ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ
ಹುಬ್ಬಳ್ಳಿ, ಆಗಸ್ಟ್, 29: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅವಕಾಶ ಕೊಡುವಂತೆ ಹಲವು ದಿನಗಳಿಂದ ವಿವಿಧ ಸಂಘಟನೆಗಳು ಪಟ್ಟು ಹಿಡಿದಿದ್ದವು. ಈದ್ಗಾ ಮೈದಾನಲ್ಲಿ ಗಣೇಶೋತ್ಸವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಈ ಬಗ್ಗೆ ಪ್ರತಿಕ್ರಿಯಿಸಿ, ಈದ್ಗಾ ಮೈದಾನಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ 6 ಹಿಂದೂಪರ ಸಂಘಟನೆಗಳಿಂದ ಮನವಿ ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿತ್ತು. ಸಮಿತಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡುವಂತೆ ವರದಿ ನೀಡಿತ್ತು. 6 ಸಂಘಟನೆಗಳಲ್ಲಿ ಒಂದು ಸಂಘಟನೆಗೆ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶವನ್ನು ನೀಡಲಾಗಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಮಿತಿಯು ವರದಿಯನ್ನು ಸಲ್ಲಿಸಿದೆ. ಅಲ್ಲದೇ ಈ ಬಗ್ಗೆ ಎಲ್ಲ ರೀತಿಯ ಸಮಾಲೋಚನೆ ನಡೆಸಿ 6ರಲ್ಲಿ ಒಂದು ಸಂಘಟನೆಗೆ ಮಾತ್ರ ಮೂರು ದಿನ ಗಣೇಶೋತ್ಸವ ಆಚರಣೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು.

ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಅವಕಾಶ
ಹಲವು ದಿನಗಳಿಂದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕು ಎಂದು ವಿವಿಧ ಸಂಘಟನೆಗಳು ಪ್ರತಿಭಟನೆಯನ್ನಯ ನಡೆಸಿದ್ದವು. ಪ್ರತಿಭಟನೆಗಳಿಂದ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡದಲ್ಲಿ ಆತಂಕದ ವಾತಾವರಣ ಸೃಷ್ಟಿ ಆಗಿತ್ತು. ಈ ಒಂದು ಬಿಕ್ಕಟ್ಟನ್ನು ಪರಿಹರಿಸಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು, ಮೇಯರ್ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಪರದಾಡುತ್ತಿದ್ದರು. ಕೊನೆಗೂ ಗೊಂದಲಗಳಿಗೆ ಅಂತ್ಯವಾಡಿದ್ದು, ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ.

ಪಾಲಿಕೆಯಿಂದ ನಾಳೆ ಅಂತಿಮ ನಿರ್ಧಾರ
ನಗರದಲ್ಲಿಂದು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ನಿರ್ಧಾರದ ಕುರಿತು ಸುಧೀರ್ಘ ಸಭೆ ನಡೆಸಲಾಗಿತ್ತು. ಈಗಾಗಲೇ ಆರು ಸಂಘಟನೆಗಳು ಅನುಮತಿ ಕೋರಿ ಮನವಿ ಸಲ್ಲಿಸಿದ್ದವು. ಇದರಲ್ಲಿ ಒಂದು ಸಂಘಟನೆಯನ್ನು ಆಯ್ಕೆ ಮಾಡಿ ಮೂರು ದಿನ ಗಣೇಶೋತ್ಸವ ಆಚರಣೆ ಮಾಡಲು ಅನುಮತಿ ನೀಡಲಾಗಿದೆ. ಯಾರಿಗೆ ಅನುಮತಿ ಕೊಡಬೇಕು ಎಂಬುದು ನಾಳೆ ತೀರ್ಮಾನ ಆಗಲಿದೆ.
11 ಅರ್ಜಿಗಳು ಅನುಮತಿ ನೀಡಬಾರದೆಂಬ ಮನವಿ ಪತ್ರ ಬಂದಿದ್ದವು. ಸರ್ವ ಪಕ್ಷಗಳು ಈ ಬಗ್ಗೆ ಸತತವಾಗಿ ಸಭೆ ಮಾಡಿ ಅಂತಿಮ ನಿರ್ಣಯ ತೆಗೆದುಕೊಂಡಿವೆ. ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಸಮಿತಿ ವರದಿ ಕೊಟ್ಟಿದೆ. ಹೀಗಾಗಿ ಮೂರು ದಿನಗಳ ಕಾಲ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದೆ. ಶಾಂತಿ ಹಾಗೂ ಸೌಹಾರ್ದತೆಯಿಂದ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ. ಒಂದು ಸಂಘಟನೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದ್ದು, ಉಳಿದ ಸಂಘಟನೆಗಳು ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.

ಗಣೇಶೋತ್ಸವ ಆಚರಿಸಲು ಕೆಲವು ಸಂಘಟನೆಗಳು ಪಟ್ಟು
ಇನ್ನು ಗಣೇಶೋತ್ಸವ ಆಚರಿಸಲು ಕೆಲವು ಸಂಘಟನೆಗಳು ಪಟ್ಟು ಹಿಡಿದಿವೆ. ಕೆಲವು ಸಂಘಟನೆಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಹುಬ್ಬಳ್ಳಿ ಧಾರವಾಡ ಮಹಾನಗರದ ಸಂಘಟನೆಗಳಿಗೆ ಹಾಗೂ ಪೊಲೀಸ್ ಕಮೀಷನರೇಟ್ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. ಯಾವುದೇ ರೀತಿಯಲ್ಲಿ ಅವಘಡ ಸಂಭವಿಸದೇ ಸೂಕ್ತ ರೀತಿಯಲ್ಲಿ ಹಬ್ಬವನ್ನು ಆಚರಣೆ ಮಾಡಬೇಕು ಎಂದು ಮನವಿ ಮಾಡಿದರು.

ಜನರಿಗೆ ಪ್ರಲ್ಹಾದ್ ಜೋಶಿ ಮನವಿ
ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, "ಪಾಲಿಕೆಯಿಂದ ಒಳ್ಳೆಯ ನಿರ್ಣಯ ತೆಗೆದುಕೊಂಡಿದ್ದಾರೆ. ಪಾಲಿಕೆಯ ನಿರ್ಣಯವನ್ನ ನಾನು ಸ್ವಾಗತ ಮಾಡುತ್ತೇನೆ. ಸೌಹಾರ್ದತೆಯಿಂದ ಗಣೇಶೋತ್ಸವ ಆಚರಣೆ ಮಾಡುವುದು ಸೂಕ್ತವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ಎಡಿಜಿಪಿಗೆ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸಹ ನಾನು ಸೂಕ್ತ ಸಲಹೆ ನೀಡಿದ್ದೇನೆ. ಈಗಾಗಲೇ ಎಲ್ಲಾ ರೀತಿಯ ಕಾನೂನು ಸುವ್ಯವಸ್ಥೆ ಆಗಿದೆ. ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಭದ್ರತೆ ಕಾರ್ಯ ನಡೆಯುತ್ತಿದೆ. ಗಣೇಶ ಹಬ್ಬವನ್ನು ಸೌಹಾರ್ದತೆಯಿಂದ ಮಾಡೋಣ. ಇದರಿಂದ ಕಳೆದುಕೊಳ್ಳುವುದೇನೂ ಇಲ್ಲ. ಎಲ್ಲಾ ಶಾಸಕರು, ಸದಸ್ಯರು, ಅಧಿಕಾರಿಗಳ ಗಮನಕ್ಕೆ ತಂದು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಜನರು ಯಾವುದೇ ಉದ್ವೇಗಕ್ಕೊಳಗಾಗದೇ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು," ಎಂದು ಮನವಿ ಮಾಡಿದರು.












Click it and Unblock the Notifications