ಸೆ. 26ರಂದು ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿ; ಶೆಟ್ಟರ್ ಬೆಂಬಲಿಗರಿಂದ ಅಸಮಾಧಾನ ಏಕೆ?
ಹುಬ್ಬಳ್ಳಿ, ಸೆಪ್ಟೆಂಬರ್, 25: ವಾಣಿಜ್ಯ ನಗರಿಯಲ್ಲಿ ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರಸನ್ಮಾನ ಮಾಡಲಾಗುತ್ತದೆ. ಕಾರ್ಯಕ್ರಮಕ್ಕಾಗಿ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿವೆ. ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವೇದಿಕೆಯ ಮೇಲೆ ಸ್ಥಾನ ನೀಡದಿರುವ ಬಗ್ಗೆ ಬಿಜೆಪಿ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿಬಂದಿದೆ. ವೇದಿಕೆ ಮೇಲಿನ ಗಣ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಅವರ ಹೆಸರನ್ನು ಕೈಬಿಡಲಾಗಿದೆ. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿರಬಹುದು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದ ವಿವರಗಳು ಬಹಿರಂಗಗೊಂಡಿದ್ದು, ವೇದಿಕೆಯಲ್ಲಿ ಒಟ್ಟು 9 ಜನರಿಗೆ ಸ್ಥಾನವನ್ನು ಕಲ್ಪಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಸಿ. ಎನ್. ಅಶ್ವತ್ಥ್ ನಾರಾಯಣ, ಶಂಕರ್ ಪಾಟೀಲ್ ಮುನೇನಕೊಪ್ಪ, ಬೈರತಿ ಬಸವರಾಜ, ಹಾಲಪ್ಪ ಆಚಾರ್ ಹುಬ್ಬಳ್ಳಿ ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ಅವರಿಗೆ ಮಾತ್ರ ವೇದಿಕೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ. ವೇದಿಕೆಯ ಮೇಲೆ ಜಗದೀಶ್ ಶೆಟ್ಟರ್ಗೂ ಅವಕಾಶ ಸಿಗಬೇಕಿತ್ತು ಎನ್ನುವುದು ಪಕ್ಷದ ಕಾರ್ಯಕರ್ತರ ಅಗ್ರಹವಾಗಿದೆ.

ಜಿಮ್ಖಾನಾ ಮೈದಾನದಲ್ಲಿ ಕಾರ್ಯಕ್ರಮ
ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಹುಬ್ಬಳ್ಳಿಗೆ ವಿಮಾನದಲ್ಲಿ ಆಗಮಿಸಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಹುಬ್ಬಳ್ಳಿಯ ಜಿಮ್ಖಾನಾ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೌರಸನ್ಮಾನ ಸ್ವೀಕರಿಸಲಿದ್ದಾರೆ. ನಂತರ ಧಾರವಾಡದ ಸತ್ತೂರಿನಲ್ಲಿರುವ ಐಐಐಟಿ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗ್ಗಡೆ ಅಧ್ಯಕ್ಷತೆಯಲ್ಲಿಇತ್ತೀಚೆಗೆ ಪೂರ್ವ ಸಿದ್ಧತಾ ಸಭೆಯನ್ನು ನಡೆಸಲಾಗಿತ್ತು. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶಿವ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ವಿವರ ಪಡೆದಿದ್ದರು.

ಭರದಿಂದ ಸಾಗಿದ ಸ್ವಚ್ಛತಾ ಕಾಮಗಾರಿ
ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರಸ್ತೆಗಳನ್ನು ತ್ವರಿತಗತಿಯಲ್ಲಿ ದುರಸ್ತಿ ಮಾಡಲಾಗುತ್ತಿದೆ. ಸ್ವಚ್ಛತಾ ಕಾಮಗಾರಿಯೂ ಭರದಿಂದ ಸಾಗಿದೆ. ಹಳೆ ವಿದ್ಯುತ್ ಕಂಬಗಳನ್ನು ತೆರವು ಮಾಡಲಾಗುತ್ತಿದ್ದು, ಹೊಸ ಕಂಬಗಳನ್ನು ನೆಡಲಾಗುತ್ತಿದೆ. ಕಾರ್ಯಕ್ರಮ ನಡೆಯುವ ಜಿಮ್ಖಾನ ಮೈದಾನ ಬಳಿಯ ನಾಲೆಯ ತಡೆಗೋಡೆ ನಿರ್ಮಾಣ ಕಾರ್ಯ ಆರಂಭವಾಗಿದ್ದು, ರಸ್ತೆ ಬದಲಿ ಕಳೆ ಕಿತ್ತು, ದೂಳು ಗುಡಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಯಾರಿಗೆಲ್ಲಾ ಅವಕಾಶ?
ಧಾರವಾಡ ಜಿಲ್ಲೆಗೆ ಈ ಹಿಂದೆಯೂ ಹಲವು ರಾಷ್ಟ್ರಪತಿಗಳು ಭೇಟಿ ನೀಡಿದ್ದರು. ದ್ರೌಪದಿ ಮುರ್ಮು ಅವರು ಜಿಲ್ಲೆಗೆ ಭೇಟಿ ನೀಡುತ್ತಿರುವ 5ನೇ ರಾಷ್ಟ್ರಪತಿ ಆಗಲಿದ್ದಾರೆ. ಈ ಮೊದಲು ಸರ್ವಪಲ್ಲಿ ರಾಧಾಕೃಷ್ಣನ್, ಗ್ಯಾನಿ ಜೇಲ್ಸಿಂಗ್, ಡಾ.ಅಬ್ದುಲ್ ಕಲಾಂ, ಪ್ರಣವ್ ಮುಖರ್ಜಿ ಅವರು ಧಾರವಾಡ ಜಿಲ್ಲೆಗೆ ಬಂದಿದ್ದರು. ರಾಷ್ಟ್ರಪತಿ ಕಾರ್ಯಕ್ರಮವು ಸುಮಾರು ಒಂದೂವರೆ ಗಂಟೆಗಳ ಕಾಲ ನಡೆಯಲಿದೆ. ಸಿದ್ದಾರೂಢರ ಬೆಳ್ಳಿ ಪ್ರತಿಮೆ, ಪುಸ್ತಕ, ಧಾರವಾಡ ಪೇಡಾವನ್ನು ನೆನಪಿನ ಕಾಣಿಕೆಯಾಗಿ ರಾಷ್ಟ್ರಪತಿಯವರಿಗೆ ನೀಡಲಾಗುವುದು. ನಂತರ ಪಾಲಿಕೆಯ 81 ಸದಸ್ಯರೊಂದಿಗೆ ಗ್ರೂಪ್ ಫೋಟೊ ತೆಗೆಯಲಾಗುವುದು. ಕಾರ್ಯಕ್ರಮದಲ್ಲಿ 5,000 ಜನರು ಪಾಲ್ಗೊಳ್ಳಲು ಅವಕಾಶವಿದೆ. 500 ಪೌರಕಾರ್ಮಿಕರು ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಬಳಿಕ ಧಾರವಾಡದ ಐಐಐಟಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 400 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೇಯರ್ ಈರೇಶ ಅಂಚಟಗೇರಿ ಮಾಹಿತಿಯನ್ನು ನೀಡಿದ್ದಾರೆ.

ಹು-ಧಾ ಪಾಲಿಕೆಯಿಂದ ಕಾರ್ಯಕ್ರಮಕ್ಕೆ ಸಿದ್ಧತೆ
ರಾಷ್ಟ್ರಪತಿಯವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಪೌರಸನ್ಮಾನ ಏರ್ಪಡಿಸಲಾಗಿದೆ. ರಾಷ್ಟ್ರಪತಿಗಳಿಗೆ ನೆನಪಿನ ಕಾಣಿಕೆಯಾಗಿ ಸಿದ್ಧಾರೂಢರ 1.5 ಕೆಜಿ ಬೆಳ್ಳಿಯ ಮೂರ್ತಿಯನ್ನು ನೀಡಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಜಿಮ್ಖಾನಾ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.












Click it and Unblock the Notifications