ಕೈ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ, ಓರ್ವ ಸಾವು
ಚಿಕ್ಕಬಳ್ಳಾಪುರ, ಏಪ್ರಿಲ್ 27: ಗೌರಿಬಿದನೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತನೊಬ್ಬನ ಕೊಲೆ ಆಗಿದೆ.
ಗೌರಿಬಿದನೂರು ತಾಲ್ಲೂಕಿನ ಹೊಸೂರು ಹೋಬಳಿ ಕೋಟಾಲದಿನ್ನೆಯ ಹೊರವಲಯದ (ಬೊಮ್ಮಶೆಟ್ಟಿಹಳ್ಳಿ ಸಮೀಪ) ಬಾರ್ ಒಂದರಲ್ಲಿ ಗುರುವಾರ ರಾತ್ರಿ 9:30 ಸುಮಾರಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಜೆಡಿಎಸ್ ಕಾರ್ಯಕರ್ತ ಹಳೆಉಪ್ಪಾರಹಳ್ಳಿ ನಿವಾಸಿ ರಾಮರೆಡ್ಡಿ (27) ಮೃತಪಟ್ಟಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ಹಳೆಉಪ್ಪಾರಹಳ್ಳಿ ಗ್ರಾಮದ ರಮೇಶ್ (33) ಹಾಗೂ ಈತನ ಸ್ನೇಹಿತರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಕ್ಷುಲಕ ವಿಚಾರಕ್ಕಾಗಿ ಮಾತಿನ ಚಕಮಕಿ ನಡೆದಿದೆ. ರಮೇಶ್ ಗುಂಪು ರಾಮರೆಡ್ಡಿ ಅವರ ಗುಂಪಿನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಳೆಉಪ್ಪಾರಹಳ್ಳಿ ಗ್ರಾಮದ ರಮೇಶ್ ಪೊಲೀಸ್ ದಾಖಲಾತಿಗಳಲ್ಲಿ ರೌಡಿಶೀಟರ್ ಆಗಿದ್ದಾನೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ರಾಮರೆಡ್ಡಿ, ನರೇಂದ್ರ (32), ಮಂಜುನಾಥ್(28), ಅಂಬರೀಷ್ (30) ಎಂಬುವರು ಗಾಯಗೊಂಡಿದ್ದಾರೆ. ಇದರಲ್ಲಿ ನರೇಂದ್ರ ಸ್ಥಿತಿ ಚಿಂತಾಜನಿಕವಾಗಿದ್ದು, ಅವರಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ರಾಮರೆಡ್ಡಿ ಅವರಿಗೆ ಇತ್ತೀಚೆಗಷ್ಟೇ ಮದುವೆ ನಿಶ್ಚಿತಾರ್ಥವಾಗಿತ್ತು. ಮೇ.5 ರಂದು ಮದುವೆ ನಿಗದಿಯಾಗಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಆರೋಪಿ ರಮೇಶ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕಬಳ್ಳಾಪುರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಖಂಡಿಸಿ ನಗರದಲ್ಲಿ ಜೆಡಿಎಸ್ ತಾಲ್ಲೂಕು ಘಟಕ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳುತ್ತಿದ್ದು, ಪಟ್ಟಣಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಗಮಿಸಲಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.












Click it and Unblock the Notifications