ಹಜ್ ಯಾತ್ರಿಗಳಿಗೆ ನೀಡುವ ಸೌಲಭ್ಯ ಅಯ್ಯಪ್ಪ ಸ್ವಾಮಿ ಯಾತ್ರಿಕರಿಗೆ ನೀಡಲಿ
ಹುಬ್ಬಳ್ಳಿ, ಡಿಸೆಂಬರ್, 20 : ಮುಸ್ಲಿಂ ಸಮುದಾಯದ ಹಜ್ ಯಾತ್ರಾರ್ಥಿಗಳಿಗೆ ನೀಡುವ ಸೌಲಭ್ಯಗಳನ್ನು ಅಯ್ಯಪ್ಪ ಮಾಲಾಧಾರಿಗಳಿಗೂ ನೀಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಮಂಗಳವಾರ ನೂರಾರು ಅಯ್ಯಪ್ಪ ಮಾಲಾಧಾರಿಗಳು ಪ್ರತಿಭಟನೆ ನಡೆಸಿದರು.
ಸ್ಥಳೀಯ ದಾಜೀಬಾನ ಪೇಟೆಯ ತುಳಜಾಭವಾನಿ ಮಂದಿರದಿಂದ ಆರಂಭವಾದ ಮೆರವಣಿಗೆ ತಹಸೀಲ್ದಾರ್ ಕಚೇರಿಗೆ ತಲುಪಿತು. ಈ ಸಂದರ್ಭದಲ್ಲಿ ಮಾತನಾಡಿದ ಮುತಾಲಿಕ್, ಹಜ್ ಯಾತ್ರಿಗಳಿಗೆ ನೀಡುವ ಸೌಲಭ್ಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಯ್ಯಪ್ಪ ಮಾಲಾಧಾರಿಗಳಿಗೆ ನೀಡಬೇಕು.
ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ಹೋಗುತ್ತಾರೆ. ಆದರೆ, ಅವರಿಗೆ ಯಾವುದೇ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿಲ್ಲ. ಮುಸ್ಲಿಮರಿಗೆ ಹಜ್ ಯಾತ್ರೆಗೆ ಹೋಗಲು ಸಬ್ಸಿಡಿ ನೀಡುತ್ತಿದೆ.
ಅದೇ ರೀತಿ ಅಯ್ಯಪ್ಪ ಮಾಲಾಧಾರಿಗಳಿಗೂ ಸಬ್ಸಿಡಿಯನ್ನು ನೀಡಬೇಕು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಹಜ್ ಭವನದಂತೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅಯ್ಯಪ್ಪ ಮಂದಿರಗಳನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಿಂದ ತೆರಳುವ ಎಲ್ಲಾ ವಾಹನಗಳಿಂದ ಕೇರಳ ಸರ್ಕಾರ ಟೋಲ್ ಸಂಗ್ರಹ ಮಾಡುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಕೇರಳ ಸರ್ಕಾರಕ್ಕೆ ಯಾವುದೇ ಟೋಲ್ ಸಂಗ್ರಹ ಮಾಡದಂತೆ ನಿರ್ದೇಶನ ನೀಡಬೇಕು.
ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರಿಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.ತಹಸೀಲ್ದಾರ್ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.
ನೋಟ್ ಬ್ಯಾನ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಪ್ರತಿಭಟನೆ: ಕೇಂದ್ರ ಸರ್ಕಾರವು 500, 1000 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡಿರುವುದರಿಂದ ಬಡ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಟಿಪ್ಪು ಸುಲ್ತಾನ್ ಅಭಿಮಾನಿಗಳ ವೇದಿಕೆಯಿಂದ ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಇಲ್ಲಿಯ ನೆಹರೂ ಮೈದಾನದಿಂದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ತಹಸೀಲ್ದಾರಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.