬೊಮ್ಮಾಯಿ ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಂದೆಡೆ ಜನರು ಪೊಲೀಸರು ಹಾಕಿರುವ ಬ್ಯಾರಿಕೇಡ್ ತಳ್ಳಿ ರಸ್ತೆ ತಡೆದು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದರು. ರಾಜ್ಯ ಸರ್ಕಾರ ಮಾತ್ರ ಮೀಸಲಾತಿ ಕೇಳುತ್ತಿರುವ ಸಮಾಜದ ಜನರಿಗೆ ಮೂಗಿಗೆ ತುಪ್ಪ ಒರೆಸುವ ಹಾಗೇ 2ಸಿ 2ಡಿ ಮೀಸಲಾತಿ ಘೋಷಣೆ ಮಾಡಿದೆ ಎಂದು ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ
ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ಮುಂದಾಗಿತ್ತು. ಜನರು ಮಾತು ತಪ್ಪಿದ ಸಿಎಂ ಎಂದು ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಶಿಗ್ಗಾಂವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಸಿಎಂ ಬೊಮ್ಮಾಯಿ ಅವರ ಪ್ರತಿಕೃತಿ ದಹನವನ್ನೂ ಮಾಡಿದರು. ಅಲ್ಲದೆ ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದರು. ಇದರಿಂದ ಅರ್ಧ ಕಿಲೋ ಮೀಟರ್ನಷ್ಟು ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.
ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ
ಮತ್ತೊಂದೆಡೆ ಶಾಸಕ ಬಸವನಗೌಡ ಯತ್ನಾಳ, ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ ಸೇರಿ ರಸ್ತೆಯಲ್ಲಿ ಕುಳಿತು ಸಿಎಂ ವಿರುದ್ಧ ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರದಿಂದ ನಮ್ಮ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡುತ್ತವೆ ಎಂದು ರಾಜ್ಯ ಸರ್ಕಾರ ವಿರುದ್ಧ ಕಿಡಿಕಾರಿದರು. ಸಿಎಂ ವಿರುದ್ಧ ಮತ್ತೆ ನಾಳೆಯಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.